ಉದ್ಯೋಗ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಉದ್ಯೋಗ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಮಂಗಳವಾರ, ಮಾರ್ಚ್ 6, 2012

ಅನಿಯಂತ್ರಿತ ವಲಸೆ ಕಡಿವಾಣಕ್ಕೆ ಬೇಕು ಕಾನೂನು


ತಮಿಳುನಾಡು ರಾಜ್ಯದಲ್ಲಿ ಇತ್ತೀಚಿಗೆ ಹೆಚ್ಚುತ್ತಿರುವ ಪಾತಕ ಕೃತ್ಯಗಳ ಕಡಿವಾಣಕ್ಕಾಗಿ ಅಲ್ಲಿನ ಸರ್ಕಾರ ಹೊರ ರಾಜ್ಯದಿಂದ ತಮಿಳುನಾಡಿಗೆ ವಲಸೆ ಬಂದಿರುವ ಜನರ ಮಾಹಿತಿಯನ್ನು ಕಲೆ ಹಾಕಲು ತೀರ್ಮಾನಿಸಿದೆ ಹಾಗೂ ಈ ಕಾರ್ಯಕ್ಕೆ ಚಾಲನೆ ನೀಡಿದೆ. ಮಾಹಿತಿ ಕಲೆ ಹಾಕುವಲ್ಲಿ ಮುಖ್ಯವಾಗಿ ಕಟ್ಟಡ ಕಾಮಗಾರಿ, ಗಾರ್ಮೆಂಟ್ಸ್ ಹಾಗೂ ಹೋಟೆಲ್ ಉದ್ಯಮದಂಥಹ ಅಸಂಘಟಿತ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಈ ಮಾಹಿತಿ ಕಲೆ ಹಾಕುವಿಕೆಯ ಮುಖ್ಯ ಉದ್ದೇಶ ಕೆಲಸ ಅರಸಿ ಬಂದಿರುವ ವಲಸಿಗರನ್ನು ಪಾತಕಿಗಳಿಂದ ಬೇರ್ಪಡಿಸಿ ನೋಡುವುದಕ್ಕೆ ಸುಲಭವಾಗುತ್ತದೆ ಅನ್ನುವ ಕಾರಣಕ್ಕೆ.

ನಮ್ಮ ರಾಜ್ಯದಲ್ಲೂ ಯೋಜನೆ ಜಾರಿಗೆ ಬರಲಿ:

ಈ ಯೋಜನೆ ಕಾನೂನು ವ್ಯವಸ್ಥೆಯನ್ನು ಕಾಪಡುವಲ್ಲಿ ನಿಜಕ್ಕೂ ಒಳ್ಳೆಯ ಹೆಜ್ಜೆಯಾಗಿದೆ. ಬೆಂಗಳೂರು ಸೇರಿದಂತೆ ಹೊರ ರಾಜ್ಯದಿಂದ ಹೆಚ್ಚಾಗಿ ವಲಸೆಯಾಗುತ್ತಿರುವ ನಮ್ಮ ನಗರಗಳಲ್ಲಿ ಈ ಯೋಜನೆ ಜಾರಿಯಾಗಬೇಕಾಗಿರುವುದು ಅವಶ್ಯಕವಾಗಿದೆ. ನಮ್ಮ ಊರುಗಳಿಗೆ ಯಾರು ಬರುತ್ತಿದ್ದಾರೆ, ಏನು ಮಾಡುತ್ತಿದ್ದಾರೆ ಹಾಗೂ ಅವರ ಪೂರ್ವಾಪರವೇನು ಅನ್ನೋ ಮಾಹಿತಿಗಳು ನಮಗೆ ಗೊತ್ತಿದ್ದರೆ ಒಳ್ಳೆಯದಲ್ಲವೇ? ಬೆಂಗಳೂರಿನಲ್ಲಿ ನಡೆದಿರುವ ಹಲವಾರುಅಪರಾಧ ಪ್ರಕರಣಗಳಲ್ಲಿ ಹೊರ ರಾಜ್ಯದ ಪಾತಕಿಗಳು ಭಾಗಿಯಾಗಿರುವುದು ಕಂಡುಬಂದಿದೆ. ವಲಸೆ ಬಂದಿರುವ ಜನರ ಅಂಕೆ ಸಂಖ್ಯೆಗಳನ್ನು ಹೊಂದಿರುವುದು ಸರ್ಕಾರಕ್ಕೆ ಮುಖ್ಯವಾಗುತ್ತದೆ. ಅನಿಯಂತ್ರಿತ ವಲಸೆಯಿಂದಾಗಿ ಸಾಮಾಜಿಕ ಹಾಗೂ ಸಾಂಸ್ಕೃತಿ ಘರ್ಷಣೆಗೆ ಕಾರಣವಾಗಬಹುದು. ಇದಕ್ಕೆ ಸ್ಪಷ್ಟ ಉದಾಹರಣೆ ಮುಂಬೈ ನಗರ.

ಅನಿಯಂತ್ರಿತ ವಲಸೆಯಿಂದಾಗಿ ಒಂದು ರಾಜ್ಯದ Demography ಯೇ ಬದಲಾಗಿ ಹೋಗುವ ಅಪಾಯಕಾರಿ ಪರಿಣಾಮಗಳನ್ನು ಹಲವಾರು ರಾಜ್ಯಗಳು ಇಂದು ಅನುಭವಿಸುತ್ತಿವೆ. ಬೇರೆಲ್ಲೋ ಪಾತಕ ಕೃತ್ಯಗಳಲ್ಲಿ ಭಾಗಿಯಾಗಿರುವ ಜನರು ತಲೆತಪ್ಪಿಸಿಕೊಂಡು ನಮ್ಮ ರಾಜ್ಯಗಳಿಗೆ ಬಂದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸಗಳು ಆಗಬಹುದು. ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾರೆ ಅನ್ನೋ ಕಾರಣಕ್ಕೆ ಹಿಂದಿನ ಪೂರ್ವಾಪರ ತಿಳಿಯದೇ ಕರೆದುಕೊಂಡು ಬರಲಾಗುವ ಇಂತಹ ಜನರನ್ನು ಒಂದೆಡೆ ಮಧ್ಯವರ್ತಿಗಳು ಶೋಷಿಸಿದರೆ, ಇನ್ನೊಂದೆಡೆ ಇಲ್ಲಿಗೆ ವಲಸೆ ಬರುವ ಜನರು ನಮ್ಮ ಸಮಾಜದ ಜೊತೆ ಬೆರೆಯದೇ ತಮ್ಮದೇ ಒಂದು ದ್ವೀಪ ಕಟ್ಟಿಕೊಂಡು ಸಮಾಜದಲ್ಲಿ ಒಡಕು ತರುವ ಕೆಲಸಗಳಿಗೂ ಕಾರಣವಾಗಬಹುದು. ಕಡಿಮೆ ಸಂಬಳದ ನೆಪವೊಡ್ಡಿ ನಮ್ಮ ಕನ್ನಡಿಗರಿಗೆ ಕೆಲಸಗಳು ದೊರಕದಂತಹ ಪರಿಸ್ಥಿತಿ ನಿರ್ಮಾಣವಾದರೆ, ಇಂತಹ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯ ಅಭಿವೃದ್ಧಿ ಕಾಣುತ್ತಿದೆಯಾದರೆ. ನಮ್ಮ ಜನರಿಗೆ ಸರಿಯಾದ ವ್ಯವಸ್ಥೆಯಿಲ್ಲದ, ನಮ್ಮ ಜನರಿಗೆ ಕೆಲಸ ಸಿಗದ ಇಂತಹ ಅಭಿವೃದ್ಧಿ ನಮಗೆ ಬೇಕೆ ಎನ್ನೋ ಪ್ರಶ್ನೆಯನ್ನ ನಾವುಗಳು ಕೇಳಿಕೊಳ್ಳಬೇಕಾಗಿದೆ?

ವಲಸೆಗೆ ಕಾನೂನು ಜಾರಿಯಾಗಬೇಕು:

ಇಂದು ವಲಸೆ ಕೇವಲ ಸಣ್ಣ ಪ್ರಮಾಣದಲ್ಲಿ ಆಗುತ್ತಿಲ್ಲ, ಬದಲಾಗಿ ದಿನದಿಂದ ದಿನಕ್ಕೆ ಇದರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ವಲಸೆಯ ಕಾರಣದಿಂದಾಗಿ ನಮ್ಮ ಜನರೂ ಸಹ ತಮ್ಮ ಕೆಲಸಗಳನ್ನು ಕಳೆದುಕೊಳ್ಳುವ ಪರಿಸ್ಥಿತಿಗೆ ಬಂದೊದಗಿದ್ದಾರೆ, ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲೂ ಸಹ ಪೋಲಿಸ್ ಇಲಾಖೆಗೆ ತೊಂದರೆಯಾಗುತ್ತಿದೆ. ಮೂಲ ನಿವಾಸಿಗಳು ಹಾಗೂ ವಲಸಿಗರ ನಡುವೆ ಕಂದಕ ಏರ್ಪಡುತ್ತಿದೆ. ನಮ್ಮ ರಾಜ್ಯಕ್ಕೆ ಎಷ್ಟು ಜನರು ವಲಸೆ ಬರಬೇಕು ಅನ್ನೋ ನೀತಿಯನ್ನ ರೂಪಿಸಲು ನಮ್ಮ ರಾಜ್ಯಕ್ಕೆ ಹಕ್ಕಿರಬೇಕು. ಬಿಹಾರದಿಂದ, ಪಶ್ಚಿಮ ಬಂಗಾಳದಿಂದ ನಮ್ಮ ರಾಜ್ಯಕ್ಕೆ ಎಷ್ಟು ಜನರು ವಲಸೆ ಬರಬೇಕು ಅನ್ನೋ ನಿರ್ಧಾರ ನಮ್ಮ ರಾಜ್ಯಕ್ಕಿದ್ದರೆ, ನಮ್ಮ ರಾಜ್ಯದಿಂದ ಅಥವಾ ಬೇರೆ ರಾಜ್ಯದಿಂದ ಬಿಹಾರಕ್ಕೆ ಎಷ್ಟು ಜನರು ವಲಸೆ ಹೋಗಬೇಕು ಅನ್ನೋ ನಿರ್ಧಾರವನ್ನು ಬಿಹಾರ ಸರಕಾರಕ್ಕೆ ಬಿಡಬೇಕು, ಇದು ಸರಿಯಾದ ದಾರಿ ಕೂಡ.

ಇಂದು ಸಂವಿಧಾನದಲ್ಲಿ ಈ ತರಹದ ಕಾನೂನಿಗೆ ಅವಕಾಶವಿಲ್ಲವಾದರೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಸಲಹೆ ಪಡೆದು ವಲಸೆ ನಿಯಂತ್ರಣದ ಬಗ್ಗೆ ಸಂವಿಧಾನದಲ್ಲಿ ತಿದ್ದುಪಡಿ ತರಬೇಕಾಗಿದೆ. ವಲಸೆಗೆ ಬರುವ ಜನರಿಗೆ ರಾಜ್ಯ ಸರ್ಕಾರದಿಂದ ಪರ್ಮಿಟ್ ಪಡೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಬೇಕಾಗಿದೆ. ಇದರ ಮೂಲಕ ವಲಸಿಗರ ಸ್ಥಿತಿಗತಿ, ಅಂಕೆ ಸಂಖ್ಯೆ, ಹಾಗೂ ಇತರೇ ವಿಷಯದಲ್ಲಿ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು ಸುಲಭವಾಗುತ್ತದೆ. ವಲಸೆಯನ್ನು ನಿಯಂತ್ರಿಸುವ ಸಲುವಾಗಿ ಆಯಾ ರಾಜ್ಯದಲ್ಲಿ ಹೆಚ್ಚಿನ  ಉದ್ಯೋಗಗಳನ್ನು ಸೃಷ್ಠಿ ಮಾಡಬೇಕಾದ ಅನಿವಾರ್ಯತೆ ಇಂದು ಎಲ್ಲಾ ರಾಜ್ಯಗಳ ಮೇಲಿದೆ. ನಮ್ಮ ರಾಜ್ಯದಲ್ಲೂ ಕೂಡ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಮಂಗಳವಾರ, ಫೆಬ್ರವರಿ 7, 2012

ಸರೋಜಿನಿ ಮಹಿಷಿ ವರದಿ ಎಂಬ ಕನ್ನಡಿಯೊಳಗಿನ ಗಂಟು


ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸದಾನಂದ ಗೌಡರು “ಬದಲಾದ ಕಾಲಘಟಕ್ಕೆ ಅನುಗುಣವಾಗಿ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಈ ಸಂಬಂಧ ಸಮಿತಿ ರಚಿಸಲು ಸರ್ಕಾರದ ಚಿಂತನೆ ನಡೆಸಿದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ನಂತರ ಕನ್ನಡಿಗರಿಗೆ ಉದ್ಯೋಗ ಕೊಡಬೇಕೆಂಬ ವರದಿಯ ಬಗ್ಗೆ ಮಾತಾಡಿರುವದು ನಮ್ಮ ಪುಣ್ಯ!!! ಅದಕ್ಕಾಗಿ ನಮ್ಮ ಮುಖ್ಯಮಂತ್ರಿಗಳಿಗೆ ಶುಭಾಷಯ ಹೇಳೋಣ. ಅದ್ರೆ ಮೂರು ದಶಕಗಳಿಂದ ಧೂಳು ಹಿಡಿದು ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುತ್ತೇವೆ ಅನ್ನೋ ಹೇಳಿಕೆ ಬದಲು ಸಮಿತಿ ರಚಿಸಲು ಚಿಂತನೆ ನಡೆಸುತ್ತೇವೆ, ಯೋಚಿಸುತ್ತಿದ್ದೇವೆ, ಜಾರಿ ಮಾಡುತ್ತೇವೆ... ಅನ್ನೋ ಅವರ ಪದ ಪ್ರಯೋಗಗಳು ಗಾಳಿಯಲ್ಲಿ ಗೋಪುರ ಕಟ್ಟುವ ಪ್ರಯತ್ನವಾಗಿ ಕಾಣುತ್ತಿದೆ.
(ಚಿತ್ರಕೃಪೆ: ಅಂತರ್ಜಾಲ)

ಮೂರು ದಶಕಗಳ ಹಿಂದೆ ತಯಾರಿಸಲಾದ ಸರೋಜಿನಿ ಮಹಿಷಿ ವರದಿಯನ್ನು, ಕಳೆದ ೧೫ ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಔದ್ಯೋಗಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಇಂದಿನ ದಿನ ಮಾನಕ್ಕೆ ತಕ್ಕಂತೆ ಶಿಫಾರಸ್ಸುಗಳನ್ನು ಬದಲಾಯಿಸಬೇಕಾಗಿರುವುದು ಇಂದಿನ ಅವಶ್ಯಕತೆ. ಇಷ್ಟರಲ್ಲಾಗಲೇ ಈ ಕೆಲಸ ಮಾಡಬೇಕಾಗಿದ್ದ ಸರ್ಕಾರ ಇನ್ನೂ ಸಮಿತಿ ರಚಿಸುವಲ್ಲಿ, ಚಿಂತನೆ ನಡೆಸುವಲ್ಲಿ, ಬೇಡಿಕೆ ಪರಿಶೀಲಿಸುವುದರಲ್ಲಿ ಮೀನಾಮೇಷ ಎಣಿಸುತ್ತ ಜನರ ಕಿವಿಯ ಮೇಲೆ ಹೂವು ಇಡುತ್ತಿದೆ.

ಸರೋಜಿನಿ ಮಹಿಷಿಯಲ್ಲಿ ಹೇಳಿರುವ ಉದ್ಯೋಗ ಮೀಸಲಾತಿಯ ಬಗ್ಗೆ ನೋಡುತ್ತಿದ್ದಾಗ, ಈ ಯೋಚನೆಯನ್ನ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಮಾಡಿದ್ದಾರೆಯೇ? ಇದರ ಅನುಷ್ಠಾನ ಬಲು ಕಷ್ಟವಾದ ಕ್ರಿಯೆಯೇ? ಈ ತರಹದ ಯೋಜನೆಗಳನ್ನು ಬೇರೆ ರಾಜ್ಯದಲ್ಲಿ ಮಾಡಲಾಗಿದೆಯೆ? ಅಂತ ಕುತೂಹಲದಿಂದ ಹುಡಿಕಿದರೆ ನಮಗೆ ಆಶ್ಚರ್ಯ ಕಾದಿದೆ. ಬಿ.ಜೆ.ಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ವಿವಿಧ ರಾಜ್ಯಗಳಲ್ಲಿ ತಮ್ಮ ರಾಜ್ಯದ ಜನರ ಹಿತಾಸಕ್ತಿಗಾಗಿ ಎಲ್ಲಾ ಹಂತದ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿವೆ. ಅಂತಹ ಕೆಲವು ರಾಜ್ಯಗಳ ಮಾಹಿತಿಯನ್ನು ನಾವು ಈಗ ನೋಡೋಣ

ಮಹಾರಾಷ್ಟ್ರ:
ನವೆಂಬರ್ 2008 ರಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿನ ಎಲ್ಲ ಉದ್ಯೋಗಗಳಲ್ಲೂ 80% ಅಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು ಎಂದು ತೀರ್ಮಾನಿಸಲಾಯಿತು. ಅದರಲ್ಲೂ ಮುಂಬರುವ 140 ಎಸ್..ಜೆಡ್. ಗಳಲ್ಲಿ ಆರಂಭವಾಗು ಎಲ್ಲ ಕಂಪನಿಗಳ ಹುದ್ದೆಗಳಲ್ಲಿ 80% ಸ್ಥಳೀಯರಿಗೆ ಕೊಡಬೇಕು ಎಂದು ಆದೇಶ ಹೊರಡಿಸಿತು. ಇದು, ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಬಗ್ಗೆ 1968 ನಂತರ, ಮಹಾರಾಷ್ಟ್ರ ಸರ್ಕಾರ ಹೊರಡಿಸಿದ 6ನೇ ಸರ್ಕಾರಿ ಆದೇಶ.

ಒರಿಸ್ಸಾ:
ಅಕ್ಟೋಬರ್ 2008 ರಲ್ಲಿ ಒರಿಸ್ಸಾ ಸರ್ಕಾರ ಕೂಡ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಒರಿಸ್ಸಾದಲ್ಲಿನ ಎಲ್ಲ ಗ್ರೂಪ್ ’ಸಿ ಮತ್ತು ’ಡಿ ಉದ್ಯೋಗಗಳಲ್ಲೂ 90% ಅಷ್ಟು ಹುದ್ದೆಗಳನ್ನು, ಹಾಗೂ ಗ್ರೂಪ್ ’ಎ ಮತ್ತು ’ಬಿ ಹುದ್ದೆಗಳಲ್ಲಿ 65% ಅಷ್ಟು ಸ್ಥಳೀಯರಿಗೆ ಮೀಸಲಿಡಬೇಕು ಎಂದು ತೀರ್ಮಾನಿಸಿತು. ಹೊಸ ಉದ್ಯೋಗ ನೀತಿಗಳನ್ನು ಅಳವಡಿಸಿ, ಕಂಪನಿಗಳೊಡನೆ ಆಗಿದ್ದ ಒಪ್ಪಂದ (MoU) ಗಳನ್ನು ಮರುಪರಿಶೀಲಿಸಿ, ಅವಶ್ಯವೆನಿಸಿದರೆ ತಿದ್ದುಪಡಿ ಮಾಡಲಾಗುವುದು ಎಂದು ಸರ್ಕಾರ ತೀರ್ಮಾನಿಸಿತು.

ತಮಿಳುನಾಡು:
2009ರ ಸರ್ಕಾರಿ ಆದೇಶದಲ್ಲಿ ತಮಿಳುನಾಡಿನಲ್ಲಿ ಸ್ಥಾಪಿಸಲಾಗುವ ಎಲ್ಲಾ ಕಾರ್ಖಾನೆಗಳಲ್ಲಿ ಶೇ 75 ರಷ್ಟು ಉದ್ಯೋಗಗಳನ್ನು ತಮಿಳುನಾಡಿನ ಜನರಿಗೆ ನೀಡಬೇಕೆಂಬ ನಿಯಮ ಮಾಡಿದೆ. ಜೊತೆಗೆ ಈ ನಿಬಂಧನೆಗೆ ಒಪ್ಪಿಕೊಳ್ಳುವ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ವಿವಿಧ ಸವಲತ್ತುಗಳನ್ನು ಒದಗಿಸುತ್ತದೆ. ಈ ಹಿಂದೆ ಸ್ಥಾಪಿಸಲಾಗಿರುವ ಸಂಸ್ಥೆಗಳು ಸಹ ಸರ್ಕಾರಿ ಅದೇಶವನ್ನು ಪಾಲಿಸಿದಲ್ಲಿ ಅವರಿಗೂ ಸಹ ಸವಲತ್ತುಗಳನ್ನು ವಿಸ್ತರಿಸುವ ಯೋಜನೆಯನ್ನು ಹೊಂದಿದೆ.

ಗುಜರಾತ:
ಗುಜರಾತ ಸರ್ಕಾರವು ತನ್ನ ಉದ್ಯಮ ನೀತಿಯಲ್ಲಿ, ತನ್ನ ರಾಜ್ಯದಲ್ಲಿ ಸ್ಥಾಪಿಸಲಾಗುವ ಉದ್ಯಮಗಳಿಂದ ಸೃಷ್ಠಿಯಾಗುವ ಉದ್ಯೋಗಗಳಲ್ಲಿ ಹೆಚ್ಚಿನ ಪಾಲು ದೊರಕುವಂತೆ ಮಾಡಲು ಯೋಜನೆಯೊಂದನ್ನು ಸ್ಥಾಪಿಸಿದೆ. ಇದರ ಮೂಲಕ ಸ್ಥಳೀಯರಿಗೆ ಹೆಚ್ಚಿನ ಕೆಲಸ ದೊರಕುವಂತೆ ಮಾಡಿದೆ.

ಈ ಮೇಲಿನ ಉದಾಹರಣೆಗಳನ್ನು ನೋಡಿದಾಗ, ಆಯಾ ರಾಜ್ಯಗಳು ತನ್ನ ರಾಜ್ಯದ ಜನರ ಹಿತಕ್ಕಾಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕೆಂಬ ಕಾನೂನು ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ನಮ್ಮ ಭಾರತ ದೇಶದ ಪ್ರತಿಯೊಂದು ರಾಜ್ಯಗಳು ತಮ್ಮದೇ ಆದ ರಾಜ್ಯ ಸರ್ಕಾರವನ್ನು ಹೊಂದಿವೆ. ಜನರಿಂದ ಆರಿಸಲಾಗುವ ಈ ಸರ್ಕಕಾರಗಳು, ತನ್ನನ್ನು ಆರಿಸಿ ಕಳುಹಿಸಿದ ಜನರಿಗೆ ಸವಲತ್ತುಗಳನ್ನು ಒದಗಿಸುವುದು ಸರಿಯಾದ ಕ್ರಮ, ಇದಲ್ಲದೇ ಆಯಾ ರಾಜ್ಯದಲ್ಲಿ ಸ್ಥಾಪಿಸಲಾಗುವ ಉದ್ಯಮಗಳಿಗೆ ತೆರಿಗೆ ವಿನಾಯಿತಿ, ರಿಯಾಯಿತಿ ದರದಲ್ಲಿ ವಿದ್ಯುತ್, ನೀರು, ಭೂಮಿ ಎಲ್ಲವನ್ನೂ ನೀಡುವಾಗ ಖರ್ಚಾಗುವುದು ಜನರ ತೆರಿಗೆಯ ಹಣ. ಹಾಗಾಗಿ ಅಲ್ಲಿಯ ಜನರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದು ಸಹಜ ನ್ಯಾಯವಾಗಿ ಕಾಣುತ್ತದೆ. ನಮ್ಮ ರಾಜ್ಯ ಸರ್ಕಾರವೂ ಪರಿಷ್ಕೃತ ಸರೋಜಿನಿ ಮಹಿಷಿ ವರದಿಯನ್ನು ಒಂದು ಕಾಲಮಿತಿ ಯೋಜನೆಯನ್ನಾಗಿ ಮಾಡಿಕೊಂಡು ಅನುಷ್ಠಾನಕ್ಕೆ ತರಲು ಚಿಂತನ-ಮಂಥನ ಮಾಡುವುದನ್ನು ಬಿಟ್ಟು ಜಾರಿಗೆ ತರಲಿ ಎಂದು ಆಶಿಸೋಣ.

ಮುಗಿಸುವುದಕ್ಕಿಂತ ಮುಂಚೆ: ಫೆಬ್ರವರಿ ತಿಂಗಳಿನಲ್ಲಿ ಜೆ.ಪಿ ನಗರದಲ್ಲಿ ನಡೆದ ಉದ್ಯೋಗ ಮೇಳದ ಜಾಹೀರಾತನ್ನು ಇಂಗ್ಲಿಷಿನಲ್ಲಿ ಹಾಕಲಾಗಿತ್ತು, ಇದನ್ನ ನಾನು ಹಾಗೂ ಕೆಲವು ಗೆಳೆಯರು ಪ್ರಶ್ನಿಸಿದಾಗ, ಜಿ.ಪಿ ನಗರದಲ್ಲಿ ಭಾರತದ ಎಲ್ಲಾ ಜನರು ವಾಸಿಸುತ್ತಾರೆ, ಹಾಗಾಗಿ ಕೆಲಸಗಳನ್ನು ಕೇವಲ ಕನ್ನಡಿಗರಿಗೆ ನೀಡಬೇಕು ಎಂದು ಹೇಳುವುದು ಸಂಕುಚಿತತೆ. ನಾವು ಭಾರತೀಯರಾಗಿ ಯೋಚಿಸೋಣ ಎಂಬ ಸಲಹೆಯನ್ನು ಆಳುತ್ತಿರುವ ಪಕ್ಷದ ವಿಧ್ಯಾರ್ಥಿ ಸಂಘಟನೆಯ ಮುಖಂಡರೊಬ್ಬರು ನಮಗೆ ಸಲಹೆ ನೀಡಿದ್ರು. ಹಾಗಿದ್ರೆ ಈ ಸರ್ಕಾರದಿಂದ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುವ ಕೆಲಸ ಮಾಡೋಕೆ ಆಗುತ್ತಾ ಅನ್ನೋ ಪ್ರಶ್ನೆ ಸಹ ನಮ್ಮನ್ನ ಈಗ ಕಾಡುತ್ತೆ.

ಕೊನೆಯದಾಗಿ: ನಮಗೆ ಗುಜರಾತ ಸರ್ಕಾರವೇ ಮಾದರಿ ಅಂತ ದಿನಕ್ಕೆ ನೂರು ಬಾರಿ ಹೇಳೋ ರಾಜ್ಯ ಸರ್ಕಾರಕ್ಕೆ ಅಲ್ಲಿ ತುಂಬಾ ಹಿಂದೆಯೇ ಉದ್ಯೋಗ ಮೀಸಲಾತಿಯನ್ನು ಜಾರಿಗೆ ತಂದಿದ್ದಾರೆ ಅನ್ನೋ ಅಂಶ ಗೊತ್ತಿದೆಯೋ ಇಲ್ಲವೋ ಪಾಪ!!!

ಮಂಗಳವಾರ, ಜನವರಿ 24, 2012

ಇಲ್ಲಿ ಕನ್ನಡ ಗೊತ್ತಿಲ್ದಿದ್ರೂ ಕೆಲಸ ಸಿಗುತ್ತೆ!!!


ಜನವರಿ ೨೦ ೨೦೧೨ ರಂದು ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯಲ್ಲಿ ಅಸಂಘಟಿತ ಕೆಲಸಗಾರರ ಅನುಕೂಲಕ್ಕಾಗಿ ಜಾಲತಾಣವೊಂದನ್ನು ಹೊರತರಲಾಗಿದೆ ಎಂಬ ಸುದ್ದಿಯನ್ನು ವರದಿ ಮಾಡಿತ್ತು. ಈ ಯೋಜನೆಯನ್ನು ಕಾನ್ಫೆಡೆರೇಶನ್ ಆಫ್ ಇಂಡಿಯನ್ ಇಂಡಸ್ಟ್ರೀಸ್(ಸಿ.ಐ.ಐ) ನ ಕರ್ನಾಟಕ ವಿಭಾಗವು ಜಾರಿಗೆ ತಂದಿದೆ, ಈ ಯೋಜನೆಗೆ ಸಿ.ಎಚ್.ಎಫ್ ಇಂಟರ್ ನ್ಯಾಷನಲ್ ಇಂಡಿಯಾ ಎಂಬ ಸಂಸ್ಥೆಯೊಂದು ಈ ಯೋಜನೆಗೆ ಹಣ ಹೂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿಐಐ ನ ಈ ಚಿಂತನೆ ನಿಜಕ್ಕೂ ಉತ್ತಮವಾಗಿದೆ. ಇವತ್ತಿನ ದಿನಗಳಲ್ಲಿ ಕೆಲಸ ಹುಡುಕುವ ಕಷ್ಟ ಅನುಭವಿಸಿದವರಿಗೆ ಗೊತ್ತು. ಇಂತಹುದರಲ್ಲಿ ಅಂಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಉದ್ಯೋಗಾವಕಾಶಗಳ ಮಾಹಿತಿ ಸಿಗುವುದು ಒಂದು ಪತ್ರಿಕೆಗಳಲ್ಲಿ ಬರುವ ಜಾಹಿರಾತಿನಿಂದ ಅಥವಾ ಉದ್ಯೋಗ ಪತ್ರಿಕೆಗಳಿಂದ ಮಾತ್ರ. ಆದರೆ ಈ ಸಿಐಐ ನ ಯೋಜನೆಯಲ್ಲಿ ಕೆಲಸ ಕೊಡುವವರು ಹಾಗೂ ಕೆಲಸ ಬೇಡುವವರನ್ನು ಒಂದೇ ಸೂರಿನಡಿ ತರುವ ಪ್ರಯತ್ನ ಮಾಡಲಾಗಿದೆ. ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಸಿಗುವ ಭರವಸೆಯನ್ನು ಸಿಐಐ ನೀಡುತ್ತಿದೆ. ಇವರ ಜೊತೆಗೆ ರಾಜ್ಯ ಸರ್ಕಾರ ಕೂಡ ಕೈ ಜೋಡಿಸುವ ಬಗ್ಗೆ ಪತ್ರಿಕೆಯಲ್ಲಿ ಬರೆಯಲಾಗಿದೆ.



ಸಿಐಐ ಸಿದ್ಧಪಡಿಸಿರುವ ಜಾಲತಾಣವನ್ನು ಹೊಕ್ಕು ನೋಡಿದರೆ ಈ ಯೋಜನೆ ಮೊದಲ ಹೆಜ್ಜೆಯಲ್ಲಿಯೇ ಎಡವಿದೆಯೇ ಎಂದು ಅನ್ನಿಸುತ್ತದೆ, ಯಾರಿಗಾಗಿ ಈ ಯೋಜನೆಯನ್ನ ತಯಾರಿಸಲಾಗಿದೆ ಅನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತದೆ.

ಕನ್ನಡವೇ ಇಲ್ಲಾ!!!
ಸಿಐಐ ನ ತಾಣವನ್ನು ನಾವು ನೋಡಿದ ತಕ್ಷಣ ಕಣ್ಣಿಗೆ ಕಾಣುವುದು ಬರಿ ಇಂಗ್ಲೀಶ್. ಹೋಗಲಿ ಕನ್ನಡದಲ್ಲೂ ಈ ಜಾಲತಾಣವನ್ನು ತಯಾರು ಮಾಡಿದ್ದಾರೆಯೇ ಅಂತ ನೋಡಿದರೆ ಕನ್ನಡದ ಒಂದಕ್ಷರವೂ ಈ ಜಾಲತಾಣದಲ್ಲಿ ಇಲ್ಲ!!!. ನೋಂದಣಿ ಮಾಡಿಸಿಕೊಳ್ಳಲು ಹೋದರೆ ಅಲ್ಲೂ ಕೂಡ ಇಂಗ್ಲಿಶ್ ಮಾತ್ರ. ಪ್ರಾಥಮಿಕ, ಹೈಸ್ಕೂಲು, ಕಾಲೇಜು, ಏನು ಓದದೇ ಇರುವ ಹಾಗೂ ಬಿ.ಎ, ಬಿ.ಕಾಂ, ಬಿ.ಎಡ್ ಮತ್ತು ಬಿ.ಎಸ್ಸಿ ಪಧವಿಧರರಿಗೆ ಇಲ್ಲಿ ಕೆಲಸದ ಅವಕಾಶಗಳನ್ನು ನೀಡಲಾಗಿದೆ. ಆದ್ರೆ ಇಲ್ಲಿರುವ ಮುಖ್ಯ ಪ್ರಶ್ನೆ ಏನು ಓದದ ಅಥವಾ ಕಾಲೇಜು ಬಿಟ್ಟಿರುವ  ಅಥವಾ ಇಂಗ್ಲಿಶ್ ಅರಿವು ಇಲ್ಲದ ಜನರು ಇಲ್ಲಿ ಹೇಗೆ ನೋಂದಾಯಿಸಿಕೊಳ್ಳಬೇಕು? ಇಂಗ್ಲಿಶ್ ಗೊತ್ತಿದ್ದರೆ ಮಾತ್ರ ಸಿಐಐ ನವರು ಕೆಲಸ ಕೊಡಿಸುತ್ತಾರಾ?

ತರಬೇತಿ ಸಂಸ್ಥೆಗಳು ಇಂಗ್ಲಿಶ್ ಗೊತ್ತಿಲದವರಿಗೆ ಸಹಾಯ ಮಾಡುತ್ತವೆ ಎಂದು ಸಂಸ್ಥೆ ಹೇಳಿದ್ದರೂ ಸಹ ಇದು ಎಷ್ಟರ ಮಟ್ಟಿಗೆ ಪ್ರಯೋಜಕ ಅನ್ನುವ ಪ್ರಶ್ನೆ ಹುಟ್ಟುತ್ತದೆ? ಮುಂದೆ ಈ ಅಭ್ಯರ್ಥಿ ತನ್ನ ವಿವರಗಳನ್ನು ತುಂಬ ಬೇಕಾದಲ್ಲಿ ಅಥವಾ ಬದಲಾಯಿಸಬೇಕಾದಲ್ಲಿ ಯಾರ ಮುಂದೆ ಹೋಗಿ ಕೈಕಟ್ಟಿ ನಿಲ್ಲಬೇಕು? ಹೊಸ ಕೆಲಸದ ಮಾಹಿತಿ ಬೇಕಾದಲ್ಲಿ ಅಥವಾ ತನ್ನ ಊರಿನಲ್ಲಿರುವ ಕೆಲಸ ಹುಡುಕಬೇಕೆಂದಲ್ಲಿ ಯಾರನ್ನ ಕೇಳಿ ಮಾಹಿತಿ ಪಡೆಯಬೇಕು? ಹೀಗೆ ಮೂರನೆಯ ವ್ಯಕ್ತಿಯ ಮೇಲೆ ಅವಲಂಬಿತಾಗುವ ವ್ಯವಸ್ಥೆ ನಿಜಕ್ಕೂ ಪರಿಣಾಮಕಾರಿಯಾಗಲಾರದು. ಸಿಐಐ ನಂಥ ಸಂಸ್ಥೆಗೆ ಮಾರುಕಟ್ಟೆಯಲ್ಲಿ ಭಾಷೆಗಿರುವ ಆಯಾಮದ ಬಗ್ಗೆ ಅರ್ಥ ಆಗದಿರುವುದು ವಿಪರ್ಯಾಸವೇ ಸರಿ. ತನ್ನ ಬಳಿ ಇರುವ ಅಭ್ಯರ್ಥಿಗಳ ಮಾಹಿತಿಯನ್ನು ಹಂಚಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರವೂ ಸಹ ಈ ಯೋಜನೆ ಕನ್ನಡದಲ್ಲಿ ಇಲ್ಲದಿರುವ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ.

ಈ ಯೋಜನೆಯಿಂದ ನಮ್ಮ ರಾಜ್ಯಕ್ಕೆ ಆಗುವ ಉಪಯೋಗಕ್ಕಿಂತ ಹೊರಗಿನಿಂದ ವಲಸೆ ಬರುವ ಜನರಿಗೆ ಹೆಚ್ಚು ಉಪಯೋಗವಾಗುತ್ತದೆ ಎಂಬ ಅನುಮಾನ ಕಾಡಲು ಶುರುವಾಗುತ್ತದೆ ಯಾಕಂದ್ರೆ ಈ ತಾಣದಲ್ಲಿ ಕನ್ನಡ ಗೊತಿಲ್ಲದಿದ್ರೂ ನಿಮಗೆ ಕೆಲಸ ಸಿಗುತ್ತೆ. ದಶಕಗಳ ಹಿಂದೆಯೆ ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಗಬೇಕಾಗಿರುವ ಸ್ಥಾನಮಾನದ ಬಗ್ಗೆ ಹೊರತರಲಾಗಿದ್ದ ಡಾ. ಸರೋಜಿನೆ ಮಹಿಷಿ ವರದಿಯನ್ನು ಇಂದಿಗೂ ಸರ್ಕಾರ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಆದರೆ ಸಿಐಐ ನಂತಹ ಸಂಸ್ಥೆಗಳ ಜೊತೆಗೆ ಕೆಲಸ ಮಾಡುವಾಗ ಕರ್ನಾಟಕದಲ್ಲಿನ ಕೆಲಸಗಳು ಕನ್ನಡಿಗರಿಗೆ ದೊರಕುವಂತೆ ಮಾಡಲು ಒಂದು ಸೂತ್ರವನ್ನು ಹೊರತರಬೇಕು. ಇದರ ಜೊತೆಗೆ ನಮ್ಮ ರಾಜ್ಯದಲ್ಲಿ ಸ್ಥಾಪಿಸಲಾಗುವ ಯಾವುದೇ ಉದ್ಯಮದಲ್ಲೂ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎನ್ನುವ ಒಂದು ಸರ್ಕಾರಿ ಆದೇಶವನ್ನು ಹೊರಡಿಸಬೇಕು. ನಮ್ಮ ನಾಡಿನ ಏಳಿಗೆಯಲ್ಲಿ ದುಡಿಮೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎನ್ನುವುದನ್ನು ಸರ್ಕಾರ ಮರೆಯಬಾರದು.

ಸಿಐಐ ಸಂಸ್ಥೆ ಮಾಡಿರುವ ತಪ್ಪನ್ನು ತಿದ್ದಿಕೊಂಡು ಈ ಜಾಲತಾಣವನ್ನು ಕನ್ನಡದಲ್ಲಿ ಅಭಿವೃದ್ಧಿ ಪಡಿಸಬೇಕು ಹಾಗೂ ಈ ಮೂಲಕ ಹೆಚ್ಚಿನ ಕನ್ನಡಿಗರಿಗೆ ತಲುಪುವಂತೆ ಮಾಡಬೇಕು. ಈ ಕುರಿತು ನಾವು response@skillconnect.in ಗೆ ಒಂದು ಮಿಂಚೆಯನ್ನು ಬರೆದು, ಕನ್ನಡದಲ್ಲಿ ಈ ಜಾಲಾತಾಣವನ್ನು ಹೊರತರಬೇಕು ಎಂದು ಒತ್ತಾಯಿಸೋಣ. 

ಬುಧವಾರ, ನವೆಂಬರ್ 2, 2011

ಮೆಟ್ರೋದಲ್ಲಿ ಸಿಗದ ಉದ್ಯೋಗ – ಕನ್ನಡಿಗರಿಗೆ ಏನ್ ಬಂತು ಉಪಯೋಗ??

ಕನ್ನಡದ ನನ್ನೆಲ್ಲ ಬಂಧುಗಳಿಗೆ ಐವತ್ತಾರನೇ ಕರ್ನಾಟಕ ರಾಜ್ಯೋತ್ಸವದ ಸವಿ ಹಾರೈಕೆಗಳು. ಎಲ್ಲಾದರೂ ಇರು, ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಕವಿವಾಣಿಯಂತೆ ನಡೆದುಕೊಳ್ಳಬೇಕಾಗಿರುವ ಸಂದರ್ಭ ಹಿಂದೆಂದಿಗಿಂತ ಹೆಚ್ಚು ಪ್ರಸ್ತುತವೆನ್ನಿಸುತ್ತದೆ. ೩ ಪ್ರಾಂತಗಳು ಹಾಗೂ ೧೬ ವಿವಿಧ ಸಂಸ್ಥಾನಗಳಲ್ಲಿ ಹಂಚಿ ಹೋಗಿತ್ತು ನಮ್ಮ ಕನ್ನಡ ನಾಡು, ನಮ್ಮ ನಾಡಿನ ಹಿರಿಯರ ಅವಿರತ ಶ್ರಮ, ತ್ಯಾಗ, ಬಲಿದಾನದ ಫಲವಾಗಿ ಏಕೀಕೃತ ಕರ್ನಾಟಕ ಸ್ಥಾಪಿತವಾಯಿತು. ನಮ್ಮ ಹಿರಿಯರು ಕಂಡ ಸುವರ್ಣ ಕರ್ನಾಟಕದ ಕನಸು ಇನ್ನೂ ನನಸಾಗಿದೆಯೇ? ಖಂಡಿತವಾಗಿಯೂ ಇಲ್ಲಾ. ಈ ಕನಸು ಈಡೇರಬೇಕಾದರೆ ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕಾಗಿದೆ ಹಾಗೂ ಅದು ಅಗತ್ಯವೂ ಕೂಡ.

ಕಳೆದೆರೆಡು ದಶಕದಲ್ಲಿ ಜಾಗತೀಕರಣದ ಪ್ರಭಾವದಿಂದಾಗಿ ನಮ್ಮ ನಾಡಿಗೆ ಹಲವಾರು ಬೃಹತ್ ಉದ್ಯಮಗಳು ಬಂದವು, ಅದರ ಜೊತೆ ಜೊತೆಗೆ ಹೊರ ರಾಜ್ಯಗಳಿಂದ ವಲಸೆ ಬರುವವರ ಸಂಖ್ಯೆ ಸಹ ಜಾಸ್ತಿಯಾಗುತ್ತಾ ಬಂತು ಹಾಗೂ ಇಂದು ಸಹ ಅದು ಅನಿಯಮಿತವಾಗಿ ನಡೆಯುತ್ತಲೇ ಇದೆ. ಇದರಿಂದಾಗಿ ನಮ್ಮ ನಾಡಿನ ಜನರಿಗೆ ಕೆಲಸಗಳು ದೊರಕದಂತಾಗಿವೆ. ಆದರೆ ಇಂತಹ ಒಂದು ಅನಿಯಮಿತ ವಲಸೆಯಿಂದಾಗಿ ಒಂದು ರಾಜ್ಯದ ಮೇಲೆ ಬೀರಬಹುದಾದ ಪರಿಣಾಮ ಮಾತ್ರ ಭಯಂಕರ. ಇದಕ್ಕೆ ಉದಾಹರಣೆಯಂದರೆ ವಾಣಿಜ್ಯ ನಗರಿ ಮುಂಬಯಿ. ಇಂದು ಅಲ್ಲಿ ವಲಸೆಯಿಂದಾಗಿ ತಮ್ಮ ತಾಯಿನುಡಿಯ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವ ಜನರಿಗೆ ಇಂದು ಇದರ ಪರಿಣಾಮ ಅರ್ಥವಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಮಹಾರಾಷ್ಟ್ರದಲ್ಲಿ ಅಗಿರುವಂತಹ ಅನಾಹುತ ಆಗಿಲ್ಲ. ಆದರೆ ಸುಮ್ಮನೆ ಇದ್ದರೆ ಇಂತಹ ಅನಾಹುತ ಕಟ್ಟಿಟ್ಟ ಬುತ್ತಿ.

ಮಣ್ಣಿನ ಮಕ್ಕಳಿಗೆ ಹೆಚ್ಚಿನ ಒತ್ತು ಸಿಗಲಿ:


ವಲಸಿಯಿಂದ ಆಗಬಹುದಾದ ಪರಿಣಾಮಕ್ಕೆ ಇತ್ತೀಚಿನ ಉದಾಹರಣೆಯಾಗಿ “ನಮ್ಮ ಮೆಟ್ರೋ”ದಲ್ಲಿ ಆಗಿರುವ ಈ ಪ್ರಕರಣವೇ ಸಾಕ್ಷಿ. ಜನರ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಈ ಮನುಷ್ಯ ಮಾತನಾಡುವ ಧಾಟಿ ನೋಡಿ.... “ಇದು ಹಿಂದುಸ್ಥಾನ, ಹಿಂದುಸ್ಥಾನದ ಭಾಷೆ ಹಿಂದಿಯಾಗಿದೆ, ಅದು ಗೊತ್ತಿದ್ದ ಮೇಲೆ ಕನ್ನಡ ಯಾಕೆ ಕಲಿಯಬೇಕು? ಕನ್ನಡ ಕಲಿಯಲು ನನಗೆ ಇಷ್ಟವಿಲ್ಲ ಯಾಕಂದರೆ ಕನ್ನಡ ಚೆನ್ನಾಗಿಲ್ಲ” ಅಂತ ಹಲ್ಲು ಕಿರಿಯುತ್ತಾ ಹೇಳುತ್ತಿದ್ದಾನೆ. ಇಂತವರಿಂದ ಸಾಮಾನ್ಯ ಜನರಿಗೆ ಯಾವ ತರಹದ ಮಾಹಿತಿ ಸಿಗಲು ಸಾಧ್ಯ? ಯಾವ ರೀತಿಯಿಂದ ಇವನು ಜನರನ್ನು ಸುರಕ್ಷಿತವಾಗಿರಿ ಅಂತ ಹೇಳುತ್ತಾನೆ? ವಲಸೆಯಿಂದ ಆಗಬಹುದಾದ ಪರಿಣಾಮದ ಮೊದಲನೆ ಹೆಜ್ಜೆ ಇದು. ಇದು ಕೇವಲ ಇವನೊಬ್ಬನ ಮಾತಲ್ಲ. ಕೂಲಿ ಮಾಡುವ ಕಾರ್ಮಿಕನಿಂದ ಹಿಡಿದು ದೊಡ್ಡ ದೊಡ್ಡ ಹುದ್ದೆಗಳಲ್ಲಿರುವ ಹೊರ ರಾಜ್ಯದ ಜನರ ಪ್ರತೀಕವಾಗಿ ಇವನು ಕಾಣುತ್ತಾನೆ.

ಬೆಂಗಳೂರಿನ ಹೆಮ್ಮೆಯಾಗಿರುವ ನಮ್ಮ ಮೆಟ್ರೋ ಸಲುವಾಗಿ ಎಷ್ಟೋ ಕುಟುಂಬಗಳು ಇಂದು ಬೀದಿ ಪಾಲಾಗಿವೆ? ದಶಕಗಳಿಂದ ಬಾಳುತ್ತಿದ್ದ ಜನರನ್ನ ಒಕ್ಕಲೆಬ್ಬಿಸಿ ಬೃಹತ್ ಕಟ್ಟಡಗಳನ್ನು ಕಟ್ಟಿರುವ ನಮ್ಮ ಮೆಟ್ರೋ ಸಂಸ್ಥೆಯವರು ಎಷ್ಟು ಕುಟುಂಬಗಳಿಗೆ ಉದ್ಯೋಗಗಳನ್ನು ನೀಡಿದ್ದಾರೆ? ಇಂತವರಿಗೆ ಕೆಲಸ ಕೊಡಬೇಕಾಗಿರುವುದು ಸಂಸ್ಥೆಯ ಕರ್ತವ್ಯವಲ್ಲವೇ? ಒಂದು ಗಾರ್ಡ್ ಕೆಲಸಕ್ಕೂ ಸಹ ನಮ್ಮ ಕನ್ನಡಿಗರು ಅರ್ಹರಲ್ಲವೇ? ನಮ್ಮ ಮೆಟ್ರೋನಲ್ಲಿರುವ ಸುಮಾರು ೮೪೦ ಕೆಲಸಗಳಲ್ಲಿ ಕೇವಲ ೩೨೦ ಹುದ್ದೆಗಳಿಗೆ ಮಾತ್ರ ಕನ್ನಡಿಗರನ್ನ ನೇಮಿಸಲಾಗಿದೆ, ಉಳಿದದ್ದೆಲ್ಲ ಪರಭಾಷಿಕರ ಪಾಲು. ಇದು ಯಾವ ಸೀಮೆಯ ನ್ಯಾಯ? ನಿಜಕ್ಕೂ ನಮ್ಮ ಸರ್ಕಾರಕ್ಕೆ ರಾಜ್ಯದಲ್ಲಿ ಆಗುತ್ತಿರುವ ವಿದ್ಯಮಾನಗಳ ಬಗ್ಗೆ ಗಮನ ಹರಿಸಲು ಸಮಯವಿದೆಯೋ ಇಲ್ಲವೇ ಗೊತ್ತಾಗುತಿಲ್ಲ. ತ್ರಿಭಾಷೆಯ ಮೂಲಕ ಭಾರತದ ಒಗ್ಗೂಡಿಸುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿರುವ ಮೆಟ್ರೋ ಸಂಸ್ಥೆ ನಿಜಕ್ಕೂ ನಮ್ಮದೇ ಅನ್ನುವ ಅನುಮಾನ ಕಾಡಲು ಶುರುವಾಗಿದೆ.

ಸುಮಾರು ದಶಕಗಳಿಂದ ಜಾರಿಗೆ ಬರದೆ ಧೂಳು ಹಿಡಿದು ಕೂತಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತನ್ನಿ ಎಂದು ಪ್ರತಿ ಬಾರಿಯೂ ಬೀದಿಗಿಳಿಯುವ ಕನ್ನಡ ಪರ ಸಂಘಟನೆಗಳ ಆಗ್ರಹಕ್ಕೆ ಸರ್ಕಾರ ಕೊಡುತ್ತಿರುವ ಕಿಮ್ಮತಾದರೂ ಏನು? ಒಂದು ಬಾಗಿಲು ಕಾಯುವ ಕೆಲಸಕ್ಕೂ ಹೊರಗಿನವರನ್ನು ತಂದು ತುಂಬಿದರೆ ಇಲ್ಲಿನ ಮಕ್ಕಳಿಗೆ ಇಲ್ಲಿ ಕೆಲಸ ಸಿಗದೇ ಬೇರೆಲ್ಲಿ ಸಾಧ್ಯ? ಇದಕೆಲ್ಲ ಪರಿಹಾರವೆಂದರೆ ಮೊದಲನೆಯದಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು. ಮಣ್ಣಿನ ಮಕ್ಕಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎನ್ನುವ ನಿಯಮವನ್ನು ಸರ್ಕಾರ ಜಾರಿಗೆ ತರಬೇಕು. ಈಗಾಗಲೇ ಇಂತಹ ವ್ಯವಸ್ಥೆಯನ್ನು ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಒರಿಸ್ಸಾ ಹಾಗೂ ಗುರಜಾತ ದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಇದರ ಜೊತೆಜೊತೆಗೆ ಉದ್ಯಮಗಳಿಗೆ ತಮ್ಮ ಹೊಲ-ಮನೆಗಳನ್ನು ಕಳೆದುಕೊಳ್ಳುವ ಕುಟುಂಬಗಳಿಗೆ ಸರಿಯಾದ ಪರಿಹಾರದ ಜೊತೆಗೆ ಸ್ಥಾಪಿಸಲಾಗುವ ಉದ್ಯಮದಲ್ಲಿ ಅವರ ವಿಧ್ಯಾರ್ಹತೆಗೆ ತಕ್ಕಂತೆ ಕೆಲಸಗಳನ್ನು ನೀಡಬೇಕು. ರಾಜ್ಯದಲ್ಲಿ ಹೊಸದಾಗಿ ಶುರುವಾಗುವ ಯಾವುದೇ ಉದ್ಯಮವಿದ್ದರೂ ಮೊದಲಿಗ ಇಲ್ಲಿಯ ಜನರಿಗೆ ಕೆಲಸಗಳನ್ನು ನೀಡಬೇಕು ಎಂದು ಸರ್ಕಾರ ಒಪ್ಪಂದ ಮಾಡಿಕೊಳ್ಳಬೇಕು ಹಾಗೂ ಅನಿಯಮಿತವಾಗಿ ಆಗುತ್ತಿರುವ ವಲಸೆಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು.

ಇದೆಲ್ಲಾ ಆಗಬೇಕೆಂದರೆ ನಮ್ಮ ರಾಜಕೀಯ ಪಕ್ಷಗಳಿಗೆ ನಾಡಿಗೆ ಒಳಿತನ್ನು ಮಾಡುವ ಇಚ್ಛಾಶಕ್ತಿ ಇರಬೇಕು. ಆದರೆ ನಿಜಕ್ಕೂ ಈ ಕಾಳಜಿ ಇಂದು ಅಸ್ತಿತ್ವದಲ್ಲಿರುವ ಯಾವುದೇ ರಾಷ್ಟ್ರೀಯ ರಾಜಕೀಯ ಪಕ್ಷಗಳಿಗೆ ಖಂಡಿತಾ ಇಲ್ಲ. ಕನ್ನಡ, ಕನ್ನಡಿಗ ಹಾಗೂ ಕರ್ನಾಟಕಗಳ ಬಗ್ಗೆ ಕಾಳಜಿ ಇರುವ ಒಂದು ನಿಜವಾದ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ ಬರಬೇಕು. ಕನ್ನಡಿಗರ ಏಳಿಗೆಯನ್ನೇ ಮೂಲಮಂತ್ರವನ್ನಾಗಿ ಇಟ್ಟುಕೊಂಡು ಕೆಲಸ ಮಾಡುವ ಪಕ್ಷ ನಮಗೆ ಬೇಕು. ಆಗ ಮಾತ್ರ ನಮ್ಮ ಹಿರಿಯರು ನಮಗಾಗಿ ಮಾಡಿರುವ ತ್ಯಾಗ, ಬಲಿದಾನ ಹೋರಾಟ ಸಾರ್ಥಕವಾದಂತೆ. ಏನಂತೀರಿ ಗೆಳೆಯರೇ?

ಸೋಮವಾರ, ಅಕ್ಟೋಬರ್ 10, 2011

ಅನಿಯಂತ್ರಿತ ವಲಸೆ ಮತ್ತು ಅದರ ದುಷ್ಪರಿಣಾಮಗಳು

ಕಳೆದ ವಾರ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣ ಮತ್ತು ಕಳೆದ ತಿಂಗಳಷ್ಟೇ ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಕೇವಲ 50 ಪೈಸೆಗೆ ನಡೆದ ಶೂಟ್ ಔಟ್ ನಂತಹ ಪ್ರಕರಣಗಳು ಒಂದು ನಾಡಿನಲ್ಲಿ ಅನಿಯಂತ್ರಿತ ವಲಸೆಯಿಂದ ಆಗಬಹುದಾದ ದುಷ್ಪರಿಣಾಮಗಳ ಚಿತ್ರಣವನ್ನು ಬಯಲುಮಾಡಿದಂತಿವೆ. ಜೊತೆಗೇ, ಕರ್ನಾಟಕದಲ್ಲಿ ಎಡೆಯಿರದೆ ನಡೆಯುತ್ತಿರುವ ಅನಿಯಂತ್ರಿತ ವಲಸೆಯಿಂದ ಕನ್ನಡಿಗರ ಉದ್ಯೋಗಕ್ಕೆ ಬಂದಿರುವ ಕುತ್ತು, ಕನ್ನಡಿಗರ ಮೇಲೆ ಆಗುತ್ತಿರುವ ದಾಳಿ ಸಾಮಾಜಿಕ ಭದ್ರತೆಯ ಬುನಾದಿಯನ್ನೇ ಅಲುಗಾಡಿಸಿದಂತಾಗಿದೆ. ಅಷ್ಟೇ ಅಲ್ಲದೆ, ಕಮ್ಮಿ ಕೂಲಿಗೆ ಸಿಗುತ್ತಾರೆಂಬ ನೆಪವೊಡ್ಡಿ ವಲಸಿಗರನ್ನು ಶೋಷಿಸುವ ಸೆಕ್ಯುರಿಟಿ ಏಜೆನ್ಸಿಗಳ ಒಂದು ವರ್ಗವೇ ಸೃಷ್ಟಿ ಆಗುತ್ತಿದ್ದು, ಕನ್ನಡಿಗರು ಮತ್ತು ಪರಭಾಷಿಕರ ಮಧ್ಯೆ ಸಾಮಾಜಿಕ ಘರ್ಷಣೆ, ತಿಕ್ಕಾಟಕ್ಕೂ ಇದು ಕಾರಣವಾಗುತ್ತಿದೆ.

ಇಷ್ಟೆಲ್ಲಾ ಗಂಭೀರ ಬೆಳವಣಿಗೆಗಳಾಗುತ್ತಿದ್ದರೂ, ನಮ್ಮ ಘನ ಸರ್ಕಾರ ಮಾತ್ರ, ಅನಿಯಂತ್ರಿತ ವಲಸೆಗೆ ಕಡಿವಾಣ ಹಾಕುವ ಯಾವ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ. ಅದರ ಬಗ್ಗೆ ಯೋಚಿಸುತ್ತಲೂ ಇಲ್ಲ. ಅದಕ್ಕೆ ವಿರುದ್ಧವಾಗಿ, ಕಡಿವಾಣವೇ ಇಲ್ಲದ ಸೆಕ್ಯುರಿಟಿ ಏಜೆನ್ಸಿಗಳನ್ನು ಬೆಳೆಯಲು ಬಿಟ್ಟು, ಅಲ್ಲಿ ನೇಮಕವಾಗುವ ಸೆಕ್ಯುರಿಟಿ ಗಾರ್ಡ್ ಗಳನ್ನಾಗಲೀ, ಅವರೊಡನೆಯೇ ಬರುವವರನ್ನಾಗಲೀ ಗೊತ್ತು ಗುರಿಯಿಲ್ಲದೆ ನಮ್ಮ ನಾಡಿನಲ್ಲಿ ಬೀಡು ಬಿಡಲು ಅನುಕೂಲ ಮಾಡಿಕೊಡುವ ವ್ಯವಸ್ಥೆಗೆ ಪ್ರೋತ್ಸಾಹ ನೀಡುತ್ತಿದೆ. ಕಂತೆಗೆ ತಕ್ಕ ಬೊಂತೆ ಎಂಬಂತೆ, ಸೆಕ್ಯುರಿಟಿ ಏಜೆನ್ಸಿಗಳೂ ಕೂಡ, ಕಮ್ಮಿ ಕೂಲಿಗೆ ಸಿಕ್ಕರೆಂಬ ಭರದಲ್ಲಿ ಇದಾವುದನ್ನೂ ಗಂಭೀರವಾಗಿ ಪರಿಗಣಿಸದೆ, ತಮ್ಮ ಲಾಭಕ್ಕೋಸ್ಕರ ವಲಸಿಗರನ್ನೂ ಶೋಷಣೆ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಜೊತೆಗೆ, ತಾವು ನೇಮಿಸಿಕೊಂಡ ವಲಸಿಗರು ಯಾರು, ಅವರ ಮೂಲ, ಇಲ್ಲಿಗೆ ಬಂದಿರುವ ಉದ್ದೇಶ, ಅವರ ವ್ಯಕ್ತಿಗತ ಹಿನ್ನೆಲೆ - ಇದಾವುದನ್ನೂ ಕಲೆ ಹಾಕುತ್ತಿಲ್ಲ ಮತ್ತು ಹೆಚ್ಚು ವಿದ್ಯಾರ್ಹತೆ ಬೇಕಿಲ್ಲದ ಇಂತಹ ಕೆಲಸಗಳಿಗೂ ಸ್ಥಳೀಯರಾದ ಕನ್ನಡಿಗರನ್ನೇ ನೇಮಿಸುವ ಕೆಲಸ ಮಾಡುತ್ತಿಲ್ಲ. ಕೆಲವೊಮ್ಮೆ ಬೇಕೆಂದೇ ಪರಭಾಷಿಕರನ್ನು ಈ ಕೆಲಸಗಳಿಗೆ ನೇಮಿಸಿಕೊಂಡು, ಕನ್ನಡಿಗರ ಉದ್ಯೋಗಕ್ಕೆ ಕಲ್ಲು ಹಾಕುತ್ತಿದ್ದಾರೆ. ನಮ್ಮ ಸರ್ಕಾರ ಈ ಕೂಡಲೆ ಇದರ ಬಗ್ಗೆ ಎಚ್ಚೆತ್ತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ, ಅತಿಬೇಗ ಈ ಸಮಸ್ಯೆಗಳು ದೊಡ್ಡ ಸಾಮಾಜಿಕ ಪಿಡುಗುಗಳಾಗಿ ಮಾರ್ಪಾಡಾಗುವ ದಿನಗಳು ದೂರವಿಲ್ಲ. ಅನಿಯಂತ್ರಿತ ವಲಸೆಯ ಕಡಿವಾಣವೇ ಇವೆಲ್ಲಕ್ಕೂ ಸೂಕ್ತ ಪರಿಹಾರವೆನಿಸುತ್ತದೆ.