ಒಕ್ಕೂಟ ವ್ಯವಸ್ಥೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಒಕ್ಕೂಟ ವ್ಯವಸ್ಥೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುರುವಾರ, ಏಪ್ರಿಲ್ 5, 2012

ಕಾವೇರಿ ನದಿ ವಿವಾದ: ಒಂದು ನೋಟ

ದಕ್ಷಿಣ ಭಾರತದ ಬಹು ದೊಡ್ಡ ನದಿಯಾದ ಕಾವೇರಿಯು ಕೊಡಗು ಜಿಲ್ಲೆಯ ಮಡಿಕೇರಿ ಸಮೀಪ ಸಮುದ್ರ ಮಟ್ಟದಿಂದ ಸುಮಾರು ೧೩೪೧ ಮೀ ಎತ್ತರದಲ್ಲಿ ಪಶ್ಚಿಮ ಘಟ್ಟದಲ್ಲಿ ಉಗಮಿಸಿ, ಪೂರ್ವಾಭಿಮುಖಿಯಾಗಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಕರ್ನಾಟಕದಲ್ಲಿ ಕಾವೇರಿಗೆ ಸೇರಿಕೊಳ್ಳುವ ಪ್ರಮುಖ ಉಪನದಿಗಳು ಹೀಗಿವೆ: ಕಬಿನಿ, ಹಾರಂಗಿ, ಕಕ್ಕಬೆ, ಕದಮುರ್, ಕಮ್ಮನಹೊಳೆ, ಹೇಮಾವತಿ, ಲಕ್ಷ್ಮಣತೀರ್ಥ, ಸುವರ್ಣವತಿ, ಶಿಂಷಾ ಹಾಗು ಅರ್ಕಾವತಿ. ಕಾವೇರಿ ನದಿಯು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಸುಮಾರು ೬೪ ಕಿ.ಮೀ ಗಳಷ್ಟು ಉದ್ದ ಗಡಿಯಾಗಿ ರೂಪಗೊಳ್ಳುತ್ತದೆ. ಇದಾದ ನಂತರ ಹೊಗೇನಕಲ್ ಜಲಪಾತದಲ್ಲಿ ನದಿಯು ತನ್ನ ಪಾತ್ರವನ್ನು ದಕ್ಷಿಣಕ್ಕೆ ತಿರುಗಿಸಿ ತಮಿಳುನಾಡಿನ ಮೆಟ್ಟೂರು ಜಲಾಶಯವನ್ನು ಸೇರುತ್ತದೆ.

ಚಿತ್ರ ಕೃಪೆ: ರೆಡ್ಡಿಫ್ ತಾಣ

ಕಾವೇರಿ ನದಿಯು ಹುಟ್ಟಿ ಸಮುದ್ರ ಸೇರುವವರೆಗಿನ ಅದರ ಒಟ್ಟು ಉದ್ದದ ರಾಜ್ಯವಾರು ಹಂಚಿಕೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು ೩೨೦ ಕಿ.ಮೀ, ತಮಿಳುನಾಡಿನಲ್ಲಿ ೪೧೬ ಕಿ.ಮೀ ನಷ್ಟಿದ್ದು ಉಳಿದ ೬೪ ಕಿ.ಮೀ ಎರೆಡು ರಾಜ್ಯಗಳ ನಡುವೆ ಗಡಿಯನ್ನು ರೂಪಿಸುತ್ತದೆ. ಕಾವೇರಿಯ ಒಟ್ಟು ಜಲಾನಯನ ಪ್ರದೇಶ ೮೧,೧೫೫ ಚ.ಕಿ.ಮೀ ಗಳಾಗಿದ್ದು ವಿವಿಧ ರಾಜ್ಯಗಳ ಪಾಲು ಈ ರೀತಿ ಇದೆ:
ರಾಜ್ಯ
ಜಲಾನಯನ ಪ್ರದೇಶ ಚ.ಕಿ.ಮೀ ಗಳಲ್ಲಿ
ಕರ್ನಾಟಕ
೩೪,೨೭೩
ಕೇರಳ
೨,೮೬೬
ತಮಿಳುನಾಡು
೪೪,೦೧೬

1892 ಹಾಗೂ 1924 ಮದ್ರಾಸ್ – ಮೈಸೂರು ಒಪ್ಪಂದಗಳು:

1982 ರ ಮದ್ರಾಸ್ – ಮೈಸೂರು ಒಪ್ಪಂದದ ಮುಖ್ಯ ಅಂಶವೆಂದರೆ ಅಂದಿನ ಮೈಸೂರು ರಾಜ್ಯ ಸರ್ಕಾರ ಕಾವೇರಿ ನದಿ ಪಾತ್ರದಲ್ಲಿ ಹರಿಯುವ ಪ್ರಮುಖ ನದಿಗಳಲ್ಲಿ ಮೈಸೂರು ಸರ್ಕಾರವು ಈಗ ಅಸ್ತಿತ್ವದಲ್ಲಿರುವ ಕಾಮಗಾರಿಗಳನ್ನು ಹೊರತು ಪಡಿಸಿ ಹೊಸ ನೀರಾವರಿ ಜಲಾಶಯಗಳನ್ನು ನಿರ್ಮಿಸತಕ್ಕದ್ದಲ್ಲ. ಒಂದು ವೇಳೆ ನಿರ್ಮಿಸಬೇಕಾದ ಸಂಧರ್ಭದಲ್ಲಿ ಕಾಮಗಾರಿಯ ಪೂರ್ಣ ಮಾಹಿತಿಯನ್ನು ಮದ್ರಾಸ್ ಸರ್ಕಾರಕ್ಕೆ ಕಳುಹಿಸಬೇಕು. ಮದ್ರಾಸ್ ಸರ್ಕಾರ ಒಪ್ಪಿಗೆ ಪಡೆದು ಹೊಸ ಜಲಾಶಯಗಳನ್ನು ಮೈಸೂರು ರಾಜ್ಯ ನಿರ್ಮಿಸಬೇಕು.

1910ರಲ್ಲಿ ಮೈಸೂರು ಸರ್ಕಾರವು ಕನ್ನಂಬಾಡಿಯಲ್ಲಿ ಕಾವೇರಿ ನದಿ ಮೇಲೆ ಜಲಾಶಯವನ್ನು ನಿರ್ಮಿಸುವ ಪ್ರಸ್ತಾವವನ್ನು ರೂಪಿಸಿ 1892ರ ಒಪ್ಪಂದದ ಅನ್ವಯ ಮದ್ರಾಸ್ ಸರ್ಕಾರದ ಒಪ್ಪಿಗೆಯನ್ನು ಕೋರಿತು. ಆದರೆ ಈ ಯೋಜನೆಗೆ ಮದ್ರಾಸ್ ರಾಜ್ಯವು ಒಪ್ಪಿಗೆ ನೀಡಲಿಲ್ಲ. ಪಟ್ಟು ಬಿಡದ ಮೈಸೂರು ರಾಜ್ಯ, ಆಣೆಕಟ್ಟಿನ ಅವಶ್ಯಕತೆಯನ್ನು ಮನವರಿಕೆ ಮಾಡಿದ ಮೇಲೆ, ನ್ಯಾಯಾಧಿಶರ ಮಧ್ಯಸ್ತಿಕೆಯಲ್ಲಿ ಮೈಸೂರು ಹಾಗೂ ಮದ್ರಾಸ್ ಸರ್ಕಾರಗಳ ನಡುವೆ ಮತ್ತೊಂದು ಒಪ್ಪಂದಕ್ಕೆ ದಿನಾಂಕ 18ನೇ ಫೆಬ್ರವರಿ 1924 ರಂದು ಸಹಿ ಹಾಕಲಾಯಿತು. ಈ ಆದೇಶದ ಪ್ರಕಾರ ಮೈಸೂರು ಸರ್ಕಾರ ಆಣೆಕಟ್ಟು ನಿರ್ಮಿಸಲು ಮದ್ರಾಸ್ ಸರ್ಕಾರ ಒಪ್ಪಿತು ಹಾಗೂ ಈ ಆಣೆಕಟ್ಟಿನ ಮೂಲಕ ಜೂನ್ – ಜನವರಿ ತಿಂಗಳವರೆಗೂ ಬಿಡುಗಡೆ ಮಾಡಬೇಕಾಗಿರುವ ನೀರಿನ ಮೊತ್ತವನ್ನು ಸೂಚಿಸಲಾಯಿತು.

ಇಲ್ಲಿ ಪ್ರಮುಖವಾಗಿ ಗಮನಿಸಬೇಕಾದ ಅಂಶವೆಂದರೆ ಮದ್ರಾಸ್ ಪ್ರಾಂತ್ಯವು ಬ್ರಿಟಿಷರ ಆಳ್ವಿಕೆಯಲ್ಲಿದ್ದ ಕಾರಣ, ಅವರಿಗೆ ಅನುಕೂಲ ಆಗುವ ಹಾಗೆ ಯೋಜನೆಗಳು ಹಾಗೂ ನೀರಿನ ಹಂಚಿಕೆ ಮಾಡಲಾಯಿತು. ಮೈಸೂರು ಸರ್ಕಾರವು ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದರಿಂದ ಹಚ್ಚಿನ ವಿರೋಧ ತೋರಿಸುವ ಶಕ್ತಿಯನ್ನು ಹೊಂದಿರಲಿಲ್ಲ.

1956ರಲ್ಲಿ ರಾಜ್ಯಗಳು ಪುನರ್ ವಿಂಗಡಣೆಯಾದಾಗ ಕರ್ನಾಟಕ ಸರ್ಕಾರವು ಕಾವೇರಿ ನದಿಯ ಉಪನದಿಗಳಾದ ಕಬಿನಿ, ಹೇಮಾವತಿ, ಹಾರಂಗಿ ಹಾಗೂ ಸುವರ್ಣಾವತಿ ಜಲಾಶಯ ಯೋಜನೆಗಳನ್ನು ಪ್ರಾರಂಭಿಸಿದಾಗ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿತು. ಸ್ವಾಂತಂತ್ರ್ಯ ಪೂರ್ವ ಮಾಡಿಕೊಂಡಿರುವ ಒಪ್ಪಂದಕ್ಕೆ ವಿರುದ್ಧವಾಗಿದೆ ಅನ್ನೋ ಕಾರಣಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತು.  ಸ್ವಾಂತಂತ್ರ್ಯದ ನಂತರ ಮತ್ತೊಮ್ಮೆ ವೈಜ್ಞಾನಿಕವಾಗಿ ಎರಡು ರಾಜ್ಯಗಳಿಗೆ ಒಪ್ಪಿಗೆಯಾಗುವಂತೆ ನದಿ ನೀರು ಹಂಚಿಕೆಯಾಗಬೇಕಾಗಿತ್ತು. ಆದ್ರೆ ಇದರ ಬಗ್ಗೆ ನಮ್ಮ ಕೇಂದ್ರ ಸರ್ಕಾರ ತಲೆಕೆಡಿಸಿಕೊಳ್ಳಲ್ಲಿಲ್ಲ.

ಗಮನಿಸಬೇಕಾದ ಅಂಶವೆಂದರೆ ಕಾವೇರಿ ನದಿಪಾತ್ರದಲ್ಲಿ ವಿವಿಧ ರಾಜ್ಯಗಳ ನದಿ ನೀರಿನ ಬಳಕೆಯನ್ನು ತಿಳಿಯಲು ಕೇಂದ್ರ ಸರ್ಕಾರ 1972ರಲ್ಲಿ ಕಾವೇರಿ ಸತ್ಯಶೋಧನಾ ಸಮಿತಿಯನ್ನು ಸ್ಥಾಪಿಸಿತು. ತನ್ನ ವರದಿಯನ್ನು ಸಲ್ಲಿಸಿದಾಗ ತಮಿಳುನಾಡಿನಲ್ಲಿ ನೀರಾವರಿಗೊಳಪಟ್ಟ ಪ್ರದೇಶ ಸುಮಾರು 1,440,000 ಎಕರೆಗಳಿಂದ 2,580,000 ಎಕರೆಗಳಿಗೆ ಹೆಚ್ಚಿಗೆಯಾಗಿತ್ತು. ಆದರೆ ಕರ್ನಾಟಕದಲ್ಲಿ ನೀರಾವರಿಗೊಳಪಟ್ಟ ಪ್ರದೇಶ 6,80,000 ಎಕರೆಗಳಷ್ಟಿತ್ತು. ತಮಿಳುನಾಡು ಸರ್ಕಾರ ಅದರ ಇಚ್ಚೆಯಂತೆ ಆಗಿದ್ದ ಸ್ವಾತಂತ್ರ್ಯಪೂರ್ವ ನಿಯಮಗಳನ್ನು ಮೀರಿತ್ತು.

ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಯೋಜನೆಯಿಂದ ತಮಗೆ ಅನ್ಯಾಯವಾಗುತ್ತಿದೆ ಎಂದು ತಮಿಳುನಾಡಿನ ರೈತರು  ಅಂತರ್ ರಾಜ್ಯ ಜಲ ವಿವಾದ ಅಧಿನಿಯಮ, 1956 ರ ಪ್ರಕರ ನ್ಯಾಯ ಮಂಡಳಿ ರಚಿಸಬೇಕು ಎಂದು ಕೇಳಿ ಸುಪ್ರೀಂ ಕೋರ್ಟ್ ಮೊರೆಹೋದರು. ಇದರ ಪ್ರಕರವಾಗಿ ಸುಪ್ರೀಂ ಕೋರ್ಟ್ 4ನೇ ಮೇ 1990 ರಂದು ಜಲವಿವಾದ ನ್ಯಾಯ ನಿರ್ಣಯಕ್ಕಾಗಿ ಒಂದು ಸೂಕ್ತ ನ್ಯಾಯಮಂಡಳಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತು.

ನ್ಯಾಯಮಂಡಳಿ ರಚನೆ ಹಾಗೂ ಕರ್ನಾಟಕದ ಪಾಲಿಗೆ ಶಾಪ:

ಚಿತ್ತತೋಷ್ ಮುಖರ್ಜಿ ಅವರ ನೇತ್ರತ್ವದಲ್ಲಿ ರಚನೆಯಾದ ನ್ಯಾಯಮಂಡಳಿ 2 ಜೂನ್ 1990  ರಂದು ತನ್ನ ಕಾರ್ಯ ಆರಂಭಿಸಿತು. ನ್ಯಾಯಮಂಡಳಿಯ ಮುಂದೆ ಕೆಳಕಂಡ ರಾಜ್ಯಗಳು ಈ ರೀತಿ ಬೇಡಿಕೆ ಇಟ್ಟವು
  • ಕರ್ನಾಟಕ ತನಗೆ 465 ಟಿಎಂಸಿ ನೀರು ಬೇಕು ಎಂದು ಹೇಳಿತು
  • ಕೇರಳ ತನಗೆ 99.8 ಟಿಎಂಸಿ ನೀರು ಬೇಕು ಎಂದು ಹೇಳಿತು
  • ಪಾಂಡಿಚೇರಿ ತನಗೆ 9.3 ಟಿಎಂಸಿ ಬೇಕು ಎಂದು ಹೇಳಿತು
  • ಆದ್ರೆ ತಮಿಳುನಾಡು ಮಾತ್ರ ಈ ಹಿಂದಿನಂತೆ ಇದ್ದ ಒಪ್ಪಂದದಂತೆ ತನಗೆ ಹಾಗೂ ಪಾಂಡಿಚೇರಿಗೆ 566 ಟಿಎಂಸಿ, 177 ಟಿಎಂಸಿ ಕರ್ನಾಟಕಕ್ಕೆ ಹಾಗೂ 5 ಟಿಎಂಸಿ ಕೇರಳಕ್ಕೆ ನೀಡಬೇಕು ಎಂದು ಕೇಳಿತು

ಇದಾದ ನಂತರ ತಮಿಳುನಾಡು ಸರ್ಕಾರ ನ್ಯಾಯಮಂಡಳಿಯ ಮುಂದೆ ಈ ಕೂಡಲೇ ಮಧ್ಯಂತರವಾಗಿ ತನಗೆ ನೀರು ಬಿಡಲು ಕಾರ್ಯಸೂಚಿ ರೂಪಿಸಬೇಕು ಎಂದು ನ್ಯಾಯಮಂಡಳಿಯ ಮುಂದೆ ಹೋಯಿತು. ಆಗ ಕಳೆದ ಹತ್ತು ವರ್ಷಗಳ ಮಾಹಿತಿಯನ್ನು ಕಲೆಹಾಕಿದ ನ್ಯಾಯಮಂಡಳಿ ತಮಿಳುನಾಡಿಗೆ ಪ್ರತಿ ವರ್ಷ 205 ಟಿಎಂಸಿ ನೀರು ಬಿಡಬೇಕು ಹಾಗೂ ಕರ್ನಾಟಕ ತನ್ನ ನೀರಾವರಿ ಪ್ರದೇಶವನ್ನು 1,120,000 ಎಕರೆಗಿಂತ ಹೆಚ್ಚಿಗೆ ಮಾಡಿಕೊಳ್ಳಬಾರದು ಎಂದು ಆದೇಶ ನೀಡಿತು. ಇದರಿಂದ ಕೋಪಗೊಂಡ ಕರ್ನಾಟಕದ ಇದಕ್ಕೆ ತಮಗೆ ಒಪ್ಪಿಗೆಯಿಲ್ಲ, ಅಂತಿಮ ತೀರ್ಪು ನೀಡಿ ಎಂದು ನ್ಯಾಯಮಂಡಳಿಯ ಮುಂದೆ ಹೇಳಿತು. ಆದರೆ ತಮಿಳುನಾಡು ಸರ್ಕಾರ ರಾಷ್ಟ್ರಪತಿಗಳ ಮೂಲಕ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಹೇಳಿಸಿ, ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಈ ತೀರ್ಪನ್ನು ಒಪ್ಪಿಕೊಳ್ಳಬೇಕಾಯಿತು ಹಾಗೂ ಈ ಮಧ್ಯಂತರ ಅದೇಶವನ್ನು ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ದಾಖಲಾಗುವಂತೆ ತಮಿಳುನಾಡು ಸರ್ಕಾರ ನೋಡಿಕೊಂಡಿತು.
ಇದರಿಂದ ಸಿಟ್ಟಿಗೆದ್ದ ಕರ್ನಾಟಕದ ಜನತೆ ರಾಜ್ಯಾದ್ಯಂತ ತೀರ್ಪಿನ ವಿರುದ್ಧ ಹೋರಾಟಗಳನ್ನು ಶುರು ಮಾಡಿದರು. ಇದೇ ರೀತಿ ತಮಿಳುನಾಡಿನಲ್ಲೂ ದಂಗೆಗಳು ಶುರುವಾದವು. ತಿಂಗಳುಗಳ ಕಾಲ ಬೆಂಗಳೂರಿನಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

1995-1996 ರಲ್ಲಿ ಕರ್ನಾಟಕದಲ್ಲಿ ಮಳೆಯ ಅಭಾವ ಕಾಣಿಸಿದ್ದರಿಂದ ತಮಿಳುನಾಡಿಗೆ ಮಧ್ಯಂತರ ಆದೇಶದಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಇದು ಗೊತ್ತಿದ್ದರೂ ಸಹ ತಮಿಳುನಾಡು ಮಧ್ಯಂತರ ಆದೇಶದಂತೆ ಕರ್ನಾಟಕ ತನಗೆ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಮುಂದೆ ಹೋಯಿತು. ಆದರೆ ಇದನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ನ್ಯಾಯಮಂಡಳಿಗೆ ಈ ಕೇಸನ್ನು ವರ್ಗಾಯಿಸುತು. ಅಲ್ಲಿ ತನ್ನ ಪ್ರಭಾವ ಬೀರಿದ ತಮಿಳುನಾಡು 11 ಟಿಎಂಸಿ ನೀರನ್ನು ಬಿಡಲು ಆದೇಶ ನೀಡಿತು. ಆ ಕಾಲದಲ್ಲಿ ಅದು ಕರ್ನಾಟಕದ ಪಾಲಿಗೆ ಅಸಾಧ್ಯವಾಗಿತ್ತು. ನಂತರ ಪ್ರಧಾನ ಮಂತ್ರಿಗಳ ಮಧ್ಯಸ್ತಿಕೆಯಲ್ಲಿ 6 ಟಿಎಂಸಿ ನೀರನ್ನು ಪಡೆಯುವಲ್ಲಿ ತಮಿಳುನಾಡು ಸಫಲವಾಯಿತು.

ಸಿ.ಆರ್. ಎಂಬ ಒಕ್ಕೂಟ ವಿರೋಧಿ ಮಂಡಳಿ

1997 ರಲ್ಲಿ ಕೇಂದ್ರ ಸರ್ಕಾರವು ಮಧ್ಯಂತರ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ಸಿ.ಆರ್.ಎ ಎಂಬ ಮಂಡಳಿಯೊಂದನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಎರಡು ರಾಜ್ಯಗಳ ಮುಂದೆ ಇಟ್ಟಿತು. ಇದರ ಅನ್ವಯ ಈ ಮಂಡಳಿಗೆ ಮದ್ಯಂತರ ಆದೇಶವನ್ನು ಜಾರಿಗೆ ತರಲು ಆಣೆಕಟ್ಟುಗಳನ್ನು ತನ್ನ ವಶಕ್ಕೆ ತಗೆದುಕೊಳ್ಳುವ ಹಕ್ಕನ್ನು ನೀಡಿತ್ತು. ಆದರೆ ಕರ್ನಾಟಕ ಸರ್ಕಾರ ಇಂತಹ ಒಕ್ಕೂಟ ವಿರೋಧಿ ಮಂಡಳಿಯನ್ನು ಸಾರಸಗಟಾಗಿ ತಿರಸ್ಕರಿಸಿತು. ಇದಾದ ನಂತರ ಕೇಂದ್ರ ಇಂತಹ ಅವೈಜ್ಞಾನಿಕ ಹಕ್ಕುಗಳನ್ನು ತಗೆದು ಹಾಕಿ ಕೊನೆಗೆ ಕಾವೇರಿ ರಿವರ್ ಅಥಾರಿಟಿ ಹಾಗೂ ಕಾವೇರಿ ಮಾನಿಟರಿಂಗ್ ಕಮಿಟಿಯಂಬ ಎರೆಡು ಸಮಿತಿಗಳನ್ನು ಸ್ಥಾಪಿಸಿತು.

2002ರಲ್ಲಿ ಕಾವೇರಿದ ಕಾವೇರಿ ಹೋರಾಟ

2002ರಲ್ಲಿ ಹಿಂದೆ 1995ರಲ್ಲಿ ಕಾಣಿಸಿಕೊಂಡ ಬರಗಾಲದ ಪರಿಸ್ಥಿತಿ ಮತ್ತೊಮೆ ಎದುರಾಯಿತು. ರಾಜ್ಯದ ಯಾವುದೇ ಜಲಾಶಯದಲ್ಲೂ ತನ್ನ ಬಳಕೆಗೆ ಬೇಕಾಗುವಷ್ಟು ನೀರು ಸಹ ಇರಲಿಲ್ಲ ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ತನ್ನ ಜನರಿಗಾಗಿ ನೀರನ್ನು ಬಿಡುವಂತೆ ಆಗ್ರಹಿಸಿ ನ್ಯಾಯಮಂಡಳಿಯ ಮುಂದೆ ಹೋಯಿತು. ಆದರೆ ನ್ಯಾಯಮಂಡಳಿ ತನ್ನ ಮಧ್ಯಂತರ ತೀರ್ಪಿನಲ್ಲಿ ಬರಗಾಲದ ಪರಿಸ್ಥಿತಿಯಲ್ಲಿರಬೇಕಾದ ಹಂಚಿಕೆ ಸೂತ್ರವನ್ನು ಹೇಳಿರಲಿಲ್ಲ. ಹಾಗಾಗಿ ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಈ ಸಾರಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಕಾವೇರಿ ರಿವರ್ ಅಥಾರಿಟಿ ಬದಲಾವಣೆ ಮಾಡುವ ತನಕ ಪ್ರತಿ ದಿನ 1.25 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಹೇಳಿತು. ಸರ್ಕಾರ ಇದೇ ಹೊತ್ತಿನಲ್ಲಿ ಸಿ.ಆರ್.ಎ ಮತ್ತೊಂದು ಸಭೆಯನ್ನು ಕರೆಯಬೇಕು ಎಂದು ಹೇಳಿತು. ಸಿ.ಆರ್.ಎ ಪ್ರಕಾರ ಕರ್ನಾಟಕ ಪ್ರತಿದಿನ ತಮಿಳುನಾಡಿಗೆ 0.8 ಟಿಎಂಸಿ ನೀರನ್ನು ಬಿಡಬೇಕು ಎಂದು ಹೇಳಿತು.

ಆದರೆ ಅದಾಗಲೇ ಕರ್ನಾಟಕದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಕರ್ನಾಟಕದಲ್ಲಿ ಮತ್ತೊಮ್ಮೆ ದೊಡ್ಡ ಹೋರಾಟ ಶುರುವಾಯಿತು. ಜನರ ಹೋರಾಟಕ್ಕೆ ಮಣಿದ ಸರ್ಕಾರ ತಮಿಳುನಾಡಿಗೆ ಬಿಡುತ್ತಿದ್ದ ನೀರನ್ನು ನಿಲ್ಲಿಸಿತು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ನೀರು ಬಿಡಲು ಶುರುಮಾಡಿದಾಗ ಕರ್ನಾಟಕದ ರೈತರೊಬ್ಬರು ಸೆಪ್ಟಂಬರ್ 18ರಂದು ನದಿಗೆ ಹಾರಿ ಪ್ರಾಣ ಬಿಟ್ಟರು. ಇದರಿಂದಾಗಿ ಪರಿಸ್ಥಿತಿ ಇನ್ನೂ ಕೆಟ್ಟಿತು. ಕಾವೇರಿ ನದಿ ಪಾತ್ರದ ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆದರೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರ್ನಾಟಕ ಸರ್ಕಾರ ನೀರು ಬಿಡಲು ಒಪ್ಪಲಿಲ್ಲ. ಇದಕ್ಕೆ ಪ್ರತಿಯಾಗಿ ತಮಿಳುನಾಡು ಮತ್ತೆ ಕೋರ್ಟ್ ಮೆಟ್ಟಿಲೇರಿತು. ನಂತರ ಈ ಸಂಬಂಧ ಕರ್ನಾಟಕ ಸರ್ಕಾರ ಕೋರ್ಟ್ ಆದೇಶ ಪಾಲಿಸದಿರುವ ಸಲುವಾಗಿ ಕೋರ್ಟ್ ಮುಂದೆ ಬೇಷರತ್ ಕ್ಷಮೆ ಯಾಚಿಸಿತ್ತು.

2007ರಲ್ಲಿ ಬಂದ ನ್ಯಾಯಮಂಡಳಿಯ ಅನ್ಯಾಯದ ತೀರ್ಪು

ಫೆಬ್ರವರಿ 5 2007 ರಲ್ಲಿ ಕಾವೇರಿ ನ್ಯಾಯಮಂಡಳಿಯು ತನ್ನ ತೀರ್ಪನ್ನು ಪ್ರಕಟಿಸಿತು. ತೀರ್ಪಿನ ಪ್ರಕಾರ ತಮಿಳುನಾಡಿಗೆ 419 ಟಿಎಂಸಿ ನೀರು, ಕರ್ನಾಟಕಕ್ಕೆ 270ಟಿಎಂಸಿ ನೀರು, ಪ್ರತಿ ವರ್ಷ ಕರ್ನಾಟಕ ತಮಿಳುನಾಡಿಗೆ 192 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಕೇರಳ ರಾಜ್ಯಕ್ಕೆ 30 ಟಿಎಂಸಿ ಹಾಗೂ ಪಾಂಡಿಚೇರಿ ಗೆ 7 ಟಿಎಂಸಿ ನೀರನ್ನು ನ್ಯಾಯ ಮಂಡಳಿ ತನ್ನ ತೀರ್ಪಿನಲ್ಲಿ ಹಂಚಿಕೆ ಮಾಡಿತ್ತು. ತೀರ್ಪನ್ನು ತಮಿಳುನಾಡು ಸ್ವಾಗತಿಸಿದರೆ ಕರ್ನಾಟಕ ಸರ್ಕಾರ ತೀರ್ಪನ್ನು ವಿರೋಧಿಸಿ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಿತು. ಈ ತೀರ್ಪನ್ನು ನೀಡುವಾಗ ತಮಿಳುನಾಡು ಸರ್ಕಾರ ತನ್ನ ಪ್ರಭಾವವನ್ನು ನ್ಯಾಯಮಂಡಳಿಯ ಮೇಲೆ ಬೀರುರುವ ಶಂಕೆ ಉಂಟಾಗುತ್ತದೆ. ಕಾರಣ:
  • ಮೊದಲಿನಿಂದಲೂ ಕರ್ನಾಟಕದಲ್ಲಿ ನೀರಾವರಿಗೆ ನೀರು ದೊರಕದಂತೆ ಮಾಡಿ ತನ್ನ ನೀರಾವರಿ ಪ್ರದೇಶವನ್ನು ಹೆಚ್ಚಿಸಿಕೊಂಡ ತಮಿಳುನಾಡು ನಂತರ ಅದು ತನಗೆ ಹೆಚ್ಚಿನ ಪಾಲಿನ ನೀರು ಬರಬೇಕಿರುವುದು ತನ್ನ ಹಕ್ಕು ಎನ್ನುವಂತೆ ನ್ಯಾಯಧಿಕರಣದ ಮುಂದೆ ವಾದ ಮಾಡಿ ಹೆಚ್ಚಿನ ಪಾಲನ್ನು ಪಡೆಯಿತು.
  • ಕರ್ನಾಟಕ ಹಾಗೂ ತಮಿಳುನಾಡಿನ ನಡುವ ಹರಿದ ನೀರನ್ನು ಮಾಪನ ಮಾಡಲು ಮೆಟ್ಟೂರಿನಲ್ಲಿ ಅಳೆಯಲಾಗುತ್ತಿತ್ತು, ಆದರೆ ಈ ತೀರ್ಪಿನಲ್ಲಿ ಅದನ್ನು ಕರ್ನಾಟಕದ ಬಿಳಿಗುಂಡ್ಲುವಿನಲ್ಲಿ ಅಳೆಯಲು ತೀರ್ಪು ನೀಡಲಾಯಿತು. ಗಮನಿಸಬೇಕಾದ ಅಂಶವೆಂದರೆ ಬಿಳಿಗುಂಡ್ಲುವಿನಿಂದ ಮೆಟ್ಟೂರಿಗೆ ಸುಮಾರು 25 ಟಿಎಂಸಿ ನೀರು ಹರಿದು ಹೋಗುತ್ತದೆ, ಆದರೆ ಇದರ ಲೆಕ್ಕವನ್ನು ಕರ್ನಾಟಕ ಬಿಡುವ ನೀರಿಗೆ ಸೇರಿಸುವ ಹಾಗಿಲ್ಲ.
  • ಕೇರಳಕ್ಕೆ ಕರ್ನಾಟಕದಿಂದ 21 ಟಿಎಂಸಿ ಹಾಗೂ ತಮಿಳುನಾಡಿನಿಂದ 9 ಟಿಎಂಸಿ ನೀರು ಬಿಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಕೇರಳ ಈ ನೀರನ್ನು ಉಪಯೋಗಿಸದ ಕಾರಣ ತಮಿಳುನಾಡು ತನ್ನ 9 ಟಿಎಂಸಿ ನೀರನ್ನು ಉಪಯೋಗಿಸಲು ನ್ಯಾಯಾಧಿಕರಣ ಅವಕಾಶ ನೀಡಿತು. ಆದರೆ ಕರ್ನಾಟಕಕ್ಕೆ ಮಾತ್ರ 21 ಟಿಎಂಸಿ ನೀರನ್ನು ಬಳಕೆ ಮಾಡಲು ಅವಕಾಶ ಕೊಡದೆ ತಮಿಳುನಾಡಿಗೆ ಹರಿಸಲು ಆದೇಶ ನೀಡಿತು ಹಾಗೂ ಬೇಕಾದಲ್ಲಿ ತಮಿಳುನಾಡು ಈ ನೀರನ್ನು ಬಳಸಲು ಅವಕಾಶ ನೀಡಿತು.
  • ಪರಿಸರ ರಕ್ಷಣೆಗಾಗಿ ಕರ್ನಾಟಕ 10 ಟಿಎಂಸಿ ನೀರು ಬಿಡಬೇಕು, ಆದರೆ ತಮಿಳುನಾಡಿಗೆ ಯಾವುದೇ ನೀರು ಬಿಡಲು ಆದೇಶದಲ್ಲಿ ತಿಳಿಸಲಾಗಿಲ್ಲ. ಪರಿಸರ ರಕ್ಷಣೆ ಕೇವಲ ಕರ್ನಾಟಕದ ಜವಾಬ್ದಾರಿಯಾಗಿದೆಯೇ?
  • ನ್ಯಾಯಾಧಿಕರಣ ಕರ್ನಾಟಕಕ್ಕೆ ಕುಡಿಯುವ ನೀರಿನ ಸಲುವಾಗಿ ತಗೆದಿಟ್ಟಿರುವ ಪಾಲು ಕೇವಲ 2 ಟಿಎಂಸಿ. ಬೆಂಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳನೆಲ್ಲ ಒಟ್ಟಾಗಿ ಸೇರಿಸಿದರೆ ಬೇಕಾಗುವ ನೀರಿನ ಮೊತ್ತ 60 ಟಿಎಂಸಿ.
  • ನ್ಯಾಯಧಿಕರಣದ ತಜ್ಞರ ವರದಿಯ ಪ್ರಕಾರ ತಮಿಳುನಾಡಿಗೆ 395 ಟಿಎಂಸಿ ನೀರು ಅಗತ್ಯವಿತ್ತೆಂದು ಹೇಳಲಾಗಿತ್ತು, ಆದರೆ ನ್ಯಾಯಧಿಕರಣದಲ್ಲಿ ಅದಕ್ಕೆ ಬರೋಬ್ಬರಿ 458 ಟಿಎಂಸಿ ನೀರನ್ನು ನೀಡಲಾಗಿದೆ!!

ಕರ್ನಾಟಕದಲ್ಲಿ ನಡೆದ ಹೋರಾಟಗಳು

ಕರ್ನಾಟಕದ ಪಾಲಿಗೆ ಮರಣ ಮೃದಂಗದಂತಿದ್ದ ಈ ತೀರ್ಪನ್ನು ವಿರೋಧಿಸಿ ರಾಜ್ಯದ ಎಲ್ಲಾ ವರ್ಗಗಳು ಬೀದಿಗೆ ಇಳಿದವು, ರೈತ ಸಂಘ, ಸಾಹಿತಿ ವಲಯ, ರಾಜಕೀಯ ವಲಯ, ಕನ್ನಡಪರ ಸಂಘಟನೆಗಳೆಲ್ಲ ಒಂದಾಗಿ ಈ ತೀರ್ಪನ್ನು ವಿರೋಧಿಸಿದವು. ಕರ್ನಾಟಕ ರಕ್ಷಣಾ ವೇದಿಕೆ ಈ ತೀರ್ಪು ಹೊರಬಂದ ಕೆಲವೇ ನಿಮಿಷಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಹೋರಾಟಗಳನ್ನು ಶುರುಮಾಡಿತು. ಇದರ ಜೊತೆಗೆ ತಲಕಾವೇರಿಯಿಂದ ಬೆಂಗಳೂರಿನ ವರೆಗೂ ಪಾದಯಾತ್ರೆಯನ್ನು ಮಾಡಿ ತೀರ್ಪಿನ ವಿರುದ್ಧ ಜನರನ್ನು ಸಂಘಟಿಸುವ ಕೆಲಸ ಮಾಡಿತು. ರಾಜ್ಯದ ಇತಿಹಾಸದಲ್ಲೇ ಸುಮಾರು 25000 ಜನರನ್ನು ದೆಹಲಿಗೆ ಕರೆದುಕೊಂಡು ಹೋಗಿ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಸರಿಯಾದ ಎಚ್ಚರಿಕೆಯನ್ನೇ ನೀಡಿತು. ಇದಾದ ನಂತರ ಎಚ್ಚೆತ್ತುಕೊಂಡ ನಮ್ಮ ಸರ್ಕಾರ ಹಾಗೂ ಪ್ರತಿಪಕ್ಷಗಳು ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕುವಲ್ಲಿ ಯಶಸ್ವಿಯಾದರು. 

ನಮ್ಮ ರಾಜ್ಯ ಸರ್ಕಾರಗಳ ನಿಷ್ಕ್ರಿಯತೆ ಹಾಗೂ ಪ್ರಾದೇಶಿಕ ಪಕ್ಷದ ಅವಶ್ಯಕತೆ

ಕಾವೇರಿಯ ನದಿ ನೀರು ಹಂಚೆಕೆಯ ವಿವಾದವು ಉಲ್ಬಣಿಸಿದಾಗಲೆಲ್ಲ, ನಮ್ಮ ಸರ್ಕಾರಗಳಿಗಿಂತ ಮೊದಲು ಪ್ರತಿಭಟನೆ ಹಾಗೂ ಜಾಗೃತಿಗೆ ಮುಂದಾಗಿರುವುದು ರೈತ ಸಂಘ, ಕನ್ನಡ ಪರ ಸಂಘಟನೆಗಳು. ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಅನ್ನೋ ಹಾಗೆ ನಮ್ಮ ರಾಜ್ಯ ಸರ್ಕಾರ ಹಾಗೂ ರಾಜಕಾರಣಿಗಳು ಎಚ್ಚೆತ್ತುಕೊಂಡಿದ್ದಾರೆ.

ಇತ್ತೀಚಿಗೆ ಮತ್ತೆ ಈ ವಿಷಯವಾಗಿ ತಮಿಳುನಾಡು ಸರ್ಕಾರ ಮತ್ತೆ ತನ್ನ ಹೆಳೆ ವರಸೆಯನ್ನು ಶುರುಮಾಡಿದೆ. ಕರ್ನಾಟಕ ಸರ್ಕಾರ ಮೇಕೆದಾಟುವಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಆಣೆಕಟ್ಟು ಕಟ್ಟಿ ರಾಜ್ಯದ ಜನರ ಹಾಗೂ ರೈತರ ಒಳಿತಿಗಾಗಿ ನೀರನ್ನು ಸಂಗ್ರಹಿಸುವ ಯೋಜನೆಯನ್ನು ಹಾಕಿಕೊಂಡಿತ್ತು. ಆದರೆ ಇದಕ್ಕೆ ಕ್ಯಾತೆ ತಗೆದಿರುವ ಜಯಲಲಿತಾ ಅವರ ಸರ್ಕಾರ ಯಾವುದೇ ಕಾರಣಕ್ಕೂ ಕರ್ನಾಟಕ ಆಣೆಕಟ್ಟು ಕಟ್ಟಬಾರದು ಹಾಗೂ ಅದು ಸಂಗ್ರಹಿಸುವ ನೀರನ್ನು ಬೇಸಿಗೆಯ ಬೆಳೆಗೆ ಉಪಯೋಗಿಸಬಾರದು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ನಮ್ಮ ರಾಜ್ಯಕ್ಕೆ ತನ್ನ ಪಾಲಿಗೆ ನ್ಯಾಯವಾಗಿ ದಕ್ಕಬೇಕಾಗಿದ್ದ ನೀರನ್ನು ಬಳಸಿಕೊಳ್ಳಲು ಹಕ್ಕಿಲ್ಲವೇ? ಯಾವುದೋ ಓಬಿರಾಯನ ಕಾಲದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ ನಿಯಮಗಳನ್ನು ಇನ್ನೂ ಮುಂದುವರೆಸಿಕೊಂಡು ಹೋಗಬೇಕೆ? ಕಾವೇರಿ ನದಿಯ ನೀರು ಕೇವಲ ತನ್ನ ಸ್ವತ್ತು ಅನ್ನುವ ಹಾಗೆ ವರ್ತಿಸುತ್ತಿರುವ ತಮಿಳುನಾಡಿನ ದರ್ಪವನ್ನು ಸಹಿಸಿಕೊಂಡು ಸುಮ್ಮನಿರಬೇಕೆ?

ಇಲ್ಲಿ ನಮ್ಮ ರಾಜ್ಯ ಸರ್ಕಾರದ ನಿಷ್ಕ್ರಿಯತೆ ಎದ್ದು ಕಾಣಿಸುತ್ತದೆ. ಇದಕ್ಕೆ ಈ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್ ಗುಲಾಮಗಿರಿ ಕಾರಣ. ಪ್ರತಿಯೊಂದಕ್ಕು ದೆಹಲಿಯತ್ತ ಮುಖಮಾಡುವ ನಮ್ಮ ನಾಯಕರಿಂದ ಹೆಚ್ಚಿನದೇನು ನಿರೀಕ್ಷಿಸಲು ಸಾಧ್ಯ? ಕೇಂದ್ರದಲ್ಲಿ ಒಂದಲ್ಲಾ ಒಂದು ಸರ್ಕಾರದ ಜೊತೆ ಮೈತ್ರಿ ಹೊಂದಿರುವ ತಮಿಳುನಾಡಿನ ರಾಜಕೀಯ ಪಕ್ಷಗಳು ತಮಗೆ ಅನುಕೂಲವಾಗುವಂತೆ ಹಿಂದಿನಿಂದಲು ನಡೆದುಕೊಂಡು ಬಂದಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಆ ಪರಿಸ್ಥಿತಿ ಇಲ್ಲ. ಬಹುಷ: ನಮಗೂ ತಮಿಳುನಾಡಿನಲ್ಲಿರುವಂತೆ ಕರ್ನಾಟಕದ ನೆಲ, ಜಲ ಹಾಗೂ ಜನರ ಹಿತವನ್ನು ಕಾಪಾಡುವ ಒಂದು ರಾಜಕೀಯ ಪಕ್ಷದ ಅವಶ್ಯಕತೆ ಪದೇ ಪದೇ ಎದ್ದು ಕಾಣುತ್ತಿದೆ. 

ಗುರುವಾರ, ಮಾರ್ಚ್ 15, 2012

ರೈಲ್ವೆ ಯೋಜನೆಗಳು ಮತ್ತು ಕರ್ನಾಟಕಕ್ಕೆ ವಲಸೆ

ಚಿತ್ರ ಕೃಪೆ: ಅಂತರ್ಜಾಲ

ನಿನ್ನೆ ಲೋಕಸಭೆಯಲ್ಲಿ ಮಂಡಿಸಲಾದ 2012-2013 ನೇ ಸಾಲಿನ ರೈಲ್ವೆ ಬಜೆಟ್ ಕರ್ನಾಟಕದ ಪಾಲಿಗೆ ನಿರಾಸೆ ಮೂಡಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ರೈಲ್ವೆ ಬಜೆಟ್ಟಿನಲ್ಲಿ ಕರ್ನಾಟಕಕ್ಕೆ ಉಪಯೋಗವಾಗುವಂತಹ ಬೆರೆಳೆಣಿಕೆಯಷ್ಟು ಯೋಜನೆಗಳನ್ನು ಬಿಟ್ಟರೆ ಉಳಿದೆಲ್ಲಾ ಯೋಜನೆಗಳು ಹೊರ ರಾಜ್ಯದ ಜನರಿಗೆ ನಮ್ಮ ರಾಜ್ಯಕ್ಕೆ ವಲಸೆ ಬರಲು ಸುಲಭ ಮಾಡಿಕೊಡಲು ಯೋಚಿಸಿದಂತಿದೆ!! ಕೆಳಗಿರುವ ಈ ಪಟ್ಟಿಗಳನ್ನು ನೋಡಿ ೨೦೧೧ ನೇ ಸಾಲಿನ ಹಾಗೂ ೨೦೧೨ ನೇ ಸಾಲಿನಲ್ಲಿ ರಾಜ್ಯಕ್ಕೆ ನೀಡಲಾಗಿರುವ ಹೊಸ ರೈಲುಗಳ ಸಂಚರಿಸುವ ಮಾರ್ಗವನ್ನು ನೀಡಲಾಗಿದೆ.

2011 ರಲ್ಲಿ ಕರ್ನಾಟಕಕಕ್ಕೆ ನೀಡಲಾಗಿರುವ ರೈಲುಗಳು
2012 ರಲ್ಲಿ ಕರ್ನಾಟಕಕಕ್ಕೆ ನೀಡಲಾಗಿರುವ ರೈಲುಗಳು
ಹೌರಾ – ಮೈಸೂರು ಎಕ್ಸ್‘ಪ್ರೆಸ್
ಯಶವಂತಪುರ – ಕುಚುವೇಲಿ
ಮೈಸೂರು – ಚನ್ನೈ ಎಕ್ಸ್‘ಪ್ರೆಸ್
ಚನ್ನೈ – ಬೆಂಗಳೂರು
ಅಹಮದಾಬಾದ್ – ಯಶವಂತಪುರ ಎಕ್ಸ್‘ಪ್ರೆಸ್
ಇಂದೂರ್ – ಯಶವಂತಪುರ
ಗೋರಕ್ಪುರ – ಯಶವಂತಪುರ ಎಕ್ಸ್‘ಪ್ರೆಸ್
ಮೈಸೂರು – ಸಾಯಿನಗರ
ವಾಸ್ಕೋ – ವೆಲಂಕಣಿ ಎಕ್ಸ್‘ಪ್ರೆಸ್
ಸೊಲ್ಲಾಪುರ – ಯಶವಂತಪುರ
ಎರ್ನಾಕುಲಂ – ಬೆಂಗಳೂರು ಎಕ್ಸ್‘ಪ್ರೆಸ್
ಬೀದರ್ – ಸಿಕಂದರಾಬಾದ್
ಹೌರಾ – ಮಂಗಳೂರು ವಿವೇಕ ಎಕ್ಸ್‘ಪ್ರೆಸ್


2012  ರಲ್ಲಿ ಮಾರ್ಗ ವಿಸ್ತರಣೆಯ ರೈಲುಗಳು
ಪಾಲಕ್ಕಾಡ್ – ಮಂಗಳೂರು ಎಕ್ಸ್‘ಪ್ರೆಸ್ ಕೊಯಮುತ್ತೂರುವರೆಗೆ
ದಾದರ್ – ಯಶವಂತಪುರ ಎಕ್ಸ್‘ಪ್ರೆಸ್ – ಪುದುಚೇರಿವರೆಗೂ
ಮಂಗಳೂರು – ತಿರುವನಂತಪುರ ಎಕ್ಸ್‘ಪ್ರೆಸ್ – ನಾಗರಕೊಯಿಲ್ ವರೆಗೂ

ಈ ಹೊಸ ರೈಲು ಯೋಜನೆಗಳು, ವಿಸ್ತರಣೆಗಳು ಎಲ್ಲವೂ ನಮ್ಮ ರಾಜ್ಯದ ಜನರ ಓಡಾಟವನ್ನು ಸುಲಭಗೊಳಿಸುವ ಬದಲು ಹೊರ ರಾಜ್ಯದ ಜನರನ್ನು ನಮ್ಮ ರಾಜ್ಯದ ರಾಜಧಾನಿಗೆ ತಂದಿಳಿಸುವ ಯೋಜನೆಗಳಾಗಿ ಕಾಣುತ್ತವೆ. ಇನ್ನು ನಮ್ಮ ರಾಜ್ಯದ ಯೋಜನೆಗಳ ಪಟ್ಟಿ ನೋಡಿದರೆ ಅಲ್ಲಿ ಇನ್ನು ಗೇಜ್ ಪರಿವರ್ತನೆ, ಮಾರ್ಗಗಳ ಸರ್ವೆ, ಮೇಲ್ಸೇತುವ, ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವಿಕೆ ಯಂತಹ ಸಣ್ಣ ಯೋಜನೆಗಳು ಕಾಣಸುಗುತ್ತವೇ ಹೊರತು ನಮ್ಮ ಜನರ ಸಂಚಾರವನ್ನು ಸುಲಭಗೊಳಿಸುವ ಯೋಜನೆಗಳು ಕಾಣಸಿಗುವುದಿಲ್ಲ. ಈ ಹಿಂದೆ ೨೦೧೧ ನೇ ಸಾಲಿನ ರೈಲ್ವೆ ಬಜೆಟ್ ಸಮಯದಲ್ಲಿ ನಾನು ಮಾಡಿದ್ದ ವಿಶ್ಲೇಷಣೆ ಈ ವರ್ಷಕ್ಕೂ ಅನ್ವಯಿಸಬಹುದು.

ಜನಸಾಂದ್ರತೆ:
ಜನರು ಬೇರೆಡೆಗೆ ವಲಸೆ ಹೋಗಲು ಆಯಾ ರಾಜ್ಯದಲ್ಲಿರುವ ಜನಸಾಂದ್ರತೆಯು ಕಾರಣವಾಗಿರಬಹುದು. ಆಯಾ ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯೆಯಿಂದಾಗಿ, ಆಲ್ಲಿ ಏರ್ಪಡುವ ಪೈಪೋಟಿಯಿಂದಾಗಿ, ಬದುಕು ಕಂಡುಕೊಳ್ಳಲು ಜನರು ಹೊರ ರಾಜ್ಯಗಳಿಗೆ ವಲಸೆ ಹೋಗುವುದಕ್ಕೆ ಶುರು ಮಾಡುತ್ತಾರೆ. ರೈಲ್ವೆ ಇಲಾಖೆ ತಯಾರಿಸುವ ಇಂತಹ ಯೋಜನೆಗಳು ಜನರಿಗೆ ಕರ್ನಾಟಕದಂತಹ ಕಡಿಮೆ ಜನಸಾಂದ್ರತೆ ಹೊಂದಿರುವ ರಾಜ್ಯಗಳಿಗೆ ವಲಸೆ ಬರಲು ಉತ್ತೇಜನ ನೀಡುವಂತೆ ಕಾಣಿಸುತ್ತವೆ. ಕೆಳಗೆ ಕೊಟ್ಟಿರುವ ಪಟ್ಟಿಯಲ್ಲಿ ವಿವಿಧ ರಾಜ್ಯಗಳಲ್ಲಿರುವ ಜನಸಾಂದ್ರತೆಯನ್ನು ನೋಡಿ:

ರಾಜ್ಯ
ಪ್ರತಿ ಚದುರ ಕಿಮಿಗೆ ಇರುವ ಜನಸಾಂದ್ರತೆ
ಬಿಹಾರ್
1102
ಉತ್ತರ ಪ್ರದೇಶ
828
ಪಶ್ಚಿಮ ಬಂಗಾಳ
1030
ತಮಿಳುನಾಡು
555
ಕೇರಳ
859
ಕರ್ನಾಟಕ
319
ಮಾಹಿತಿ: ಮ್ಯಾಪ್ಸ್ ಆಫ್ ಇಂಡಿಯಾ

ರೈಲ್ವೆ ಇಲಾಖೆಯನ್ನು ರಾಜ್ಯಗಳ ಕೈಗೆ ಒಪಿಸಬೇಕು:

ನಮ್ಮ ರಾಜ್ಯದಲ್ಲಿ ಯಾವ ಊರಿಂದ ಊರಿಗೆ ರೈಲುಗಳಿರಬೇಕು, ಎಷ್ಟು ರೈಲುಗಳನ್ನು ಓಡಿಸಬೇಕು ಎಂದು ಈಗ ಕೇಂದ್ರದಲ್ಲಿ ಕುಳಿತಿರುವ ರೈಲ್ವೆ ಮಂಡಳಿ ನಿರ್ಧರಿಸುತ್ತದೆ. ಹಲವು ದಶಕಗಳಿಂದ ಹಲವಾರು ಅವಶ್ಯಕ ಯೋಜನೆಗಳ ಬಗ್ಗೆ ಇಲಾಖೆಗೆ ನಮ್ಮ ಶಾಸಕರು, ಸಂಸದರು ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಅವಿನ್ನೂ ಧೂಳು ಹಿಡಿದು ಕೂತಿವೆ. ಯಾವ ಊರಿಂದ ಯಾವ ಊರಿಗೆ ರೈಲು ಮಾರ್ಗ ಇರಬೇಕು, ಇದರ ಒಳಿತು ಕೆಡಕೇನು ಅನ್ನುವುದು ಅವರಿಗಿಂತ ನಮಗೆ ಚೆನ್ನಾಗಿ ಗೊತ್ತಿರುತ್ತದೆ ಅಲ್ಲವೇ? ಆದ್ದರಿಂದ ರೈಲ್ವೆ ಇಲಾಖೆಯನ್ನು ರಾಜ್ಯಗಳ ಕೈಗೆ ಕೇಂದ್ರ ಸರ್ಕಾರ ಒಪ್ಪಿಸಬೇಕು ಇದರಿಂದ ಆಯಾ ರಾಜ್ಯಕ್ಕೆ ಬೇಕಾಗಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಯಾರದೋ ಮರ್ಜಿಗೆ ಕಾಯುವ ಅವಶ್ಯಕತೆ ಇರುವುದಿಲ್ಲ.

ಮಂಗಳವಾರ, ಫೆಬ್ರವರಿ 7, 2012

ಸರೋಜಿನಿ ಮಹಿಷಿ ವರದಿ ಎಂಬ ಕನ್ನಡಿಯೊಳಗಿನ ಗಂಟು


ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸದಾನಂದ ಗೌಡರು “ಬದಲಾದ ಕಾಲಘಟಕ್ಕೆ ಅನುಗುಣವಾಗಿ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಈ ಸಂಬಂಧ ಸಮಿತಿ ರಚಿಸಲು ಸರ್ಕಾರದ ಚಿಂತನೆ ನಡೆಸಿದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ನಂತರ ಕನ್ನಡಿಗರಿಗೆ ಉದ್ಯೋಗ ಕೊಡಬೇಕೆಂಬ ವರದಿಯ ಬಗ್ಗೆ ಮಾತಾಡಿರುವದು ನಮ್ಮ ಪುಣ್ಯ!!! ಅದಕ್ಕಾಗಿ ನಮ್ಮ ಮುಖ್ಯಮಂತ್ರಿಗಳಿಗೆ ಶುಭಾಷಯ ಹೇಳೋಣ. ಅದ್ರೆ ಮೂರು ದಶಕಗಳಿಂದ ಧೂಳು ಹಿಡಿದು ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುತ್ತೇವೆ ಅನ್ನೋ ಹೇಳಿಕೆ ಬದಲು ಸಮಿತಿ ರಚಿಸಲು ಚಿಂತನೆ ನಡೆಸುತ್ತೇವೆ, ಯೋಚಿಸುತ್ತಿದ್ದೇವೆ, ಜಾರಿ ಮಾಡುತ್ತೇವೆ... ಅನ್ನೋ ಅವರ ಪದ ಪ್ರಯೋಗಗಳು ಗಾಳಿಯಲ್ಲಿ ಗೋಪುರ ಕಟ್ಟುವ ಪ್ರಯತ್ನವಾಗಿ ಕಾಣುತ್ತಿದೆ.
(ಚಿತ್ರಕೃಪೆ: ಅಂತರ್ಜಾಲ)

ಮೂರು ದಶಕಗಳ ಹಿಂದೆ ತಯಾರಿಸಲಾದ ಸರೋಜಿನಿ ಮಹಿಷಿ ವರದಿಯನ್ನು, ಕಳೆದ ೧೫ ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಔದ್ಯೋಗಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಇಂದಿನ ದಿನ ಮಾನಕ್ಕೆ ತಕ್ಕಂತೆ ಶಿಫಾರಸ್ಸುಗಳನ್ನು ಬದಲಾಯಿಸಬೇಕಾಗಿರುವುದು ಇಂದಿನ ಅವಶ್ಯಕತೆ. ಇಷ್ಟರಲ್ಲಾಗಲೇ ಈ ಕೆಲಸ ಮಾಡಬೇಕಾಗಿದ್ದ ಸರ್ಕಾರ ಇನ್ನೂ ಸಮಿತಿ ರಚಿಸುವಲ್ಲಿ, ಚಿಂತನೆ ನಡೆಸುವಲ್ಲಿ, ಬೇಡಿಕೆ ಪರಿಶೀಲಿಸುವುದರಲ್ಲಿ ಮೀನಾಮೇಷ ಎಣಿಸುತ್ತ ಜನರ ಕಿವಿಯ ಮೇಲೆ ಹೂವು ಇಡುತ್ತಿದೆ.

ಸರೋಜಿನಿ ಮಹಿಷಿಯಲ್ಲಿ ಹೇಳಿರುವ ಉದ್ಯೋಗ ಮೀಸಲಾತಿಯ ಬಗ್ಗೆ ನೋಡುತ್ತಿದ್ದಾಗ, ಈ ಯೋಚನೆಯನ್ನ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಮಾಡಿದ್ದಾರೆಯೇ? ಇದರ ಅನುಷ್ಠಾನ ಬಲು ಕಷ್ಟವಾದ ಕ್ರಿಯೆಯೇ? ಈ ತರಹದ ಯೋಜನೆಗಳನ್ನು ಬೇರೆ ರಾಜ್ಯದಲ್ಲಿ ಮಾಡಲಾಗಿದೆಯೆ? ಅಂತ ಕುತೂಹಲದಿಂದ ಹುಡಿಕಿದರೆ ನಮಗೆ ಆಶ್ಚರ್ಯ ಕಾದಿದೆ. ಬಿ.ಜೆ.ಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ವಿವಿಧ ರಾಜ್ಯಗಳಲ್ಲಿ ತಮ್ಮ ರಾಜ್ಯದ ಜನರ ಹಿತಾಸಕ್ತಿಗಾಗಿ ಎಲ್ಲಾ ಹಂತದ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿವೆ. ಅಂತಹ ಕೆಲವು ರಾಜ್ಯಗಳ ಮಾಹಿತಿಯನ್ನು ನಾವು ಈಗ ನೋಡೋಣ

ಮಹಾರಾಷ್ಟ್ರ:
ನವೆಂಬರ್ 2008 ರಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿನ ಎಲ್ಲ ಉದ್ಯೋಗಗಳಲ್ಲೂ 80% ಅಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು ಎಂದು ತೀರ್ಮಾನಿಸಲಾಯಿತು. ಅದರಲ್ಲೂ ಮುಂಬರುವ 140 ಎಸ್..ಜೆಡ್. ಗಳಲ್ಲಿ ಆರಂಭವಾಗು ಎಲ್ಲ ಕಂಪನಿಗಳ ಹುದ್ದೆಗಳಲ್ಲಿ 80% ಸ್ಥಳೀಯರಿಗೆ ಕೊಡಬೇಕು ಎಂದು ಆದೇಶ ಹೊರಡಿಸಿತು. ಇದು, ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಬಗ್ಗೆ 1968 ನಂತರ, ಮಹಾರಾಷ್ಟ್ರ ಸರ್ಕಾರ ಹೊರಡಿಸಿದ 6ನೇ ಸರ್ಕಾರಿ ಆದೇಶ.

ಒರಿಸ್ಸಾ:
ಅಕ್ಟೋಬರ್ 2008 ರಲ್ಲಿ ಒರಿಸ್ಸಾ ಸರ್ಕಾರ ಕೂಡ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಒರಿಸ್ಸಾದಲ್ಲಿನ ಎಲ್ಲ ಗ್ರೂಪ್ ’ಸಿ ಮತ್ತು ’ಡಿ ಉದ್ಯೋಗಗಳಲ್ಲೂ 90% ಅಷ್ಟು ಹುದ್ದೆಗಳನ್ನು, ಹಾಗೂ ಗ್ರೂಪ್ ’ಎ ಮತ್ತು ’ಬಿ ಹುದ್ದೆಗಳಲ್ಲಿ 65% ಅಷ್ಟು ಸ್ಥಳೀಯರಿಗೆ ಮೀಸಲಿಡಬೇಕು ಎಂದು ತೀರ್ಮಾನಿಸಿತು. ಹೊಸ ಉದ್ಯೋಗ ನೀತಿಗಳನ್ನು ಅಳವಡಿಸಿ, ಕಂಪನಿಗಳೊಡನೆ ಆಗಿದ್ದ ಒಪ್ಪಂದ (MoU) ಗಳನ್ನು ಮರುಪರಿಶೀಲಿಸಿ, ಅವಶ್ಯವೆನಿಸಿದರೆ ತಿದ್ದುಪಡಿ ಮಾಡಲಾಗುವುದು ಎಂದು ಸರ್ಕಾರ ತೀರ್ಮಾನಿಸಿತು.

ತಮಿಳುನಾಡು:
2009ರ ಸರ್ಕಾರಿ ಆದೇಶದಲ್ಲಿ ತಮಿಳುನಾಡಿನಲ್ಲಿ ಸ್ಥಾಪಿಸಲಾಗುವ ಎಲ್ಲಾ ಕಾರ್ಖಾನೆಗಳಲ್ಲಿ ಶೇ 75 ರಷ್ಟು ಉದ್ಯೋಗಗಳನ್ನು ತಮಿಳುನಾಡಿನ ಜನರಿಗೆ ನೀಡಬೇಕೆಂಬ ನಿಯಮ ಮಾಡಿದೆ. ಜೊತೆಗೆ ಈ ನಿಬಂಧನೆಗೆ ಒಪ್ಪಿಕೊಳ್ಳುವ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ವಿವಿಧ ಸವಲತ್ತುಗಳನ್ನು ಒದಗಿಸುತ್ತದೆ. ಈ ಹಿಂದೆ ಸ್ಥಾಪಿಸಲಾಗಿರುವ ಸಂಸ್ಥೆಗಳು ಸಹ ಸರ್ಕಾರಿ ಅದೇಶವನ್ನು ಪಾಲಿಸಿದಲ್ಲಿ ಅವರಿಗೂ ಸಹ ಸವಲತ್ತುಗಳನ್ನು ವಿಸ್ತರಿಸುವ ಯೋಜನೆಯನ್ನು ಹೊಂದಿದೆ.

ಗುಜರಾತ:
ಗುಜರಾತ ಸರ್ಕಾರವು ತನ್ನ ಉದ್ಯಮ ನೀತಿಯಲ್ಲಿ, ತನ್ನ ರಾಜ್ಯದಲ್ಲಿ ಸ್ಥಾಪಿಸಲಾಗುವ ಉದ್ಯಮಗಳಿಂದ ಸೃಷ್ಠಿಯಾಗುವ ಉದ್ಯೋಗಗಳಲ್ಲಿ ಹೆಚ್ಚಿನ ಪಾಲು ದೊರಕುವಂತೆ ಮಾಡಲು ಯೋಜನೆಯೊಂದನ್ನು ಸ್ಥಾಪಿಸಿದೆ. ಇದರ ಮೂಲಕ ಸ್ಥಳೀಯರಿಗೆ ಹೆಚ್ಚಿನ ಕೆಲಸ ದೊರಕುವಂತೆ ಮಾಡಿದೆ.

ಈ ಮೇಲಿನ ಉದಾಹರಣೆಗಳನ್ನು ನೋಡಿದಾಗ, ಆಯಾ ರಾಜ್ಯಗಳು ತನ್ನ ರಾಜ್ಯದ ಜನರ ಹಿತಕ್ಕಾಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕೆಂಬ ಕಾನೂನು ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ನಮ್ಮ ಭಾರತ ದೇಶದ ಪ್ರತಿಯೊಂದು ರಾಜ್ಯಗಳು ತಮ್ಮದೇ ಆದ ರಾಜ್ಯ ಸರ್ಕಾರವನ್ನು ಹೊಂದಿವೆ. ಜನರಿಂದ ಆರಿಸಲಾಗುವ ಈ ಸರ್ಕಕಾರಗಳು, ತನ್ನನ್ನು ಆರಿಸಿ ಕಳುಹಿಸಿದ ಜನರಿಗೆ ಸವಲತ್ತುಗಳನ್ನು ಒದಗಿಸುವುದು ಸರಿಯಾದ ಕ್ರಮ, ಇದಲ್ಲದೇ ಆಯಾ ರಾಜ್ಯದಲ್ಲಿ ಸ್ಥಾಪಿಸಲಾಗುವ ಉದ್ಯಮಗಳಿಗೆ ತೆರಿಗೆ ವಿನಾಯಿತಿ, ರಿಯಾಯಿತಿ ದರದಲ್ಲಿ ವಿದ್ಯುತ್, ನೀರು, ಭೂಮಿ ಎಲ್ಲವನ್ನೂ ನೀಡುವಾಗ ಖರ್ಚಾಗುವುದು ಜನರ ತೆರಿಗೆಯ ಹಣ. ಹಾಗಾಗಿ ಅಲ್ಲಿಯ ಜನರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದು ಸಹಜ ನ್ಯಾಯವಾಗಿ ಕಾಣುತ್ತದೆ. ನಮ್ಮ ರಾಜ್ಯ ಸರ್ಕಾರವೂ ಪರಿಷ್ಕೃತ ಸರೋಜಿನಿ ಮಹಿಷಿ ವರದಿಯನ್ನು ಒಂದು ಕಾಲಮಿತಿ ಯೋಜನೆಯನ್ನಾಗಿ ಮಾಡಿಕೊಂಡು ಅನುಷ್ಠಾನಕ್ಕೆ ತರಲು ಚಿಂತನ-ಮಂಥನ ಮಾಡುವುದನ್ನು ಬಿಟ್ಟು ಜಾರಿಗೆ ತರಲಿ ಎಂದು ಆಶಿಸೋಣ.

ಮುಗಿಸುವುದಕ್ಕಿಂತ ಮುಂಚೆ: ಫೆಬ್ರವರಿ ತಿಂಗಳಿನಲ್ಲಿ ಜೆ.ಪಿ ನಗರದಲ್ಲಿ ನಡೆದ ಉದ್ಯೋಗ ಮೇಳದ ಜಾಹೀರಾತನ್ನು ಇಂಗ್ಲಿಷಿನಲ್ಲಿ ಹಾಕಲಾಗಿತ್ತು, ಇದನ್ನ ನಾನು ಹಾಗೂ ಕೆಲವು ಗೆಳೆಯರು ಪ್ರಶ್ನಿಸಿದಾಗ, ಜಿ.ಪಿ ನಗರದಲ್ಲಿ ಭಾರತದ ಎಲ್ಲಾ ಜನರು ವಾಸಿಸುತ್ತಾರೆ, ಹಾಗಾಗಿ ಕೆಲಸಗಳನ್ನು ಕೇವಲ ಕನ್ನಡಿಗರಿಗೆ ನೀಡಬೇಕು ಎಂದು ಹೇಳುವುದು ಸಂಕುಚಿತತೆ. ನಾವು ಭಾರತೀಯರಾಗಿ ಯೋಚಿಸೋಣ ಎಂಬ ಸಲಹೆಯನ್ನು ಆಳುತ್ತಿರುವ ಪಕ್ಷದ ವಿಧ್ಯಾರ್ಥಿ ಸಂಘಟನೆಯ ಮುಖಂಡರೊಬ್ಬರು ನಮಗೆ ಸಲಹೆ ನೀಡಿದ್ರು. ಹಾಗಿದ್ರೆ ಈ ಸರ್ಕಾರದಿಂದ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುವ ಕೆಲಸ ಮಾಡೋಕೆ ಆಗುತ್ತಾ ಅನ್ನೋ ಪ್ರಶ್ನೆ ಸಹ ನಮ್ಮನ್ನ ಈಗ ಕಾಡುತ್ತೆ.

ಕೊನೆಯದಾಗಿ: ನಮಗೆ ಗುಜರಾತ ಸರ್ಕಾರವೇ ಮಾದರಿ ಅಂತ ದಿನಕ್ಕೆ ನೂರು ಬಾರಿ ಹೇಳೋ ರಾಜ್ಯ ಸರ್ಕಾರಕ್ಕೆ ಅಲ್ಲಿ ತುಂಬಾ ಹಿಂದೆಯೇ ಉದ್ಯೋಗ ಮೀಸಲಾತಿಯನ್ನು ಜಾರಿಗೆ ತಂದಿದ್ದಾರೆ ಅನ್ನೋ ಅಂಶ ಗೊತ್ತಿದೆಯೋ ಇಲ್ಲವೋ ಪಾಪ!!!

ಗುರುವಾರ, ಜುಲೈ 28, 2011

ಹೈಕಮಾಂಡ್!!! ಹೈಕಮಾಂಡ್!!!


ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.

ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ... ತೀರಾ ಇತ್ತೀಚಿಗಿನ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಗಳನ್ನೂ ಆರಿಸಲು ಸಹ ನಮ್ಮ ರಾಜ್ಯದ ಬಿಜೆಪಿ ನಾಯಕರು ಹೈಕಮಾಂಡಿನತ್ತ ಮುಖಮಾಡಿರುವುದು ನಮ್ಮ ರಾಜ್ಯದ ೬ ಕೋಟಿ ಜನರ ವಿಶ್ವಾಸಕ್ಕೆ ದ್ರೋಹ ಮಾಡಿತಂತಾಗಿದೆ? ರಾಜ್ಯದ ಹಿತಕ್ಕಾಗಿ ಸ್ವಂತ ನಿರ್ಧಾರಗಳನ್ನು ತಗೆದುಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅವರುಗಳು ನಾಯಕರಾಗಿ ಮುಂದುವರೆಯುತ್ತಿರುವುದಾದರೂ ಏಕೆ?

ನಮ್ಮ ರಾಜ್ಯದ ಒಳಿತನ್ನು ನಿರ್ಧರಿಸಲು ಹೈಕಮಾಂಡ್ ಬೇಕೆ?
ನಾಯಕತ್ವ ಬದಲಾವಣೆಯ ಈ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿಯಾರಗಬೇಕು ಎನ್ನುವ ತೀರ್ಮಾನವನ್ನು ಹೈಕಮಾಂಡ್ ತಗೆದುಕೊಳ್ಳಲು ಹೊರಟಿದೆ ಎನ್ನುವು ಸುದ್ದಿ ಬರುತ್ತಿದೆ. ಇಷ್ಟಕ್ಕೂ ನಮ್ಮ ರಾಜ್ಯದಲ್ಲಿ ಯಾರು ಮುಖ್ಯಮಂತ್ರಿಯಾರಾಗಬೇಕು ಎನ್ನುವ ನಿರ್ಧಾರವನ್ನು ತೀರ್ಮಾನ ಮಾಡಲು ಹೈಕಮಾಂಡ್ ಬೇಕೆ? ಅಸಲಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮುಖ್ಯಮಂತ್ರಿ ಯಾರಾಗಿರಬೇಕು ಎನ್ನುವ ನಿರ್ಧಾರವನ್ನು ಮಾಡಬೇಕಾಗಿರುವವರು ನಮ್ಮ ಪ್ರತಿನಿಧಿಗಳಾದ ಶಾಸಕರು ಅಲ್ಲವೇ? ಇದನ್ನೆಲ್ಲ ಮೀರಿ ನಾಯಕತ್ವ ತೀರ್ಮಾನಿಸೋಕೆ ಹೈಕಮಾಂಡ್ ಗೆ ಇಲ್ಲಿನ ಯಾವ ಪರಿಸ್ಥಿತಿಯ ಅರಿವಿರುತ್ತದೆ? ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ಮಾರಕಾವಾಗಿರುವ ಈ ಹೈಕಮಾಂಡ್ ದಾಸ್ಯದಿಂದ ನಮ್ಮ ರಾಷ್ಟ್ರೀಯ ರಾಜಕೀಯ ಪಕ್ಷಗಳು ಎಂದು ಹೊರಗೆ ಬರುತ್ತವೆ? ಒಂದು ರಾಷ್ಟ್ರೀಯ ಪಕ್ಷ ಎಂದಾಕ್ಷಣ ಎಲ್ಲಾ ನಿರ್ಧಾರಗಳು ಮೇಲಿಂದಲೇ ಬರಬೇಕೆಂದೇನಿಲ್ಲ ಅಲ್ಲವೇ?. ಆದಷ್ಟು ಬೇಗ ಈ ಪರಿಸ್ಥಿತಿಯಿಂದ ನಮ್ಮ ರಾಜಕೀಯ ಪಕ್ಷಗಳು ಹೊರಬರಲಿ, ಹೈಕಮಾಂಡ್ ದಾಸ್ಯದಿಂದ ಮುಕ್ತವಾಗಲಿ ಎಂದು ಆಶಿಸೋಣ. ಕನ್ನಡಿಗರಲ್ಲಿ ಈ ಕುರಿತು ಜಾಗೃತಿಯಾಗಬೇಕು, ನಮ್ಮ ನಿರ್ಧಾರಗಳನ್ನು ನಾವೇ ತಗೆದುಕೊಳ್ಳುವಂತಾಗಬೇಕು.

ಭಾನುವಾರ, ಮೇ 29, 2011

ಬೆಂಗಳೂರಿನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ

ಬಹುಷಃ ಕಳೆದ ಕೆಲವು ತಿಂಗಳಿಂದ ದೇಶದ ಪ್ರತಿಯೊಬ್ಬ ಪ್ರಜೆಯು ಮಾತನಾಡುತ್ತಿರುವುದು ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗ್ಗೆ. ಈ ಭ್ರಷ್ಟಾಚಾರ ಅನ್ನೋ ಮಹಾಮಾರಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಕರಾಳ ಬಾಹುವನ್ನು ಚಾಚಿದೆ. ಭ್ರಷ್ಟಾಚಾರ ಸಮಾಜದ ನೈತಿಕತೆಯ ಜೊತೆಗೆ , ಇಡೀ ನಾಡನ್ನೇ ಅಧೋಗತಿಯತ್ತ ಕೊಂಡ್ಯೊಯುತ್ತದೆ. ಇಂದು ಭ್ರಷ್ಟಾಚಾರ ಅನ್ನುವುದು ಜಾತಿ, ಮತ, ಧರ್ಮ, ಭಾಷೆ ಹೀಗೆ ಎಲ್ಲವನ್ನು ಮೀರಿ ಬೆಳೆದು ನಿಂತು ನಮ್ಮ ನಾಡಿನ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಅನ್ನೋ ಭೇದವಿಲ್ಲದೇ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ನೆಲೆಗೊಂಡಿದೆ. ಭ್ರಷ್ಟಾಚಾರ ಅಳಿಯದ ಹೊರತು ನಮ್ಮ ರಾಜ್ಯ ಏಳಿಗೆ ಕಾಣುವುದಕ್ಕೆ ಸಾಧ್ಯವೇ ಇಲ್ಲಾ. ಈ ಭ್ರಷ್ಟಾಚಾರ ಎಂಬ ರಕ್ಷಸವನ್ನು ನಾವೆಲ್ಲಾ ಸೇರಿ ಹೊಡೆದು ಹಾಕಲೇ ಬೇಕು.

ಕಳೆದ ಕೆಲವು ತಿಂಗಳುಗಳಿಂದ ಅಣ್ಣಾ ಹಜಾರೆ ಅವರ ನೇತ್ರತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಅಸ್ತ್ರವಾಗಿ ಜನಲೋಕಪಾಲ್ ಮಸೂದೆಯನ್ನು ಜಾರಿಗೆ ತರಬೇಕು ಎಂದು ದೇಶಾದ್ಯಂತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಸಿದ್ಧ ಪಡಿಸಿದ್ದ ಲೋಕಪಾಲ್ ಮಸೂದೆ ಭ್ರಷ್ಟರನ್ನು ಶಿಕ್ಷಿಸುವ ಶಕ್ತಿಯನ್ನು ಹೊಂದಿರದ ಕಾನೂನು ಎಂದು ಆರೋಪಿಸುತ್ತಾ ಬಂದಿರುವ ಅಣ್ಣಾ ಹಜಾರೆ ಮತ್ತು ಅವರ ತಂಡ, ಜನರನ್ನು ಒಳಗೊಂಡ ಒಂದು ಲೋಕಪಾಲ್ ಸಂಸ್ಥೆ ಬರಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಾ ಬಂದಿದ್ದಾರೆ. ಮುಖ್ಯವಾದ ಅಂಶವೆಂದರೆ ಭ್ರಷ್ಟಾಚಾರ ನಿಗ್ರಹಕ್ಕೆ ಹಲವು ಆಯಾಮಗಳಿವೆ. ವಿವಿಧ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ನೋಡುವುದಾದರೆ ಭ್ರಷ್ಟಾಚಾರವನ್ನು ಹತ್ತಿಕ್ಕಲು ವಿವಿಧ ಮಾರ್ಗಗಳು ಕಾಣಸಿಗುತ್ತವೆ. ಹಲವು ಸೈದ್ಧಾಂತಿಕ ಹಿನ್ನೆಲೆಯಲ್ಲಿ ಜನಲೋಕಪಾಲ್ ಕರಡನ್ನು ನೋಡುವುದಾದರೆ ಸಂಪೂರ್ಣವಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಈ ಮಸೂದೆ ಎಷ್ಟು ಸಹಕಾರಿ? ಈ ಮಸೂದೆಯೇ ಅಂತಿಮವೇ ಅನ್ನೋ ತೀರ್ಮಾನಕ್ಕೆ ಜನರು ಇನ್ನೂ ಬರಬೇಕಿದೆ. ಜನರಲ್ಲಿ ಜಾಗೃತಿ ಮೂಡದ ಹೊರತು ಯಾವುದೇ ಕಾನೂನುಗಳು ಸಮಾಜದ ಸ್ವಾಸ್ಥ್ಯವನ್ನು ಸರಿಪಡಿಸಲಾರವು ಎನ್ನುವುದು ನನ್ನ ನಂಬಿಕೆ.

ಮೊನ್ನೆ 28 ನೇ ತಾರೀಕು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಕೇವಲ ನಗರದ ಸುಶಿಕ್ಷಿತ ಜನರನ್ನ ದೃಷ್ಠಿಯಲ್ಲಿ ಇಟ್ಟುಕೊಂಡು ನಡೆಸಿದ ಕಾರ್ಯಕ್ರಮವಾಗಿತ್ತು ಅನ್ನೋದು ನನ್ನ ಅಭಿಪ್ರಾಯ. ಬೆಂಗಳೂರಿನ ಹಿರಿಯರು, ವಿಧ್ಯಾರ್ಥಿಗಳು, ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನು ಹೊರತುಪಡಿಸಿದರೆ ಸಾಮಾನ್ಯ ಜನರು ಕೆಲವೇ ಕೆಲವು ಸಂಖ್ಯೆಯಲ್ಲಿ ಕಂಡುಬಂದರು. ಈ ಮಾತು ಯಾಕೆ ಮುಖ್ಯವೆಂದರೆ ಇಂದು ಭ್ರಷ್ಟಾಚಾರದ ಕರಾಳ ಹಿಡಿತಕ್ಕೆ ಸಿಕ್ಕಿ ನರಳುತ್ತಿರುವವರು ಬಡವರ್ಗದ ಜನರೇ. ಭ್ರಷ್ಟಾಚಾರದ ಕಾರಣದಿಂದಾಗಿ ತಮಗೆ ನ್ಯಾಯವಾಗಿ ಸಿಗಬೇಕಾಗಿದ್ದ ಸವಲತ್ತುಗಳನ್ನು ಸಹ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವುಗಳು ಸಾಮಾನ್ಯ ಜನರನ್ನು ಕಡೆಗಣಿಸಿ ಈ ಭ್ರಷ್ಟಾಚಾರ ವಿರೋಧಿ ಹೋರಾಟವನ್ನು ಯಶಸ್ವಿಗೊಳಿಸಲು ಸಾಧ್ಯವಿಲ್ಲಾ. ನಿಜಕ್ಕೂ ಈ ಕಾರ್ಯಕ್ರಮದ ವಿವರಗಳು ಸಾಮಾನ್ಯ ಜನರನ್ನು ತಲುಪಿತೇ ಅನ್ನುವುದು ನನ್ನ ಪ್ರಶ್ನೆ?

28 ನೇ ತಾರೀಕು ನಡೆದ ಕಾರ್ಯಕ್ರಮದಲ್ಲಿ ಎದ್ದು ಕಂಡ ಕೊರತೆಯೆಂದರೆ ಕನ್ನಡವನ್ನು ಕಡೆಗಣಿಸಿದ್ದು. ಎಲ್ಲೋ ಕೆಲವು ಬೆರೆಳೆಣಿಕೆಯಷ್ಟು ಕನ್ನಡದ ಗೆಳೆಯರನ್ನು ಬಿಟ್ಟರೆ ಮಿಕ್ಕಿದ್ದೆಲ್ಲಾ ಆಂಗ್ಲ ಹಾಗೂ ಹಿಂದಿಮಯವಾಗಿತ್ತು. ಆಯೋಜಕರು ಹಾಗೂ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಮರೆತು ಹೋದ ಒಂದು ಪ್ರಮುಖ ವಿಷಯವೆಂದರೆ ಆಯಾ ಪ್ರದೇಶದ ಭಾಷೆಯನ್ನ ಕಡೆಗಣಿಸಿ ಹೋರಾಟ ಅಥವಾ ಆಂದೋಲನವನ್ನ ಯಶಸ್ವಿಗೊಳಿಸಲು ಸಾಧ್ಯವಿಲ್ಲಾ. ಭಾರತದಂತಹ ಒಕ್ಕೂಟ ವ್ಯವಸ್ಥೆಯನ್ನು ಹೊಂದಿರುವ ದೇಶದಲ್ಲಿ ಭಾಷೆ ತುಂಬ ಪ್ರಮುಖ ಹಾಗೂ ಪರಿಣಾಮಕಾರಿ ಸಾಧನವಾಗಿದೆ. ಆದರೆ ಯಾಕೋ ನಮ್ಮ ಆಯೋಜಕರು ಇದನ್ನ ಮರೆತಂತಿದ್ದರು. ಕಾರಣ ಬಂದಿದ್ದ ಅನೇಕ ಜನರಿಗೆ ಕಾರ್ಯಕ್ರಮದ ಗಣ್ಯರು ಮಾಡಿದ ಹಿಂದಿ ಭಾಷಣಗಳು ಅರ್ಥವಾಗಲೇ ಇಲ್ಲಾ. ಶಾಲೆಯಲ್ಲಿ ಹಿಂದಿಯನ್ನು ಒಂದು ಭಾಷೆಯನ್ನಾಗಿ ಕಲಿತಿರುವ ನನಗೇ ಗಣ್ಯರ ಎಲ್ಲಾ ಮಾತುಗಳನ್ನು ಅರ್ಥಮಾಡಿಕೊಳ್ಳಲು ಆಗಲಿಲ್ಲ, ಅಂತಹುದರಲ್ಲಿ ಅನೇಕರಿಗೆ ಭಾಷಣಕಾರರ ಭಾಷಣಗಳು ಅರ್ಥವೇ ಆಗಲಿಲ್ಲ ಅನ್ನೋದು ನೋವಿನ ಸಂಗತಿ. ಕಡೇ ಪಕ್ಷ ಆಯೋಜಕರು ವೇದಿಕೆಯ ಮೇಲೆ ಮಾತನಾಡಿದ ಗಣ್ಯರ ಮಾತುಗಳನ್ನು ಕನ್ನಡಕ್ಕೆ ಅನುವಾದಿಸಿ ಕರಪತ್ರಗಳನ್ನು ಹಂಚಿದ್ದರೆ ಒಳ್ಳೆಯದಿತ್ತೇನೊ ಎಂದು ಅನ್ನಿಸಿತು. ಒಟ್ಟಿನಲ್ಲಿ ನಡೆದ ಕಾರ್ಯಕ್ರಮದ ಉದ್ದೇಶ ಒಳ್ಳೆಯದೇ ಇದ್ದರು ಅದರ ಸಫಲತೆ ಇರುವುದು ಅದನ್ನು ಜನರಿಗೆ ತಲುಪಿಸುವ ಬಗೆಯಲ್ಲಿ. ಈ ನಿಟ್ಟಿನಲ್ಲಿ ಮುಂದೆ ನಡೆಯುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಜನ ಸಾಮಾನ್ಯರನ್ನು ತಲುಪುವಂತಾಗಲಿ ಅನ್ನುವುದು ನನ್ನ ಆಶಯ.

ಗುರುವಾರ, ಡಿಸೆಂಬರ್ 30, 2010

ಕೃಷ್ಣಾ ನ್ಯಾಯಾಧಿಕರಣದ ತೀರ್ಪು :: ನನ್ನ ಅನಿಸಿಕೆ


ನಾಲ್ಕು ದಶಕಗಳ ಸುಧೀರ್ಘ ಹೋರಾಟದ ನಂತರ ಕೃಷ್ಣ ನದಿ ನೀರು ಹಂಚಿಕೆಯ ತೀರ್ಪು ಹೊರಬಿದ್ದಿದೆ. ಮೇಲ್ನೋಟಕ್ಕೆ ನಮಗೆ ಸಂಪೂರ್ಣ ನ್ಯಾಯ ದಕ್ಕಿದೆ ಅಂತ ಅನ್ನಿಸಿದರೂ ಸಹ ಕೆಲವು ಪ್ರಮುಖ ವಿಷಯಗಳಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲವೇನೋ ಅನ್ನಿಸುತ್ತದೆ. ಇದುವರೆಗೂ ಮಾಧ್ಯಮಗಳು ಹಾಗೂ ಅಂತರ್ಜಾಲದಲ್ಲಿ ದೊರಕಿರುವ ಮಾಹಿತಿಯ ಪ್ರಕಾರ,ಸ್ಕೀಮ್ ಬಿಯಲ್ಲಿ ಒಟ್ಟು ಲಭ್ಯವಿರುವ 448 ಟಿ.ಎಂ.ಸಿ ನೀರಿನ ಹಂಚಿಕೆಯ ವಿವರಗಳು ಇಂತಿದೆ: ಮಹಾರಾಷ್ಟ್ರಕ್ಕೆ 81 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ, ಕರ್ನಾಟಕಕ್ಕೆ 177 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ ಹಾಗೂ ಆಂಧ್ರ ಪ್ರದೇಶಕ್ಕೆ 190 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ.
ಇದರ ಜೊತೆಗೆ ರಾಜ್ಯದ ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 519 ಮೀಟರ್ ನಿಂದ 524.26 ಮೀಟರ್ ವರೆಗೆ ಏರಿಸಲು ಇದ್ದ ಅಡಚಣೆಯನ್ನು ನಿವಾರಿಸಿ ನ್ಯಾಯಾಧಿಕರಣ ಅವಕಾಶ ನೀಡಿದೆ. ಕೃಷ್ಣ ನದಿಯ ಒಟ್ಟು ನೀರು ಹಂಚಿಕೆಯಲ್ಲಿ ಕರ್ನಾಟಕದ ಪಾಲಿಗೆ 911 ಟಿ.ಎಂ.ಸಿ ನೀರು ಸಿಕ್ಕಿದೆ, ಮಹಾರಾಷ್ಟ್ರದ ಪಾಲಿಗೆ 666 ಟಿ.ಎಂ.ಸಿ ಹಾಗೂ ಆಂಧ್ರ ಪ್ರದೇಶಕ್ಕೆ 1001 ಟಿ.ಎಂ.ಸಿ ನೀರು ಸಿಕ್ಕಿದೆ. ಇದರ ಜೊತೆಗೆ ಕರ್ನಾಟಕ ಪ್ರತಿ ವರ್ಷ ಜೂನ್-ಜುಲೈ ತಿಂಗಳಿನಲ್ಲಿ 8-10 ಟಿ.ಎಂ.ಸಿ ನೀರು ಆಂಧ್ರಕ್ಕೆ ಬಿಡಬೇಕು ಎಂದು ತೀರ್ಪು ನೀಡಿದೆ. ಹಾಗದರೆ ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ???

ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ?
ಮೊದಲನೆಯದಾಗಿ ಬಚಾವತ್ ಆಯೋಗ ತನ್ನ ತೀರ್ಪಿನಲ್ಲಿ ಕೃಷ್ಣಾ ನದಿಯ ಕೊಳ್ಳದಲ್ಲಿ ಲಭ್ಯವಿರುವ ಹೆಚ್ಚುವರಿ ನೀರನ್ನು ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಕ್ಕೆ ಕ್ರಮವಾಗಿ 50%, 25% ಹಾಗೂ 25% ಹಂಚಬೇಕು ಎಂದು ತೀರ್ಪು ನೀಡಿತ್ತು. ಆದರೆ ಬಂದಿರುವ ತೀರ್ಪಿನಲ್ಲಿ ಕರ್ನಾಟಕಕ್ಕೆ ಬರಬೇಕಾಗಿದ್ದ 50% ನೀರಿನ ಬದಲು ಸಿಕ್ಕಿರುವುದು ಕೇವಲ 39.5% ನಷ್ಟು ಮಾತ್ರ. ಆಂಧ್ರಕ್ಕೆ ಸಿಗಬೇಕಾಗಿದ್ದ 25% ಬದಲು ಇಂದು ಸಿಕ್ಕಿರುವುದು 42.41% ಹಾಗೂ ಮಹಾರಾಷ್ಟ್ರಕ್ಕೆ ಸಿಗಬೇಕಾಗಿದ್ದ 25% ನಲ್ಲಿ ಸಿಕ್ಕಿರುವುದು ಕೇವಲ 18.08% ಮಾತ್ರ. ಕರ್ನಾಟಕ ತನ್ನ ಪಾಲಿಗೆ ಬರಬೇಕಾಗಿದ್ದ ಸುಮಾರು 100 ಟಿ.ಎಂ.ಸಿ ಯಷ್ಟು ನೀರನ್ನು ಕಳೆದುಕೊಂಡಿದೆ. ಆದರೆ ಇದರ ಬಗ್ಗೆ ಧ್ವನಿ ಎತ್ತಬೇಕಾಗಿದ್ದ ಸರ್ಕಾರ ಹಾಗೂ ನಮ್ಮ ರಾಜಕೀಯ ಪಕ್ಷಗಳು, ನಮ್ಮ ರಾಜ್ಯಕ್ಕೆ ನ್ಯಾಯಾಧಿಕರಣ ವರ ಕೊಟ್ಟಿರುವಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿವೆ. ನಮ್ಮ ರಾಜಕೀಯ ನಾಯಕರು 100 ಟಿ.ಎಂ.ಸಿ ನೀರು ಬಿಟ್ಟುಕೊಟ್ಟು ಧಾರಾಳತೆ ಮೆರೆಯುತ್ತಿದ್ದಾರಾ? ಹಾಗೆ ಸುಮ್ಮನೆ ಬಿಟ್ಟು ಬಿಡುವುದಕ್ಕೆ ಅದೇನು 100 ಬಕೆಟ್ ನೀರಲ್ಲ. 100 ಟಿ.ಎಂ.ಸಿ ನೀರಿನ ಅಗಾಧತೆ ಅರಿಯಲು ಅದನ್ನ ಸರಳೀಕರಿಸಿ ನೋಡೋಣ. 23000 ಎಕರೆ ವಿಸ್ತಾರದಲ್ಲಿ ಒಂದು ಅಡಿ ನೀರು ನಿಂತರೆ ಅದು 1 ಟಿ.ಎಂ.ಸಿ ಅಡಿಗೆ ಸಮ, ಹಾಗಾಗಿ 100 ಟಿ.ಎಂ.ಸಿ ನೀರು ಎಂದರೆ 23000 ಎಕರೆ ವಿಸ್ತಾರದಲ್ಲಿ 100 ಅಡಿ ನೀರು. ಅಂದರೆ ನಮ್ಮ ಕೈತಪ್ಪಿ ಹೋಗಿರುವ ನೀರಿನ ಅಗಾಧತೆಯನ್ನು ಗಮನಿಸಿ. ಈ 100 ಟಿ.ಎಂ.ಸಿ ನೀರನ್ನ ಸುಮಾರು 3 ಜಿಲ್ಲೆಗಳಿಗೆ ವರ್ಷಪೂರ್ತಿ ನೀರನ್ನು ಒದಗಿಸಬಹುದು. ಈ ಅನ್ಯಾಯವನ್ನು ಎತ್ತಿ ತೋರಿಸಬೇಕಾಗಿದ್ದ ನಮ್ಮ ರಾಜಕೀಯ ಪಕ್ಷಗಳು ಹಾಗೂ ಸರ್ಕಾರ ತಮಗೆ ಯಾವುದೋ ನಿಧಿ ಸಿಕ್ಕಂತೆ ಖುಷಿ ಪಡುತ್ತಿವೆ.
ಆಂಧ್ರಪ್ರದೇಶ ಅಕ್ರಮವಾಗಿ ನಿರ್ಮಾಣ ಮಾಡಿರುವ ಯೋಜನೆಗಳ ಬಗ್ಗೆ ತೀರ್ಪಿನಲ್ಲಿ ಯಾವುದೇ ಪ್ರಸ್ತಾಪ ಇರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿಲ್ಲ.

ನಮ್ಮ ಪಾಲಿನ ನೀರನ್ನು ಆಂಧ್ರಕ್ಕೆ ಯಾಕೆ ಕೊಡಬೇಕು?
ಬಂದಿರುವ ತೀರ್ಪಿನಲ್ಲಿ ಇನ್ನೊಂದು ಮಾರಕವಾದ ಅಂಶವೆಂದರೆ ಪ್ರತಿ ವರ್ಷ ಕರ್ನಾಟಕ ಬೇಸಿಗೆಯ ಸಮಯದಲ್ಲಿ ಆಂಧ್ರಪ್ರದೇಶಕ್ಕೆ 8-10 ಟಿ.ಎಂ.ಸಿ ಯಷ್ಟು ನೀರು ಹರಿಸಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಹರಿಸಬೇಕಾಗಿರುವ ನೀರಿನ ಪ್ರಮಾಣವೇನು ಕಡಿಮೆಯದ್ದಲ್ಲ. ಬೇಸಿಗೆಯ ಸಮಯದಲ್ಲಿ ಎಲ್ಲಾ ರಾಜ್ಯಗಳು ತಮ್ಮ ಆಣೆಕಟ್ಟಿನಲ್ಲಿ ತಳಮಟ್ಟದಲ್ಲಿ ಸ್ವಲ್ಪ ನೀರನ್ನು ಮೂಲಭೂತ ಅವಶ್ಯಕತೆಗಳಿಗಾಗಿ ಶೇಖರಿಸಿಕೊಂಡಿರುತ್ತವೆ, ಇರೋ ನೀರನೆಲ್ಲಾ ಅಂಧ್ರಕ್ಕೆ ಹರಿಸಿದರೆ ನಮ್ಮ ರಾಜ್ಯದ ಜನರಿಗೆ ಕುಡಿಯಲು ನೀರು, ರೈತರಿಗೆ ತಮ್ಮ ಬೆಳಗಳಿಗೆ ನೀರು ಒದಗಿಸುವವರಾರು?

ನ್ಯಾಯಾಧಿಕರಣದ ಪ್ರಕ್ರಿಯೆ ಬಲು ನಿಧಾನ!!
ಹೌದು, ಇಂದಿನ ನ್ಯಾಯಾಧಿಕರಣಗಳ ಪ್ರಕ್ರಿಯೆಯ ವೇಗ ಅಮೆನಡಿಗೆಯಂತಿದೆ. ನ್ಯಾಯಾಧಿಕರಣದ ಈ ನಿಧಾನ ಪ್ರಕ್ರಿಯೆಯಿಂದಾಗಿ ರಾಜ್ಯಗಳು ತಮ್ಮ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರಲು ದಶಕಗಳವರೆಗೆ ತೀರ್ಪಿಗಾಗಿ ಕಾಯುತ್ತಾ ಕುಳಿತಿರಬೇಕು, ಇದರಿಂದಾಗಿ ಯೋಜನೆಯ ಸಮಯ ಹಾಗೂ ಅದಕ್ಕೆ ಬೇಕಾಗಿರುವ ಸಂಪನ್ಮೂಲ ಶುರುವಾಗಿದ್ದಕ್ಕಿಂತ ನೂರು ಮಡಿ ಹೆಚ್ಚಾಗಿರುತ್ತದೆ. ಇದರ ಫಲಾನುಭವಿಗಳಾಬೇಕಾದ್ದ ಜನರು ಸಂಕಷ್ಟದಲ್ಲೇ ಇರಬೇಕಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಕಳಸಾ-ಬಂಡೂರ ಕುಡಿಯುವ ನೀರಿನ ಯೋಜನೆ, ನಮ್ಮ ಪಾಲಿಗೆ ಬರಬೇಕಾಗಿರುವ ನೀರಿನಲ್ಲಿ ಕೇವಲ 7 ಟಿ.ಎಂ.ಸಿ ಯಷ್ಟು ನೀರನ್ನು ಬಳಸಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಈಗ ಅಡ್ಡಗಾಲು ಹಾಕಿರುವ ಗೋವಾ ಸರ್ಕಾರ ಸಮಸ್ಯೆಯಲ್ಲದ ಸಮಸ್ಯೆಯನ್ನು ಬಗೆಹರಿಸಲು ನ್ಯಾಯಾಧಿಕರಣಕ್ಕೆ ಆಗ್ರಹಿಸಿದೆ, ಈ ಹುಚ್ಚುತನಕ್ಕೆ ಕೇಂದ್ರ ಸಹ ಒಪ್ಪಿಗೆ ಸೂಚಿಸಿದೆ. ಇದರಿಂದ ತೊಂದರೆಗೊಳಪಡುವ ಉತ್ತರ ಕರ್ನಾಟಕದ ಜನತೆ ಇನ್ನೂ ದಶಕಗಳವರೆಗೂ ನೀರಿಗಾಗಿ ಬಾಯಿಬಿಡುತ್ತಾ ಕುಳಿತುಕೊಳ್ಳಬೇಕು. ಪ್ರತಿಯೊಂದು ಅಂತರ್ ರಾಜ್ಯ ಸಮಸ್ಯೆಯನ್ನು ಬಗೆಹರಿಸಲು ನ್ಯಾಯಾಧಿಕರಣಗಳನ್ನು ರಚಿಸುವ ಬದಲು ದೇಶಕ್ಕೆ ಅನ್ವಯವಾಗುವಂತಹ ಒಂದು ಶಾಶ್ವತ ಜಲ ನೀತಿ ಅವಶ್ಯಕ. ಇಂಥ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಒಂದು ನಿರ್ದಿಷ್ಟ ಮಾರ್ಗಸೂಚಿ (ರಾಷ್ಟ್ರೀಯ ಜಲನೀತಿ) ಇರಬೇಕಾಗಿರುವುದು ಒಕ್ಕೂಟ ವ್ಯವಸ್ಥೆಯ ಮೂಲಭೂತ ಅವಶ್ಯಕತೆ.

ನಿಜವಾದ ಒಕ್ಕೂಟ ವ್ಯವಸ್ಥೆ ಜಾರಿಗೆ ಬರುವುದು ಯಾವಾಗ??
ಒಂದು ನಿಮಿಷದ ಮಟ್ಟಿಗೆ ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯಗಳನ್ನು ಬದಿಗಿಟ್ಟು ನೋಡೋಣ. ರಾಜ್ಯದ ಹತ್ತಿರ ಇರುವ ನೀರನ್ನ ಸರಿಯಾದ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ತುರ್ತಾಗಿ ಜಾರಿಗೆ ತರಬೇಕು. ಈ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಬೇಕಾಗುವ ಮೊತ್ತ ಸಾವಿರಾರೂ ಕೋಟಿ ರೂಪಾಯಿಗಳು. ಈ ಭಾರಿ ಹಣವನ್ನು ಹೊಂದಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮುಂದೆ ಕೈಯೊಡ್ಡಲೇ ಬೇಕು. ನಮ್ಮ ರಾಜ್ಯ ದೇಶದ ಅತಿ ಹೆಚ್ಚು ತೆರೆಗೆ ಕಟ್ಟುವ ರಾಜ್ಯಗಳಲ್ಲಿ ಒಂದು. ಈಗಿರುವ ಹಣಕಾಸು ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯಗಳು ಕಟ್ಟುವ ತೆರಿಗೆ ಹಣವನ್ನು ಪಡೆಯುವ ಕೇಂದ್ರ ಸರ್ಕಾರ, ಆ ಒಟ್ಟು ಹಣದಲ್ಲಿ ಒಂದು ಭಾಗವನ್ನ ಎಲ್ಲಾ ರಾಜ್ಯಗಳ ನಡುವೆ ಹಂಚುತ್ತದೆ, ಈ ವ್ಯವಸ್ಥೆಯಿಂದಾಗಿ ಹೆಚ್ಚು ಕಷ್ಟಪಟ್ಟು ದುಡಿಯುವ ರಾಜ್ಯಗಳಿಗೆ ತಾನು ನೀಡಿದ ಅನುಪಾತದಲ್ಲಿ ವಾಪಸ್ ಕೇಂದ್ರದಿಂದ ಹಣ ಬರುವುದಿಲ್ಲ. ಇನ್ನೂ ದುಖಃದ ವಿಷಯವೆಂದರೆ ಕೇಂದ್ರ ನೀಡುವ ಹಣವನ್ನು ಕೇಂದ್ರ ಸರ್ಕಾರ ಹೇಳಿದ ಯೋಜನೆಗಳಿಗೆ ಮಾತ್ರ ಉಪಯೋಗಿಸಬೇಕು ಎಂದು ತಾಕೀತು ಮಾಡುತ್ತದೆ, ಬದಲಾಗಿ ಆ ಹಣವನ್ನು ರಾಜ್ಯಗಳು ಬೇರೆ ಅವಶ್ಯಕ ಯೋಜನೆಗಳಿಗೆ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲಾ. ಹೀಗೆ ನಾವು ಕಟ್ಟುವ ತೆರಿಗೆಯ ಹಣವನ್ನು ನಮ್ಮ ರಾಜ್ಯಕ್ಕೆ ಅವಶ್ಯಕವಾದ ಯೋಜನೆಗಳಿಗೆ ಉಪಯೋಗಿಸಿಕೊಳ್ಳಲು ನಾವು ಮತ್ತಾರದೋ ಒಪ್ಪಿಗೆಗಾಗಿ ಕಾಯುವುದು ಎಲ್ಲಿಯ ಪ್ರಜಾಪ್ರಭುತ್ವ ವ್ಯವಸ್ಥೆ??? ಎಲ್ಲಿಯ ಒಕ್ಕೂಟ ವ್ಯವಸ್ಥೆ?? ನಿಜವಾದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಪಾತ್ರ ಹೇಗೆ ಕಡಿಮೆಯಾಗಿರುತ್ತದೋ, ನಿಜವಾದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಪಾತ್ರ ಬಹಳ ಕಡಿಮೆ ಅಥವಾ ಬೇಕಾದಾಗ ಮಾತ್ರ ಅನ್ನುವಷ್ಟು ಇರುತ್ತದೆ. ಆದರೆ ಇವತ್ತಿನ ಪರಿಸ್ಥಿಯಲ್ಲಿ ಒಕ್ಕೂಟ ವ್ಯವಸ್ಥೆ ಕೇವಲ ಹೆಸರಿಗೆ ಮಾತ್ರ, ಅದು ಆಚರಣೆಗೆ ಇನ್ನೂ ಬಂದೇ ಇಲ್ಲಾ. ಇವತ್ತಿಗೂ ಸಹ ಎಲ್ಲಾ ಅಧಿಕಾರಗಳು ಕೇಂದ್ರ ಸರ್ಕಾರದ ಅಡಿಯಲ್ಲೇ ಕೊಳೆಯುತ್ತಾ ಬಿದ್ದಿವೆ.

ಜನ ಜಾಗೃತಿಯಿಂದ ಮಾತ್ರ ನಿಜವಾದ ಪ್ರಜಾಪ್ರಭುತ್ವ, ನಿಜವಾದ ಒಕ್ಕೂಟ ವ್ಯವಸ್ಥೆಯನ್ನು ಹೊಂದಿರುವ ನಾಡು, ದೇಶವನ್ನು ಕಟ್ಟಲು ಸಾಧ್ಯ. ಇಂಥ ವ್ಯವಸ್ಥೆ ನಮ್ಮದಾಗಲಿ ಅಂತ ಆಶಿಸುತ್ತಾ, ನ್ಯಾಯಾಧಿಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳನ್ನು ನಮ್ಮ ಜನಪ್ರತಿನಿಧಿಗಳು ಮನಗಂಡು ಅದರತ್ತ ಗಮನ ಹರಿಸಿ ನಮ್ಮ ಪಾಲಿಗೆ ದಕ್ಕಬೇಕಾಗಿರುವ ನೀರನ್ನು ಪಡೆಯುವಂತಾಗಲಿ....