ರಾಜಕೀಯ ಇಚ್ಛಾಶಕ್ತಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರಾಜಕೀಯ ಇಚ್ಛಾಶಕ್ತಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುರುವಾರ, ಏಪ್ರಿಲ್ 5, 2012

ಕಾವೇರಿ ನದಿ ವಿವಾದ: ಒಂದು ನೋಟ

ದಕ್ಷಿಣ ಭಾರತದ ಬಹು ದೊಡ್ಡ ನದಿಯಾದ ಕಾವೇರಿಯು ಕೊಡಗು ಜಿಲ್ಲೆಯ ಮಡಿಕೇರಿ ಸಮೀಪ ಸಮುದ್ರ ಮಟ್ಟದಿಂದ ಸುಮಾರು ೧೩೪೧ ಮೀ ಎತ್ತರದಲ್ಲಿ ಪಶ್ಚಿಮ ಘಟ್ಟದಲ್ಲಿ ಉಗಮಿಸಿ, ಪೂರ್ವಾಭಿಮುಖಿಯಾಗಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಕರ್ನಾಟಕದಲ್ಲಿ ಕಾವೇರಿಗೆ ಸೇರಿಕೊಳ್ಳುವ ಪ್ರಮುಖ ಉಪನದಿಗಳು ಹೀಗಿವೆ: ಕಬಿನಿ, ಹಾರಂಗಿ, ಕಕ್ಕಬೆ, ಕದಮುರ್, ಕಮ್ಮನಹೊಳೆ, ಹೇಮಾವತಿ, ಲಕ್ಷ್ಮಣತೀರ್ಥ, ಸುವರ್ಣವತಿ, ಶಿಂಷಾ ಹಾಗು ಅರ್ಕಾವತಿ. ಕಾವೇರಿ ನದಿಯು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಸುಮಾರು ೬೪ ಕಿ.ಮೀ ಗಳಷ್ಟು ಉದ್ದ ಗಡಿಯಾಗಿ ರೂಪಗೊಳ್ಳುತ್ತದೆ. ಇದಾದ ನಂತರ ಹೊಗೇನಕಲ್ ಜಲಪಾತದಲ್ಲಿ ನದಿಯು ತನ್ನ ಪಾತ್ರವನ್ನು ದಕ್ಷಿಣಕ್ಕೆ ತಿರುಗಿಸಿ ತಮಿಳುನಾಡಿನ ಮೆಟ್ಟೂರು ಜಲಾಶಯವನ್ನು ಸೇರುತ್ತದೆ.

ಚಿತ್ರ ಕೃಪೆ: ರೆಡ್ಡಿಫ್ ತಾಣ

ಕಾವೇರಿ ನದಿಯು ಹುಟ್ಟಿ ಸಮುದ್ರ ಸೇರುವವರೆಗಿನ ಅದರ ಒಟ್ಟು ಉದ್ದದ ರಾಜ್ಯವಾರು ಹಂಚಿಕೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು ೩೨೦ ಕಿ.ಮೀ, ತಮಿಳುನಾಡಿನಲ್ಲಿ ೪೧೬ ಕಿ.ಮೀ ನಷ್ಟಿದ್ದು ಉಳಿದ ೬೪ ಕಿ.ಮೀ ಎರೆಡು ರಾಜ್ಯಗಳ ನಡುವೆ ಗಡಿಯನ್ನು ರೂಪಿಸುತ್ತದೆ. ಕಾವೇರಿಯ ಒಟ್ಟು ಜಲಾನಯನ ಪ್ರದೇಶ ೮೧,೧೫೫ ಚ.ಕಿ.ಮೀ ಗಳಾಗಿದ್ದು ವಿವಿಧ ರಾಜ್ಯಗಳ ಪಾಲು ಈ ರೀತಿ ಇದೆ:
ರಾಜ್ಯ
ಜಲಾನಯನ ಪ್ರದೇಶ ಚ.ಕಿ.ಮೀ ಗಳಲ್ಲಿ
ಕರ್ನಾಟಕ
೩೪,೨೭೩
ಕೇರಳ
೨,೮೬೬
ತಮಿಳುನಾಡು
೪೪,೦೧೬

1892 ಹಾಗೂ 1924 ಮದ್ರಾಸ್ – ಮೈಸೂರು ಒಪ್ಪಂದಗಳು:

1982 ರ ಮದ್ರಾಸ್ – ಮೈಸೂರು ಒಪ್ಪಂದದ ಮುಖ್ಯ ಅಂಶವೆಂದರೆ ಅಂದಿನ ಮೈಸೂರು ರಾಜ್ಯ ಸರ್ಕಾರ ಕಾವೇರಿ ನದಿ ಪಾತ್ರದಲ್ಲಿ ಹರಿಯುವ ಪ್ರಮುಖ ನದಿಗಳಲ್ಲಿ ಮೈಸೂರು ಸರ್ಕಾರವು ಈಗ ಅಸ್ತಿತ್ವದಲ್ಲಿರುವ ಕಾಮಗಾರಿಗಳನ್ನು ಹೊರತು ಪಡಿಸಿ ಹೊಸ ನೀರಾವರಿ ಜಲಾಶಯಗಳನ್ನು ನಿರ್ಮಿಸತಕ್ಕದ್ದಲ್ಲ. ಒಂದು ವೇಳೆ ನಿರ್ಮಿಸಬೇಕಾದ ಸಂಧರ್ಭದಲ್ಲಿ ಕಾಮಗಾರಿಯ ಪೂರ್ಣ ಮಾಹಿತಿಯನ್ನು ಮದ್ರಾಸ್ ಸರ್ಕಾರಕ್ಕೆ ಕಳುಹಿಸಬೇಕು. ಮದ್ರಾಸ್ ಸರ್ಕಾರ ಒಪ್ಪಿಗೆ ಪಡೆದು ಹೊಸ ಜಲಾಶಯಗಳನ್ನು ಮೈಸೂರು ರಾಜ್ಯ ನಿರ್ಮಿಸಬೇಕು.

1910ರಲ್ಲಿ ಮೈಸೂರು ಸರ್ಕಾರವು ಕನ್ನಂಬಾಡಿಯಲ್ಲಿ ಕಾವೇರಿ ನದಿ ಮೇಲೆ ಜಲಾಶಯವನ್ನು ನಿರ್ಮಿಸುವ ಪ್ರಸ್ತಾವವನ್ನು ರೂಪಿಸಿ 1892ರ ಒಪ್ಪಂದದ ಅನ್ವಯ ಮದ್ರಾಸ್ ಸರ್ಕಾರದ ಒಪ್ಪಿಗೆಯನ್ನು ಕೋರಿತು. ಆದರೆ ಈ ಯೋಜನೆಗೆ ಮದ್ರಾಸ್ ರಾಜ್ಯವು ಒಪ್ಪಿಗೆ ನೀಡಲಿಲ್ಲ. ಪಟ್ಟು ಬಿಡದ ಮೈಸೂರು ರಾಜ್ಯ, ಆಣೆಕಟ್ಟಿನ ಅವಶ್ಯಕತೆಯನ್ನು ಮನವರಿಕೆ ಮಾಡಿದ ಮೇಲೆ, ನ್ಯಾಯಾಧಿಶರ ಮಧ್ಯಸ್ತಿಕೆಯಲ್ಲಿ ಮೈಸೂರು ಹಾಗೂ ಮದ್ರಾಸ್ ಸರ್ಕಾರಗಳ ನಡುವೆ ಮತ್ತೊಂದು ಒಪ್ಪಂದಕ್ಕೆ ದಿನಾಂಕ 18ನೇ ಫೆಬ್ರವರಿ 1924 ರಂದು ಸಹಿ ಹಾಕಲಾಯಿತು. ಈ ಆದೇಶದ ಪ್ರಕಾರ ಮೈಸೂರು ಸರ್ಕಾರ ಆಣೆಕಟ್ಟು ನಿರ್ಮಿಸಲು ಮದ್ರಾಸ್ ಸರ್ಕಾರ ಒಪ್ಪಿತು ಹಾಗೂ ಈ ಆಣೆಕಟ್ಟಿನ ಮೂಲಕ ಜೂನ್ – ಜನವರಿ ತಿಂಗಳವರೆಗೂ ಬಿಡುಗಡೆ ಮಾಡಬೇಕಾಗಿರುವ ನೀರಿನ ಮೊತ್ತವನ್ನು ಸೂಚಿಸಲಾಯಿತು.

ಇಲ್ಲಿ ಪ್ರಮುಖವಾಗಿ ಗಮನಿಸಬೇಕಾದ ಅಂಶವೆಂದರೆ ಮದ್ರಾಸ್ ಪ್ರಾಂತ್ಯವು ಬ್ರಿಟಿಷರ ಆಳ್ವಿಕೆಯಲ್ಲಿದ್ದ ಕಾರಣ, ಅವರಿಗೆ ಅನುಕೂಲ ಆಗುವ ಹಾಗೆ ಯೋಜನೆಗಳು ಹಾಗೂ ನೀರಿನ ಹಂಚಿಕೆ ಮಾಡಲಾಯಿತು. ಮೈಸೂರು ಸರ್ಕಾರವು ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದರಿಂದ ಹಚ್ಚಿನ ವಿರೋಧ ತೋರಿಸುವ ಶಕ್ತಿಯನ್ನು ಹೊಂದಿರಲಿಲ್ಲ.

1956ರಲ್ಲಿ ರಾಜ್ಯಗಳು ಪುನರ್ ವಿಂಗಡಣೆಯಾದಾಗ ಕರ್ನಾಟಕ ಸರ್ಕಾರವು ಕಾವೇರಿ ನದಿಯ ಉಪನದಿಗಳಾದ ಕಬಿನಿ, ಹೇಮಾವತಿ, ಹಾರಂಗಿ ಹಾಗೂ ಸುವರ್ಣಾವತಿ ಜಲಾಶಯ ಯೋಜನೆಗಳನ್ನು ಪ್ರಾರಂಭಿಸಿದಾಗ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿತು. ಸ್ವಾಂತಂತ್ರ್ಯ ಪೂರ್ವ ಮಾಡಿಕೊಂಡಿರುವ ಒಪ್ಪಂದಕ್ಕೆ ವಿರುದ್ಧವಾಗಿದೆ ಅನ್ನೋ ಕಾರಣಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತು.  ಸ್ವಾಂತಂತ್ರ್ಯದ ನಂತರ ಮತ್ತೊಮ್ಮೆ ವೈಜ್ಞಾನಿಕವಾಗಿ ಎರಡು ರಾಜ್ಯಗಳಿಗೆ ಒಪ್ಪಿಗೆಯಾಗುವಂತೆ ನದಿ ನೀರು ಹಂಚಿಕೆಯಾಗಬೇಕಾಗಿತ್ತು. ಆದ್ರೆ ಇದರ ಬಗ್ಗೆ ನಮ್ಮ ಕೇಂದ್ರ ಸರ್ಕಾರ ತಲೆಕೆಡಿಸಿಕೊಳ್ಳಲ್ಲಿಲ್ಲ.

ಗಮನಿಸಬೇಕಾದ ಅಂಶವೆಂದರೆ ಕಾವೇರಿ ನದಿಪಾತ್ರದಲ್ಲಿ ವಿವಿಧ ರಾಜ್ಯಗಳ ನದಿ ನೀರಿನ ಬಳಕೆಯನ್ನು ತಿಳಿಯಲು ಕೇಂದ್ರ ಸರ್ಕಾರ 1972ರಲ್ಲಿ ಕಾವೇರಿ ಸತ್ಯಶೋಧನಾ ಸಮಿತಿಯನ್ನು ಸ್ಥಾಪಿಸಿತು. ತನ್ನ ವರದಿಯನ್ನು ಸಲ್ಲಿಸಿದಾಗ ತಮಿಳುನಾಡಿನಲ್ಲಿ ನೀರಾವರಿಗೊಳಪಟ್ಟ ಪ್ರದೇಶ ಸುಮಾರು 1,440,000 ಎಕರೆಗಳಿಂದ 2,580,000 ಎಕರೆಗಳಿಗೆ ಹೆಚ್ಚಿಗೆಯಾಗಿತ್ತು. ಆದರೆ ಕರ್ನಾಟಕದಲ್ಲಿ ನೀರಾವರಿಗೊಳಪಟ್ಟ ಪ್ರದೇಶ 6,80,000 ಎಕರೆಗಳಷ್ಟಿತ್ತು. ತಮಿಳುನಾಡು ಸರ್ಕಾರ ಅದರ ಇಚ್ಚೆಯಂತೆ ಆಗಿದ್ದ ಸ್ವಾತಂತ್ರ್ಯಪೂರ್ವ ನಿಯಮಗಳನ್ನು ಮೀರಿತ್ತು.

ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಯೋಜನೆಯಿಂದ ತಮಗೆ ಅನ್ಯಾಯವಾಗುತ್ತಿದೆ ಎಂದು ತಮಿಳುನಾಡಿನ ರೈತರು  ಅಂತರ್ ರಾಜ್ಯ ಜಲ ವಿವಾದ ಅಧಿನಿಯಮ, 1956 ರ ಪ್ರಕರ ನ್ಯಾಯ ಮಂಡಳಿ ರಚಿಸಬೇಕು ಎಂದು ಕೇಳಿ ಸುಪ್ರೀಂ ಕೋರ್ಟ್ ಮೊರೆಹೋದರು. ಇದರ ಪ್ರಕರವಾಗಿ ಸುಪ್ರೀಂ ಕೋರ್ಟ್ 4ನೇ ಮೇ 1990 ರಂದು ಜಲವಿವಾದ ನ್ಯಾಯ ನಿರ್ಣಯಕ್ಕಾಗಿ ಒಂದು ಸೂಕ್ತ ನ್ಯಾಯಮಂಡಳಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತು.

ನ್ಯಾಯಮಂಡಳಿ ರಚನೆ ಹಾಗೂ ಕರ್ನಾಟಕದ ಪಾಲಿಗೆ ಶಾಪ:

ಚಿತ್ತತೋಷ್ ಮುಖರ್ಜಿ ಅವರ ನೇತ್ರತ್ವದಲ್ಲಿ ರಚನೆಯಾದ ನ್ಯಾಯಮಂಡಳಿ 2 ಜೂನ್ 1990  ರಂದು ತನ್ನ ಕಾರ್ಯ ಆರಂಭಿಸಿತು. ನ್ಯಾಯಮಂಡಳಿಯ ಮುಂದೆ ಕೆಳಕಂಡ ರಾಜ್ಯಗಳು ಈ ರೀತಿ ಬೇಡಿಕೆ ಇಟ್ಟವು
  • ಕರ್ನಾಟಕ ತನಗೆ 465 ಟಿಎಂಸಿ ನೀರು ಬೇಕು ಎಂದು ಹೇಳಿತು
  • ಕೇರಳ ತನಗೆ 99.8 ಟಿಎಂಸಿ ನೀರು ಬೇಕು ಎಂದು ಹೇಳಿತು
  • ಪಾಂಡಿಚೇರಿ ತನಗೆ 9.3 ಟಿಎಂಸಿ ಬೇಕು ಎಂದು ಹೇಳಿತು
  • ಆದ್ರೆ ತಮಿಳುನಾಡು ಮಾತ್ರ ಈ ಹಿಂದಿನಂತೆ ಇದ್ದ ಒಪ್ಪಂದದಂತೆ ತನಗೆ ಹಾಗೂ ಪಾಂಡಿಚೇರಿಗೆ 566 ಟಿಎಂಸಿ, 177 ಟಿಎಂಸಿ ಕರ್ನಾಟಕಕ್ಕೆ ಹಾಗೂ 5 ಟಿಎಂಸಿ ಕೇರಳಕ್ಕೆ ನೀಡಬೇಕು ಎಂದು ಕೇಳಿತು

ಇದಾದ ನಂತರ ತಮಿಳುನಾಡು ಸರ್ಕಾರ ನ್ಯಾಯಮಂಡಳಿಯ ಮುಂದೆ ಈ ಕೂಡಲೇ ಮಧ್ಯಂತರವಾಗಿ ತನಗೆ ನೀರು ಬಿಡಲು ಕಾರ್ಯಸೂಚಿ ರೂಪಿಸಬೇಕು ಎಂದು ನ್ಯಾಯಮಂಡಳಿಯ ಮುಂದೆ ಹೋಯಿತು. ಆಗ ಕಳೆದ ಹತ್ತು ವರ್ಷಗಳ ಮಾಹಿತಿಯನ್ನು ಕಲೆಹಾಕಿದ ನ್ಯಾಯಮಂಡಳಿ ತಮಿಳುನಾಡಿಗೆ ಪ್ರತಿ ವರ್ಷ 205 ಟಿಎಂಸಿ ನೀರು ಬಿಡಬೇಕು ಹಾಗೂ ಕರ್ನಾಟಕ ತನ್ನ ನೀರಾವರಿ ಪ್ರದೇಶವನ್ನು 1,120,000 ಎಕರೆಗಿಂತ ಹೆಚ್ಚಿಗೆ ಮಾಡಿಕೊಳ್ಳಬಾರದು ಎಂದು ಆದೇಶ ನೀಡಿತು. ಇದರಿಂದ ಕೋಪಗೊಂಡ ಕರ್ನಾಟಕದ ಇದಕ್ಕೆ ತಮಗೆ ಒಪ್ಪಿಗೆಯಿಲ್ಲ, ಅಂತಿಮ ತೀರ್ಪು ನೀಡಿ ಎಂದು ನ್ಯಾಯಮಂಡಳಿಯ ಮುಂದೆ ಹೇಳಿತು. ಆದರೆ ತಮಿಳುನಾಡು ಸರ್ಕಾರ ರಾಷ್ಟ್ರಪತಿಗಳ ಮೂಲಕ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಹೇಳಿಸಿ, ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಈ ತೀರ್ಪನ್ನು ಒಪ್ಪಿಕೊಳ್ಳಬೇಕಾಯಿತು ಹಾಗೂ ಈ ಮಧ್ಯಂತರ ಅದೇಶವನ್ನು ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ದಾಖಲಾಗುವಂತೆ ತಮಿಳುನಾಡು ಸರ್ಕಾರ ನೋಡಿಕೊಂಡಿತು.
ಇದರಿಂದ ಸಿಟ್ಟಿಗೆದ್ದ ಕರ್ನಾಟಕದ ಜನತೆ ರಾಜ್ಯಾದ್ಯಂತ ತೀರ್ಪಿನ ವಿರುದ್ಧ ಹೋರಾಟಗಳನ್ನು ಶುರು ಮಾಡಿದರು. ಇದೇ ರೀತಿ ತಮಿಳುನಾಡಿನಲ್ಲೂ ದಂಗೆಗಳು ಶುರುವಾದವು. ತಿಂಗಳುಗಳ ಕಾಲ ಬೆಂಗಳೂರಿನಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

1995-1996 ರಲ್ಲಿ ಕರ್ನಾಟಕದಲ್ಲಿ ಮಳೆಯ ಅಭಾವ ಕಾಣಿಸಿದ್ದರಿಂದ ತಮಿಳುನಾಡಿಗೆ ಮಧ್ಯಂತರ ಆದೇಶದಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಇದು ಗೊತ್ತಿದ್ದರೂ ಸಹ ತಮಿಳುನಾಡು ಮಧ್ಯಂತರ ಆದೇಶದಂತೆ ಕರ್ನಾಟಕ ತನಗೆ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಮುಂದೆ ಹೋಯಿತು. ಆದರೆ ಇದನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ನ್ಯಾಯಮಂಡಳಿಗೆ ಈ ಕೇಸನ್ನು ವರ್ಗಾಯಿಸುತು. ಅಲ್ಲಿ ತನ್ನ ಪ್ರಭಾವ ಬೀರಿದ ತಮಿಳುನಾಡು 11 ಟಿಎಂಸಿ ನೀರನ್ನು ಬಿಡಲು ಆದೇಶ ನೀಡಿತು. ಆ ಕಾಲದಲ್ಲಿ ಅದು ಕರ್ನಾಟಕದ ಪಾಲಿಗೆ ಅಸಾಧ್ಯವಾಗಿತ್ತು. ನಂತರ ಪ್ರಧಾನ ಮಂತ್ರಿಗಳ ಮಧ್ಯಸ್ತಿಕೆಯಲ್ಲಿ 6 ಟಿಎಂಸಿ ನೀರನ್ನು ಪಡೆಯುವಲ್ಲಿ ತಮಿಳುನಾಡು ಸಫಲವಾಯಿತು.

ಸಿ.ಆರ್. ಎಂಬ ಒಕ್ಕೂಟ ವಿರೋಧಿ ಮಂಡಳಿ

1997 ರಲ್ಲಿ ಕೇಂದ್ರ ಸರ್ಕಾರವು ಮಧ್ಯಂತರ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ಸಿ.ಆರ್.ಎ ಎಂಬ ಮಂಡಳಿಯೊಂದನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಎರಡು ರಾಜ್ಯಗಳ ಮುಂದೆ ಇಟ್ಟಿತು. ಇದರ ಅನ್ವಯ ಈ ಮಂಡಳಿಗೆ ಮದ್ಯಂತರ ಆದೇಶವನ್ನು ಜಾರಿಗೆ ತರಲು ಆಣೆಕಟ್ಟುಗಳನ್ನು ತನ್ನ ವಶಕ್ಕೆ ತಗೆದುಕೊಳ್ಳುವ ಹಕ್ಕನ್ನು ನೀಡಿತ್ತು. ಆದರೆ ಕರ್ನಾಟಕ ಸರ್ಕಾರ ಇಂತಹ ಒಕ್ಕೂಟ ವಿರೋಧಿ ಮಂಡಳಿಯನ್ನು ಸಾರಸಗಟಾಗಿ ತಿರಸ್ಕರಿಸಿತು. ಇದಾದ ನಂತರ ಕೇಂದ್ರ ಇಂತಹ ಅವೈಜ್ಞಾನಿಕ ಹಕ್ಕುಗಳನ್ನು ತಗೆದು ಹಾಕಿ ಕೊನೆಗೆ ಕಾವೇರಿ ರಿವರ್ ಅಥಾರಿಟಿ ಹಾಗೂ ಕಾವೇರಿ ಮಾನಿಟರಿಂಗ್ ಕಮಿಟಿಯಂಬ ಎರೆಡು ಸಮಿತಿಗಳನ್ನು ಸ್ಥಾಪಿಸಿತು.

2002ರಲ್ಲಿ ಕಾವೇರಿದ ಕಾವೇರಿ ಹೋರಾಟ

2002ರಲ್ಲಿ ಹಿಂದೆ 1995ರಲ್ಲಿ ಕಾಣಿಸಿಕೊಂಡ ಬರಗಾಲದ ಪರಿಸ್ಥಿತಿ ಮತ್ತೊಮೆ ಎದುರಾಯಿತು. ರಾಜ್ಯದ ಯಾವುದೇ ಜಲಾಶಯದಲ್ಲೂ ತನ್ನ ಬಳಕೆಗೆ ಬೇಕಾಗುವಷ್ಟು ನೀರು ಸಹ ಇರಲಿಲ್ಲ ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ತನ್ನ ಜನರಿಗಾಗಿ ನೀರನ್ನು ಬಿಡುವಂತೆ ಆಗ್ರಹಿಸಿ ನ್ಯಾಯಮಂಡಳಿಯ ಮುಂದೆ ಹೋಯಿತು. ಆದರೆ ನ್ಯಾಯಮಂಡಳಿ ತನ್ನ ಮಧ್ಯಂತರ ತೀರ್ಪಿನಲ್ಲಿ ಬರಗಾಲದ ಪರಿಸ್ಥಿತಿಯಲ್ಲಿರಬೇಕಾದ ಹಂಚಿಕೆ ಸೂತ್ರವನ್ನು ಹೇಳಿರಲಿಲ್ಲ. ಹಾಗಾಗಿ ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಈ ಸಾರಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಕಾವೇರಿ ರಿವರ್ ಅಥಾರಿಟಿ ಬದಲಾವಣೆ ಮಾಡುವ ತನಕ ಪ್ರತಿ ದಿನ 1.25 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಹೇಳಿತು. ಸರ್ಕಾರ ಇದೇ ಹೊತ್ತಿನಲ್ಲಿ ಸಿ.ಆರ್.ಎ ಮತ್ತೊಂದು ಸಭೆಯನ್ನು ಕರೆಯಬೇಕು ಎಂದು ಹೇಳಿತು. ಸಿ.ಆರ್.ಎ ಪ್ರಕಾರ ಕರ್ನಾಟಕ ಪ್ರತಿದಿನ ತಮಿಳುನಾಡಿಗೆ 0.8 ಟಿಎಂಸಿ ನೀರನ್ನು ಬಿಡಬೇಕು ಎಂದು ಹೇಳಿತು.

ಆದರೆ ಅದಾಗಲೇ ಕರ್ನಾಟಕದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಕರ್ನಾಟಕದಲ್ಲಿ ಮತ್ತೊಮ್ಮೆ ದೊಡ್ಡ ಹೋರಾಟ ಶುರುವಾಯಿತು. ಜನರ ಹೋರಾಟಕ್ಕೆ ಮಣಿದ ಸರ್ಕಾರ ತಮಿಳುನಾಡಿಗೆ ಬಿಡುತ್ತಿದ್ದ ನೀರನ್ನು ನಿಲ್ಲಿಸಿತು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ನೀರು ಬಿಡಲು ಶುರುಮಾಡಿದಾಗ ಕರ್ನಾಟಕದ ರೈತರೊಬ್ಬರು ಸೆಪ್ಟಂಬರ್ 18ರಂದು ನದಿಗೆ ಹಾರಿ ಪ್ರಾಣ ಬಿಟ್ಟರು. ಇದರಿಂದಾಗಿ ಪರಿಸ್ಥಿತಿ ಇನ್ನೂ ಕೆಟ್ಟಿತು. ಕಾವೇರಿ ನದಿ ಪಾತ್ರದ ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆದರೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರ್ನಾಟಕ ಸರ್ಕಾರ ನೀರು ಬಿಡಲು ಒಪ್ಪಲಿಲ್ಲ. ಇದಕ್ಕೆ ಪ್ರತಿಯಾಗಿ ತಮಿಳುನಾಡು ಮತ್ತೆ ಕೋರ್ಟ್ ಮೆಟ್ಟಿಲೇರಿತು. ನಂತರ ಈ ಸಂಬಂಧ ಕರ್ನಾಟಕ ಸರ್ಕಾರ ಕೋರ್ಟ್ ಆದೇಶ ಪಾಲಿಸದಿರುವ ಸಲುವಾಗಿ ಕೋರ್ಟ್ ಮುಂದೆ ಬೇಷರತ್ ಕ್ಷಮೆ ಯಾಚಿಸಿತ್ತು.

2007ರಲ್ಲಿ ಬಂದ ನ್ಯಾಯಮಂಡಳಿಯ ಅನ್ಯಾಯದ ತೀರ್ಪು

ಫೆಬ್ರವರಿ 5 2007 ರಲ್ಲಿ ಕಾವೇರಿ ನ್ಯಾಯಮಂಡಳಿಯು ತನ್ನ ತೀರ್ಪನ್ನು ಪ್ರಕಟಿಸಿತು. ತೀರ್ಪಿನ ಪ್ರಕಾರ ತಮಿಳುನಾಡಿಗೆ 419 ಟಿಎಂಸಿ ನೀರು, ಕರ್ನಾಟಕಕ್ಕೆ 270ಟಿಎಂಸಿ ನೀರು, ಪ್ರತಿ ವರ್ಷ ಕರ್ನಾಟಕ ತಮಿಳುನಾಡಿಗೆ 192 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಕೇರಳ ರಾಜ್ಯಕ್ಕೆ 30 ಟಿಎಂಸಿ ಹಾಗೂ ಪಾಂಡಿಚೇರಿ ಗೆ 7 ಟಿಎಂಸಿ ನೀರನ್ನು ನ್ಯಾಯ ಮಂಡಳಿ ತನ್ನ ತೀರ್ಪಿನಲ್ಲಿ ಹಂಚಿಕೆ ಮಾಡಿತ್ತು. ತೀರ್ಪನ್ನು ತಮಿಳುನಾಡು ಸ್ವಾಗತಿಸಿದರೆ ಕರ್ನಾಟಕ ಸರ್ಕಾರ ತೀರ್ಪನ್ನು ವಿರೋಧಿಸಿ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಿತು. ಈ ತೀರ್ಪನ್ನು ನೀಡುವಾಗ ತಮಿಳುನಾಡು ಸರ್ಕಾರ ತನ್ನ ಪ್ರಭಾವವನ್ನು ನ್ಯಾಯಮಂಡಳಿಯ ಮೇಲೆ ಬೀರುರುವ ಶಂಕೆ ಉಂಟಾಗುತ್ತದೆ. ಕಾರಣ:
  • ಮೊದಲಿನಿಂದಲೂ ಕರ್ನಾಟಕದಲ್ಲಿ ನೀರಾವರಿಗೆ ನೀರು ದೊರಕದಂತೆ ಮಾಡಿ ತನ್ನ ನೀರಾವರಿ ಪ್ರದೇಶವನ್ನು ಹೆಚ್ಚಿಸಿಕೊಂಡ ತಮಿಳುನಾಡು ನಂತರ ಅದು ತನಗೆ ಹೆಚ್ಚಿನ ಪಾಲಿನ ನೀರು ಬರಬೇಕಿರುವುದು ತನ್ನ ಹಕ್ಕು ಎನ್ನುವಂತೆ ನ್ಯಾಯಧಿಕರಣದ ಮುಂದೆ ವಾದ ಮಾಡಿ ಹೆಚ್ಚಿನ ಪಾಲನ್ನು ಪಡೆಯಿತು.
  • ಕರ್ನಾಟಕ ಹಾಗೂ ತಮಿಳುನಾಡಿನ ನಡುವ ಹರಿದ ನೀರನ್ನು ಮಾಪನ ಮಾಡಲು ಮೆಟ್ಟೂರಿನಲ್ಲಿ ಅಳೆಯಲಾಗುತ್ತಿತ್ತು, ಆದರೆ ಈ ತೀರ್ಪಿನಲ್ಲಿ ಅದನ್ನು ಕರ್ನಾಟಕದ ಬಿಳಿಗುಂಡ್ಲುವಿನಲ್ಲಿ ಅಳೆಯಲು ತೀರ್ಪು ನೀಡಲಾಯಿತು. ಗಮನಿಸಬೇಕಾದ ಅಂಶವೆಂದರೆ ಬಿಳಿಗುಂಡ್ಲುವಿನಿಂದ ಮೆಟ್ಟೂರಿಗೆ ಸುಮಾರು 25 ಟಿಎಂಸಿ ನೀರು ಹರಿದು ಹೋಗುತ್ತದೆ, ಆದರೆ ಇದರ ಲೆಕ್ಕವನ್ನು ಕರ್ನಾಟಕ ಬಿಡುವ ನೀರಿಗೆ ಸೇರಿಸುವ ಹಾಗಿಲ್ಲ.
  • ಕೇರಳಕ್ಕೆ ಕರ್ನಾಟಕದಿಂದ 21 ಟಿಎಂಸಿ ಹಾಗೂ ತಮಿಳುನಾಡಿನಿಂದ 9 ಟಿಎಂಸಿ ನೀರು ಬಿಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಕೇರಳ ಈ ನೀರನ್ನು ಉಪಯೋಗಿಸದ ಕಾರಣ ತಮಿಳುನಾಡು ತನ್ನ 9 ಟಿಎಂಸಿ ನೀರನ್ನು ಉಪಯೋಗಿಸಲು ನ್ಯಾಯಾಧಿಕರಣ ಅವಕಾಶ ನೀಡಿತು. ಆದರೆ ಕರ್ನಾಟಕಕ್ಕೆ ಮಾತ್ರ 21 ಟಿಎಂಸಿ ನೀರನ್ನು ಬಳಕೆ ಮಾಡಲು ಅವಕಾಶ ಕೊಡದೆ ತಮಿಳುನಾಡಿಗೆ ಹರಿಸಲು ಆದೇಶ ನೀಡಿತು ಹಾಗೂ ಬೇಕಾದಲ್ಲಿ ತಮಿಳುನಾಡು ಈ ನೀರನ್ನು ಬಳಸಲು ಅವಕಾಶ ನೀಡಿತು.
  • ಪರಿಸರ ರಕ್ಷಣೆಗಾಗಿ ಕರ್ನಾಟಕ 10 ಟಿಎಂಸಿ ನೀರು ಬಿಡಬೇಕು, ಆದರೆ ತಮಿಳುನಾಡಿಗೆ ಯಾವುದೇ ನೀರು ಬಿಡಲು ಆದೇಶದಲ್ಲಿ ತಿಳಿಸಲಾಗಿಲ್ಲ. ಪರಿಸರ ರಕ್ಷಣೆ ಕೇವಲ ಕರ್ನಾಟಕದ ಜವಾಬ್ದಾರಿಯಾಗಿದೆಯೇ?
  • ನ್ಯಾಯಾಧಿಕರಣ ಕರ್ನಾಟಕಕ್ಕೆ ಕುಡಿಯುವ ನೀರಿನ ಸಲುವಾಗಿ ತಗೆದಿಟ್ಟಿರುವ ಪಾಲು ಕೇವಲ 2 ಟಿಎಂಸಿ. ಬೆಂಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳನೆಲ್ಲ ಒಟ್ಟಾಗಿ ಸೇರಿಸಿದರೆ ಬೇಕಾಗುವ ನೀರಿನ ಮೊತ್ತ 60 ಟಿಎಂಸಿ.
  • ನ್ಯಾಯಧಿಕರಣದ ತಜ್ಞರ ವರದಿಯ ಪ್ರಕಾರ ತಮಿಳುನಾಡಿಗೆ 395 ಟಿಎಂಸಿ ನೀರು ಅಗತ್ಯವಿತ್ತೆಂದು ಹೇಳಲಾಗಿತ್ತು, ಆದರೆ ನ್ಯಾಯಧಿಕರಣದಲ್ಲಿ ಅದಕ್ಕೆ ಬರೋಬ್ಬರಿ 458 ಟಿಎಂಸಿ ನೀರನ್ನು ನೀಡಲಾಗಿದೆ!!

ಕರ್ನಾಟಕದಲ್ಲಿ ನಡೆದ ಹೋರಾಟಗಳು

ಕರ್ನಾಟಕದ ಪಾಲಿಗೆ ಮರಣ ಮೃದಂಗದಂತಿದ್ದ ಈ ತೀರ್ಪನ್ನು ವಿರೋಧಿಸಿ ರಾಜ್ಯದ ಎಲ್ಲಾ ವರ್ಗಗಳು ಬೀದಿಗೆ ಇಳಿದವು, ರೈತ ಸಂಘ, ಸಾಹಿತಿ ವಲಯ, ರಾಜಕೀಯ ವಲಯ, ಕನ್ನಡಪರ ಸಂಘಟನೆಗಳೆಲ್ಲ ಒಂದಾಗಿ ಈ ತೀರ್ಪನ್ನು ವಿರೋಧಿಸಿದವು. ಕರ್ನಾಟಕ ರಕ್ಷಣಾ ವೇದಿಕೆ ಈ ತೀರ್ಪು ಹೊರಬಂದ ಕೆಲವೇ ನಿಮಿಷಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಹೋರಾಟಗಳನ್ನು ಶುರುಮಾಡಿತು. ಇದರ ಜೊತೆಗೆ ತಲಕಾವೇರಿಯಿಂದ ಬೆಂಗಳೂರಿನ ವರೆಗೂ ಪಾದಯಾತ್ರೆಯನ್ನು ಮಾಡಿ ತೀರ್ಪಿನ ವಿರುದ್ಧ ಜನರನ್ನು ಸಂಘಟಿಸುವ ಕೆಲಸ ಮಾಡಿತು. ರಾಜ್ಯದ ಇತಿಹಾಸದಲ್ಲೇ ಸುಮಾರು 25000 ಜನರನ್ನು ದೆಹಲಿಗೆ ಕರೆದುಕೊಂಡು ಹೋಗಿ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಸರಿಯಾದ ಎಚ್ಚರಿಕೆಯನ್ನೇ ನೀಡಿತು. ಇದಾದ ನಂತರ ಎಚ್ಚೆತ್ತುಕೊಂಡ ನಮ್ಮ ಸರ್ಕಾರ ಹಾಗೂ ಪ್ರತಿಪಕ್ಷಗಳು ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕುವಲ್ಲಿ ಯಶಸ್ವಿಯಾದರು. 

ನಮ್ಮ ರಾಜ್ಯ ಸರ್ಕಾರಗಳ ನಿಷ್ಕ್ರಿಯತೆ ಹಾಗೂ ಪ್ರಾದೇಶಿಕ ಪಕ್ಷದ ಅವಶ್ಯಕತೆ

ಕಾವೇರಿಯ ನದಿ ನೀರು ಹಂಚೆಕೆಯ ವಿವಾದವು ಉಲ್ಬಣಿಸಿದಾಗಲೆಲ್ಲ, ನಮ್ಮ ಸರ್ಕಾರಗಳಿಗಿಂತ ಮೊದಲು ಪ್ರತಿಭಟನೆ ಹಾಗೂ ಜಾಗೃತಿಗೆ ಮುಂದಾಗಿರುವುದು ರೈತ ಸಂಘ, ಕನ್ನಡ ಪರ ಸಂಘಟನೆಗಳು. ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಅನ್ನೋ ಹಾಗೆ ನಮ್ಮ ರಾಜ್ಯ ಸರ್ಕಾರ ಹಾಗೂ ರಾಜಕಾರಣಿಗಳು ಎಚ್ಚೆತ್ತುಕೊಂಡಿದ್ದಾರೆ.

ಇತ್ತೀಚಿಗೆ ಮತ್ತೆ ಈ ವಿಷಯವಾಗಿ ತಮಿಳುನಾಡು ಸರ್ಕಾರ ಮತ್ತೆ ತನ್ನ ಹೆಳೆ ವರಸೆಯನ್ನು ಶುರುಮಾಡಿದೆ. ಕರ್ನಾಟಕ ಸರ್ಕಾರ ಮೇಕೆದಾಟುವಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಆಣೆಕಟ್ಟು ಕಟ್ಟಿ ರಾಜ್ಯದ ಜನರ ಹಾಗೂ ರೈತರ ಒಳಿತಿಗಾಗಿ ನೀರನ್ನು ಸಂಗ್ರಹಿಸುವ ಯೋಜನೆಯನ್ನು ಹಾಕಿಕೊಂಡಿತ್ತು. ಆದರೆ ಇದಕ್ಕೆ ಕ್ಯಾತೆ ತಗೆದಿರುವ ಜಯಲಲಿತಾ ಅವರ ಸರ್ಕಾರ ಯಾವುದೇ ಕಾರಣಕ್ಕೂ ಕರ್ನಾಟಕ ಆಣೆಕಟ್ಟು ಕಟ್ಟಬಾರದು ಹಾಗೂ ಅದು ಸಂಗ್ರಹಿಸುವ ನೀರನ್ನು ಬೇಸಿಗೆಯ ಬೆಳೆಗೆ ಉಪಯೋಗಿಸಬಾರದು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ನಮ್ಮ ರಾಜ್ಯಕ್ಕೆ ತನ್ನ ಪಾಲಿಗೆ ನ್ಯಾಯವಾಗಿ ದಕ್ಕಬೇಕಾಗಿದ್ದ ನೀರನ್ನು ಬಳಸಿಕೊಳ್ಳಲು ಹಕ್ಕಿಲ್ಲವೇ? ಯಾವುದೋ ಓಬಿರಾಯನ ಕಾಲದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ ನಿಯಮಗಳನ್ನು ಇನ್ನೂ ಮುಂದುವರೆಸಿಕೊಂಡು ಹೋಗಬೇಕೆ? ಕಾವೇರಿ ನದಿಯ ನೀರು ಕೇವಲ ತನ್ನ ಸ್ವತ್ತು ಅನ್ನುವ ಹಾಗೆ ವರ್ತಿಸುತ್ತಿರುವ ತಮಿಳುನಾಡಿನ ದರ್ಪವನ್ನು ಸಹಿಸಿಕೊಂಡು ಸುಮ್ಮನಿರಬೇಕೆ?

ಇಲ್ಲಿ ನಮ್ಮ ರಾಜ್ಯ ಸರ್ಕಾರದ ನಿಷ್ಕ್ರಿಯತೆ ಎದ್ದು ಕಾಣಿಸುತ್ತದೆ. ಇದಕ್ಕೆ ಈ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್ ಗುಲಾಮಗಿರಿ ಕಾರಣ. ಪ್ರತಿಯೊಂದಕ್ಕು ದೆಹಲಿಯತ್ತ ಮುಖಮಾಡುವ ನಮ್ಮ ನಾಯಕರಿಂದ ಹೆಚ್ಚಿನದೇನು ನಿರೀಕ್ಷಿಸಲು ಸಾಧ್ಯ? ಕೇಂದ್ರದಲ್ಲಿ ಒಂದಲ್ಲಾ ಒಂದು ಸರ್ಕಾರದ ಜೊತೆ ಮೈತ್ರಿ ಹೊಂದಿರುವ ತಮಿಳುನಾಡಿನ ರಾಜಕೀಯ ಪಕ್ಷಗಳು ತಮಗೆ ಅನುಕೂಲವಾಗುವಂತೆ ಹಿಂದಿನಿಂದಲು ನಡೆದುಕೊಂಡು ಬಂದಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಆ ಪರಿಸ್ಥಿತಿ ಇಲ್ಲ. ಬಹುಷ: ನಮಗೂ ತಮಿಳುನಾಡಿನಲ್ಲಿರುವಂತೆ ಕರ್ನಾಟಕದ ನೆಲ, ಜಲ ಹಾಗೂ ಜನರ ಹಿತವನ್ನು ಕಾಪಾಡುವ ಒಂದು ರಾಜಕೀಯ ಪಕ್ಷದ ಅವಶ್ಯಕತೆ ಪದೇ ಪದೇ ಎದ್ದು ಕಾಣುತ್ತಿದೆ. 

ಮಂಗಳವಾರ, ಫೆಬ್ರವರಿ 7, 2012

ಸರೋಜಿನಿ ಮಹಿಷಿ ವರದಿ ಎಂಬ ಕನ್ನಡಿಯೊಳಗಿನ ಗಂಟು


ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸದಾನಂದ ಗೌಡರು “ಬದಲಾದ ಕಾಲಘಟಕ್ಕೆ ಅನುಗುಣವಾಗಿ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಈ ಸಂಬಂಧ ಸಮಿತಿ ರಚಿಸಲು ಸರ್ಕಾರದ ಚಿಂತನೆ ನಡೆಸಿದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ನಂತರ ಕನ್ನಡಿಗರಿಗೆ ಉದ್ಯೋಗ ಕೊಡಬೇಕೆಂಬ ವರದಿಯ ಬಗ್ಗೆ ಮಾತಾಡಿರುವದು ನಮ್ಮ ಪುಣ್ಯ!!! ಅದಕ್ಕಾಗಿ ನಮ್ಮ ಮುಖ್ಯಮಂತ್ರಿಗಳಿಗೆ ಶುಭಾಷಯ ಹೇಳೋಣ. ಅದ್ರೆ ಮೂರು ದಶಕಗಳಿಂದ ಧೂಳು ಹಿಡಿದು ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುತ್ತೇವೆ ಅನ್ನೋ ಹೇಳಿಕೆ ಬದಲು ಸಮಿತಿ ರಚಿಸಲು ಚಿಂತನೆ ನಡೆಸುತ್ತೇವೆ, ಯೋಚಿಸುತ್ತಿದ್ದೇವೆ, ಜಾರಿ ಮಾಡುತ್ತೇವೆ... ಅನ್ನೋ ಅವರ ಪದ ಪ್ರಯೋಗಗಳು ಗಾಳಿಯಲ್ಲಿ ಗೋಪುರ ಕಟ್ಟುವ ಪ್ರಯತ್ನವಾಗಿ ಕಾಣುತ್ತಿದೆ.
(ಚಿತ್ರಕೃಪೆ: ಅಂತರ್ಜಾಲ)

ಮೂರು ದಶಕಗಳ ಹಿಂದೆ ತಯಾರಿಸಲಾದ ಸರೋಜಿನಿ ಮಹಿಷಿ ವರದಿಯನ್ನು, ಕಳೆದ ೧೫ ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಔದ್ಯೋಗಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಇಂದಿನ ದಿನ ಮಾನಕ್ಕೆ ತಕ್ಕಂತೆ ಶಿಫಾರಸ್ಸುಗಳನ್ನು ಬದಲಾಯಿಸಬೇಕಾಗಿರುವುದು ಇಂದಿನ ಅವಶ್ಯಕತೆ. ಇಷ್ಟರಲ್ಲಾಗಲೇ ಈ ಕೆಲಸ ಮಾಡಬೇಕಾಗಿದ್ದ ಸರ್ಕಾರ ಇನ್ನೂ ಸಮಿತಿ ರಚಿಸುವಲ್ಲಿ, ಚಿಂತನೆ ನಡೆಸುವಲ್ಲಿ, ಬೇಡಿಕೆ ಪರಿಶೀಲಿಸುವುದರಲ್ಲಿ ಮೀನಾಮೇಷ ಎಣಿಸುತ್ತ ಜನರ ಕಿವಿಯ ಮೇಲೆ ಹೂವು ಇಡುತ್ತಿದೆ.

ಸರೋಜಿನಿ ಮಹಿಷಿಯಲ್ಲಿ ಹೇಳಿರುವ ಉದ್ಯೋಗ ಮೀಸಲಾತಿಯ ಬಗ್ಗೆ ನೋಡುತ್ತಿದ್ದಾಗ, ಈ ಯೋಚನೆಯನ್ನ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಮಾಡಿದ್ದಾರೆಯೇ? ಇದರ ಅನುಷ್ಠಾನ ಬಲು ಕಷ್ಟವಾದ ಕ್ರಿಯೆಯೇ? ಈ ತರಹದ ಯೋಜನೆಗಳನ್ನು ಬೇರೆ ರಾಜ್ಯದಲ್ಲಿ ಮಾಡಲಾಗಿದೆಯೆ? ಅಂತ ಕುತೂಹಲದಿಂದ ಹುಡಿಕಿದರೆ ನಮಗೆ ಆಶ್ಚರ್ಯ ಕಾದಿದೆ. ಬಿ.ಜೆ.ಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ವಿವಿಧ ರಾಜ್ಯಗಳಲ್ಲಿ ತಮ್ಮ ರಾಜ್ಯದ ಜನರ ಹಿತಾಸಕ್ತಿಗಾಗಿ ಎಲ್ಲಾ ಹಂತದ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿವೆ. ಅಂತಹ ಕೆಲವು ರಾಜ್ಯಗಳ ಮಾಹಿತಿಯನ್ನು ನಾವು ಈಗ ನೋಡೋಣ

ಮಹಾರಾಷ್ಟ್ರ:
ನವೆಂಬರ್ 2008 ರಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿನ ಎಲ್ಲ ಉದ್ಯೋಗಗಳಲ್ಲೂ 80% ಅಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು ಎಂದು ತೀರ್ಮಾನಿಸಲಾಯಿತು. ಅದರಲ್ಲೂ ಮುಂಬರುವ 140 ಎಸ್..ಜೆಡ್. ಗಳಲ್ಲಿ ಆರಂಭವಾಗು ಎಲ್ಲ ಕಂಪನಿಗಳ ಹುದ್ದೆಗಳಲ್ಲಿ 80% ಸ್ಥಳೀಯರಿಗೆ ಕೊಡಬೇಕು ಎಂದು ಆದೇಶ ಹೊರಡಿಸಿತು. ಇದು, ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಬಗ್ಗೆ 1968 ನಂತರ, ಮಹಾರಾಷ್ಟ್ರ ಸರ್ಕಾರ ಹೊರಡಿಸಿದ 6ನೇ ಸರ್ಕಾರಿ ಆದೇಶ.

ಒರಿಸ್ಸಾ:
ಅಕ್ಟೋಬರ್ 2008 ರಲ್ಲಿ ಒರಿಸ್ಸಾ ಸರ್ಕಾರ ಕೂಡ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಒರಿಸ್ಸಾದಲ್ಲಿನ ಎಲ್ಲ ಗ್ರೂಪ್ ’ಸಿ ಮತ್ತು ’ಡಿ ಉದ್ಯೋಗಗಳಲ್ಲೂ 90% ಅಷ್ಟು ಹುದ್ದೆಗಳನ್ನು, ಹಾಗೂ ಗ್ರೂಪ್ ’ಎ ಮತ್ತು ’ಬಿ ಹುದ್ದೆಗಳಲ್ಲಿ 65% ಅಷ್ಟು ಸ್ಥಳೀಯರಿಗೆ ಮೀಸಲಿಡಬೇಕು ಎಂದು ತೀರ್ಮಾನಿಸಿತು. ಹೊಸ ಉದ್ಯೋಗ ನೀತಿಗಳನ್ನು ಅಳವಡಿಸಿ, ಕಂಪನಿಗಳೊಡನೆ ಆಗಿದ್ದ ಒಪ್ಪಂದ (MoU) ಗಳನ್ನು ಮರುಪರಿಶೀಲಿಸಿ, ಅವಶ್ಯವೆನಿಸಿದರೆ ತಿದ್ದುಪಡಿ ಮಾಡಲಾಗುವುದು ಎಂದು ಸರ್ಕಾರ ತೀರ್ಮಾನಿಸಿತು.

ತಮಿಳುನಾಡು:
2009ರ ಸರ್ಕಾರಿ ಆದೇಶದಲ್ಲಿ ತಮಿಳುನಾಡಿನಲ್ಲಿ ಸ್ಥಾಪಿಸಲಾಗುವ ಎಲ್ಲಾ ಕಾರ್ಖಾನೆಗಳಲ್ಲಿ ಶೇ 75 ರಷ್ಟು ಉದ್ಯೋಗಗಳನ್ನು ತಮಿಳುನಾಡಿನ ಜನರಿಗೆ ನೀಡಬೇಕೆಂಬ ನಿಯಮ ಮಾಡಿದೆ. ಜೊತೆಗೆ ಈ ನಿಬಂಧನೆಗೆ ಒಪ್ಪಿಕೊಳ್ಳುವ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ವಿವಿಧ ಸವಲತ್ತುಗಳನ್ನು ಒದಗಿಸುತ್ತದೆ. ಈ ಹಿಂದೆ ಸ್ಥಾಪಿಸಲಾಗಿರುವ ಸಂಸ್ಥೆಗಳು ಸಹ ಸರ್ಕಾರಿ ಅದೇಶವನ್ನು ಪಾಲಿಸಿದಲ್ಲಿ ಅವರಿಗೂ ಸಹ ಸವಲತ್ತುಗಳನ್ನು ವಿಸ್ತರಿಸುವ ಯೋಜನೆಯನ್ನು ಹೊಂದಿದೆ.

ಗುಜರಾತ:
ಗುಜರಾತ ಸರ್ಕಾರವು ತನ್ನ ಉದ್ಯಮ ನೀತಿಯಲ್ಲಿ, ತನ್ನ ರಾಜ್ಯದಲ್ಲಿ ಸ್ಥಾಪಿಸಲಾಗುವ ಉದ್ಯಮಗಳಿಂದ ಸೃಷ್ಠಿಯಾಗುವ ಉದ್ಯೋಗಗಳಲ್ಲಿ ಹೆಚ್ಚಿನ ಪಾಲು ದೊರಕುವಂತೆ ಮಾಡಲು ಯೋಜನೆಯೊಂದನ್ನು ಸ್ಥಾಪಿಸಿದೆ. ಇದರ ಮೂಲಕ ಸ್ಥಳೀಯರಿಗೆ ಹೆಚ್ಚಿನ ಕೆಲಸ ದೊರಕುವಂತೆ ಮಾಡಿದೆ.

ಈ ಮೇಲಿನ ಉದಾಹರಣೆಗಳನ್ನು ನೋಡಿದಾಗ, ಆಯಾ ರಾಜ್ಯಗಳು ತನ್ನ ರಾಜ್ಯದ ಜನರ ಹಿತಕ್ಕಾಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕೆಂಬ ಕಾನೂನು ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ನಮ್ಮ ಭಾರತ ದೇಶದ ಪ್ರತಿಯೊಂದು ರಾಜ್ಯಗಳು ತಮ್ಮದೇ ಆದ ರಾಜ್ಯ ಸರ್ಕಾರವನ್ನು ಹೊಂದಿವೆ. ಜನರಿಂದ ಆರಿಸಲಾಗುವ ಈ ಸರ್ಕಕಾರಗಳು, ತನ್ನನ್ನು ಆರಿಸಿ ಕಳುಹಿಸಿದ ಜನರಿಗೆ ಸವಲತ್ತುಗಳನ್ನು ಒದಗಿಸುವುದು ಸರಿಯಾದ ಕ್ರಮ, ಇದಲ್ಲದೇ ಆಯಾ ರಾಜ್ಯದಲ್ಲಿ ಸ್ಥಾಪಿಸಲಾಗುವ ಉದ್ಯಮಗಳಿಗೆ ತೆರಿಗೆ ವಿನಾಯಿತಿ, ರಿಯಾಯಿತಿ ದರದಲ್ಲಿ ವಿದ್ಯುತ್, ನೀರು, ಭೂಮಿ ಎಲ್ಲವನ್ನೂ ನೀಡುವಾಗ ಖರ್ಚಾಗುವುದು ಜನರ ತೆರಿಗೆಯ ಹಣ. ಹಾಗಾಗಿ ಅಲ್ಲಿಯ ಜನರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದು ಸಹಜ ನ್ಯಾಯವಾಗಿ ಕಾಣುತ್ತದೆ. ನಮ್ಮ ರಾಜ್ಯ ಸರ್ಕಾರವೂ ಪರಿಷ್ಕೃತ ಸರೋಜಿನಿ ಮಹಿಷಿ ವರದಿಯನ್ನು ಒಂದು ಕಾಲಮಿತಿ ಯೋಜನೆಯನ್ನಾಗಿ ಮಾಡಿಕೊಂಡು ಅನುಷ್ಠಾನಕ್ಕೆ ತರಲು ಚಿಂತನ-ಮಂಥನ ಮಾಡುವುದನ್ನು ಬಿಟ್ಟು ಜಾರಿಗೆ ತರಲಿ ಎಂದು ಆಶಿಸೋಣ.

ಮುಗಿಸುವುದಕ್ಕಿಂತ ಮುಂಚೆ: ಫೆಬ್ರವರಿ ತಿಂಗಳಿನಲ್ಲಿ ಜೆ.ಪಿ ನಗರದಲ್ಲಿ ನಡೆದ ಉದ್ಯೋಗ ಮೇಳದ ಜಾಹೀರಾತನ್ನು ಇಂಗ್ಲಿಷಿನಲ್ಲಿ ಹಾಕಲಾಗಿತ್ತು, ಇದನ್ನ ನಾನು ಹಾಗೂ ಕೆಲವು ಗೆಳೆಯರು ಪ್ರಶ್ನಿಸಿದಾಗ, ಜಿ.ಪಿ ನಗರದಲ್ಲಿ ಭಾರತದ ಎಲ್ಲಾ ಜನರು ವಾಸಿಸುತ್ತಾರೆ, ಹಾಗಾಗಿ ಕೆಲಸಗಳನ್ನು ಕೇವಲ ಕನ್ನಡಿಗರಿಗೆ ನೀಡಬೇಕು ಎಂದು ಹೇಳುವುದು ಸಂಕುಚಿತತೆ. ನಾವು ಭಾರತೀಯರಾಗಿ ಯೋಚಿಸೋಣ ಎಂಬ ಸಲಹೆಯನ್ನು ಆಳುತ್ತಿರುವ ಪಕ್ಷದ ವಿಧ್ಯಾರ್ಥಿ ಸಂಘಟನೆಯ ಮುಖಂಡರೊಬ್ಬರು ನಮಗೆ ಸಲಹೆ ನೀಡಿದ್ರು. ಹಾಗಿದ್ರೆ ಈ ಸರ್ಕಾರದಿಂದ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುವ ಕೆಲಸ ಮಾಡೋಕೆ ಆಗುತ್ತಾ ಅನ್ನೋ ಪ್ರಶ್ನೆ ಸಹ ನಮ್ಮನ್ನ ಈಗ ಕಾಡುತ್ತೆ.

ಕೊನೆಯದಾಗಿ: ನಮಗೆ ಗುಜರಾತ ಸರ್ಕಾರವೇ ಮಾದರಿ ಅಂತ ದಿನಕ್ಕೆ ನೂರು ಬಾರಿ ಹೇಳೋ ರಾಜ್ಯ ಸರ್ಕಾರಕ್ಕೆ ಅಲ್ಲಿ ತುಂಬಾ ಹಿಂದೆಯೇ ಉದ್ಯೋಗ ಮೀಸಲಾತಿಯನ್ನು ಜಾರಿಗೆ ತಂದಿದ್ದಾರೆ ಅನ್ನೋ ಅಂಶ ಗೊತ್ತಿದೆಯೋ ಇಲ್ಲವೋ ಪಾಪ!!!

ಸೋಮವಾರ, ಡಿಸೆಂಬರ್ 12, 2011

ಪರಿಣಾಮಕಾರಿ ಆಡಳಿತಕ್ಕಾಗಿ ಕನ್ನಡದಲ್ಲಿ ತಂತ್ರಜ್ಞಾನ

ಆತ್ಮೀಯ ಗೆಳೆಯರೇ,

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನೆರೆವೇರಿದೆ. ಅಲ್ಲಿ ಕಳೆದ ಮೂರು ದಿನಗಳಲ್ಲಿ ಅಲ್ಲಿಯ ಜನರೊಂದಿಗೆ ಹೆಚ್ಚು ಬೆರೆಯಲು ಸಾಧ್ಯವಾಯಿತು. ಇದ್ದಷ್ಟು ದಿನ ಅಲ್ಲಿನ ಜನರ ಜೊತೆ ಬೆರೆತು ಅಲ್ಲಿಯ ಸಾಮಾಜಿಕ ಒಳನೋಟ ಪಡೆಯಲು ಸ್ವಲ್ಪ ಮಟ್ಟಿಗೆ ಸಾಧ್ಯವಾಗಿದೆ. ಇದರ ಜೊತೆಗೆ ಈ ಮೊದಲೇ ತಿಳಿಸಿದಂತೆ “ಆಧುನಿಕ ಜಗತ್ತು ಮತ್ತು ಕನ್ನಡ” ಅನ್ನುವ ವಿಚಾರ ಗೋಷ್ಠಿಯಲ್ಲಿ “ಪರಿಣಾಮಕಾರಿ ಆಡಳಿತಕ್ಕಾಗಿ ಕನ್ನಡ ತಂತ್ರಜ್ಞಾನ” ಅನ್ನುವ ವಿಷಯದ ಕುರಿತು ನನ್ನ ಅನಿಸಿಕೆಗಳನ್ನು ಹಂಚಿಕೊಂಡೆ, ಈ ವಿಷಯಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ದೊರೆಯಿತು. ನನ್ನ ಭಾಷಣದ ಸಾರಾಂಶವನ್ನು ನಿಮ್ಮ ಜೊತೆಗೆ ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. ನಾನು ಮಾತನಾಡಿದ್ದು ನನ್ನದೇ ಊರಿನ (ಉತ್ತರ ಕರ್ನಾಟಕ) ಶೈಲಿಯಲ್ಲಿದ್ದರೂ, ಬರಹವನ್ನು ಎಲ್ಲರ ಕನ್ನಡದಲ್ಲಿ ಬರೆದಿದ್ದೇನೆ. ಇದನ್ನ ಓದಿ, ಖಂಡಿತವಾಗಿಯೂ ನಿಮ್ಮ ಅಭಿಪ್ರಾಯವನ್ನು ತಿಳಿಸಿ...












ಆಡಳಿತ ಅಂದರೇನು?

ಒಬ್ಬ ಸಾಮಾನ್ಯ ಮನುಷ್ಯನಿಗೆ ಅವನ ದಿನ ನಿತ್ಯದ ಬದುಕಿನಲ್ಲಿ ಜೀವನದ ಬೇರೆ ಬೇರೆ ಅಗತ್ಯಗಳ ಈಡೇರಿಕೆಗಾಗಿ ಅವನು ಒಡನಾಡುವ ಸರ್ಕಾರಿ ವ್ಯವಸ್ಥೆಗಳು ಆತನ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವಂತಾಗುವುದನ್ನೇ  ಆಡಳಿತ ಎಂದು ಕರೆಯಬಹುದು. ಒಂದು ಚಿಕ್ಕ ಉದಾಹರಣೆಗೆ ಕೊಪ್ಪಳ ಪಕ್ಕದ ಹಳ್ಳಿಯೊಂದರ ಮಲ್ಕಪ್ಪ ಎಂಬ ಸಾಮಾನ್ಯ ರೈತ ಒಂದು ಸಾಮಾನ್ಯ ದಿನದಲ್ಲಿ ವ್ಯವಸ್ಥೆಯ ಜೊತೆ ಹೇಗೆಲ್ಲ ಒಡನಾಡಬಹುದು? ಆತ ಬೆಳಿಗ್ಗೆ ಎದ್ದು ಪಟ್ಟಣಕ್ಕೆ ಬರಲು ಬೇಕಿರುವ ಬಸ್ಸು, ಅಂಚೆ ಇಲ್ಲವೇ ಬ್ಯಾಂಕಿನಲ್ಲಿ ಅವನ ಬೆಳೆಗೆ ಬೇಕಿರುವ ಹಣಕಾಸಿನ ಸೌಲಭ್ಯ, ತಹಶಿಲ್ದಾರ ಕಚೇರಿಯಲ್ಲಿ ಅವನಿಗೆ ಬೇಕಿರುವ ತನ್ನ ಆಸ್ತಿಯ ಖಾತಾ, ಪಡಿತರ ಅಂಗಡಿಯಲ್ಲಿ ಸಿಗಬೇಕಿರುವ ಸೀಮೆ ಎಣ್ಣೆ, ಅಕ್ಕಿ, ಗೋಧಿ, ಕೃಷಿ ಮಾರುಕಟ್ಟೆಯಲ್ಲಿ ಬೆಳೆದ ಬೆಳೆ ಮಾರಲು ಬೇಕಿರುವ ಸಹಾಯ ಹೀಗೆ ಒಂದು ಸಾಮಾನ್ಯ ದಿನದ ಬೇಡಿಕೆಗಳೆಲ್ಲವನ್ನೂ ಅವನಿಗೆ ಸಮಾಧಾನ ತರುವಂತೆ ಪೂರೈಸುವಂತಹ ವ್ಯವಸ್ಥೆಯನ್ನು ಕಟ್ಟುವುದು ಮತ್ತು ಆ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುವಂತೆ ನಿಗಾ ವಹಿಸುವುದನ್ನೇ ಆಡಳಿತ ಎಂದು ಕರೆಯಬಹುದು.

ಪರಿಣಾಮಕಾರಿ ಆಡಳಿತ ಎಂದರೇನು?

ಒಬ್ಬ ಸಾಮಾನ್ಯ ನಾಗರೀಕನ ಬೇಕು ಬೇಡಗಳನ್ನು ಯಾವುದೇ ತಾರತಮ್ಯವಿಲ್ಲದೇ, ಗೊಂದಲಗಳಿಲ್ಲದೇ, ಸರಿಯಾದ ಸಮಯಕ್ಕೆ, ಒಳ್ಳೆಯ ಗುಣಮಟ್ಟ ಮತ್ತು ಹೊಣೆಗಾರಿಕೆಯೊಂದಿಗೆ ಪೂರೈಸುವುದನ್ನೇ ಪರಿಣಾಮಕಾರಿ ಆಡಳಿತ ಅನ್ನಬಹುದು. ಪರಿಣಾಮಕಾರಿ ಆಡಳಿತದಲ್ಲಿ ಜನರೇ ಕೇಂದ್ರ ಬಿಂದು, ಅವರ ಬೇಕು-ಬೇಡಗಳ ಸುತ್ತಲೇ ವ್ಯವಸ್ಥೆಯ ಎಲ್ಲ ಅಂಗಗಳು ರೂಪುಗೊಂಡಿರುತ್ತವೆ. ಆಡಳಿತ ವ್ಯವಸ್ಥೆಯು ನಾಗರೀಕರ ಅನುಕೂಲಕ್ಕಾಗಿ ತನ್ನ ಸೇವೆಗಳನ್ನು ಹಾಗೂ ಸೌಲಭ್ಯಗಳನ್ನು ರೂಪಿಸುವ, ಬದಲಾಯಿಸುವ ಹಾಗೂ ಒದಗಿಸುವ ಪ್ರಾಮಾಣಿಕ ಕೆಲಸ ಮಾಡುತ್ತದೆ. ಈ ಸಂಬಂಧದಲ್ಲಿ ಜನರ ಅಪೇಕ್ಷೆಗಳು ದೃಷ್ಟಿಕೋನಗಳಿಗೆ ಅತೀ ಹೆಚ್ಚಿನ ಮಾನ್ಯತೆಯಿರುತ್ತೆ.  ಸಂಕ್ಷಿಪ್ತವಾಗಿ ಹೇಳುವುದಾದರೆ ಪರಿಣಾಮಕಾರಿ ಆಡಳಿತದ ಮುಖ್ಯ ಗುಣಲಕ್ಷಣಗಳು:
  • ಜನರ ಅಪೇಕ್ಷೆಗಳಿಗೆ ಸ್ಪಂದಿಸುವಂತದ್ದು.
  • ಜನರೆಡೆಗೆ ಉತ್ತರದಾಯಿತ್ವ ಹೊಂದಿರುವಂತದ್ದು
  • ಅತ್ಯಂತ ಚುರುಕಾಗಿ, ಕಡಿಮೆ ಸಮಯಯಲ್ಲಿ ಯಾವುದೇ ಬೇಡಿಕೆಯನ್ನು ಈಡೇರಿಸುವಂತದ್ದು
  • ಎಲ್ಲ ಹಂತದಲ್ಲೂ ಪಾರದರ್ಶಕತೆಯನ್ನು ಕಾಯ್ದುಕೊಂಡಿರುವಂತದ್ದು
  • ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು, ಸಮ ನೆಲೆಯ ಸಂಬಂಧವನ್ನು ಉತ್ತೇಜಿಸುವಂತದ್ದು
  • ಭ್ರಷ್ಟಾಚಾರಕ್ಕೆ ಎಡೆಯಿರದ್ದು
ಮೇಲಿನ ಉದಾಹರಣೆಯಲ್ಲಿ ಹೇಳಿದ ರೈತ ಮಲ್ಕಪ್ಪನಿಗೆ ತನ್ನೆಲ್ಲ ಅಗತ್ಯಗಳನ್ನು ಕಡಿಮೆ ಸಮಯದಲ್ಲಿ, ಪಾರದರ್ಶಕವಾಗಿ, ಒಳ್ಳೆಯ ಗುಣಮಟ್ಟದಲ್ಲಿ ಪಡೆಯುವಂತಾದರೆ ಅಂತಹ ವ್ಯವಸ್ಥೆ ಪರಿಣಾಮಕಾರಿಯಾದ ಆಡಳಿತ ನೀಡುತ್ತಿದೆ ಅನ್ನಬಹುದು. ಯಾವ ವ್ಯವಸ್ಥೆಯ ಸೇವೆಗಳಿಂದ ಒಬ್ಬ ನಾಗರೀಕನಾಗಿ ಆತನಿಗೆ ತನ್ನೆಲ್ಲ ಬದುಕಿನ ಅಗತ್ಯಗಳನ್ನು ಅತ್ಯಂತ ಸುಲಭವಾಗಿ, ತಡೆಯಿಲ್ಲದೇ, ಗೊಂದಲವಿಲ್ಲದೇ ಪೂರೈಸಿಕೊಳ್ಳಲು ಆಗುತ್ತಿದೆಯೋ ಮತ್ತು ಅಂತಹ ವ್ಯವಸ್ಥೆ ಆತನಲ್ಲಿ ತಾನೂ ಕೂಡ ಈ ವ್ಯವಸ್ಥೆಯ ಭಾಗವೆಂಬ ಭಾವವನ್ನು ತುಂಬುತ್ತದೆಯೋ ಅಂತಹ ವ್ಯವಸ್ಥೆ ನಿಜಕ್ಕೂ ಪರಿಣಾಮಕಾರಿಯಾದ ಆಡಳಿತ ನೀಡುತ್ತಿದೆ ಅನ್ನಬಹುದು.

ಪರಿಣಾಮಕಾರಿ ಆಡಳಿತಕ್ಕೆ ತಂತ್ರಜ್ಞಾನ ಹೇಗೆ ಸಹಾಯಕ?(-ಆಡಳಿತ)

ಮೇಲೆ ತಿಳಿಸಿದ ಹಲ ಮಾನದಂಡಗಳ ಅನುಸಾರ ಆಡಳಿತ ನಡೆಸುವಂತಾಗಲು ತಂತ್ರಜ್ಞಾನದಲ್ಲಾಗಿರುವ ಬದಲಾವಣೆಗಳನ್ನು ಅತ್ಯಂತ ಸಮರ್ಥವಾಗಿ ಜಗತ್ತಿನ ಹಲವಾರು ದೇಶಗಳು ಬಳಸಿಕೊಳ್ಳುತ್ತಿವೆ. ನಮ್ಮ ನಾಡಿನ ಉದಾಹರಣೆಯನ್ನೇ ತೆಗೆದುಕೊಂಡರೆ ಸುಮಾರು ೧೦-೧೫ ವರ್ಷಗಳ ಹಿಂದಿನ ಆಡಳಿತ ಯಂತ್ರದೊಡನೆ ಜನರ ಒಡನಾಟದ ಅನುಭವಕ್ಕೂ ತಂತ್ರಜ್ಞಾನದ ಬಳಕೆಯ ಇವತ್ತಿನ ದಿನದ ಅನುಭವಕ್ಕೂ ಗೋಚರಿಸುವಂತಹ ಬದಲಾವಣೆಗಳಿವೆ. ಹಿಂದೆ ಒಂದು ಚಿಕ್ಕ ಕೆಲಸವಾಗಬೇಕಾದರೂ ವಾರಗಟ್ಟಲೆ ಕಾಯುವ ಪ್ರಸಂಗವಿತ್ತು. ಕಳಪೆ ಸೇವೆ, ಭ್ರಷ್ಟಾಚಾರ, ಹೀಗೆ ಸಾಲು ಸಾಲು ಸಮಸ್ಯೆಗಳ ಮಧ್ಯೆ ಆಡಳಿತ ಅನ್ನುವುದು ಜನರನ್ನು ಬಿಟ್ಟು ಕಟ್ಟಿಕೊಂಡ ಕೋಟೆ ಎಂಬಂತಿತ್ತು. ಇದು ಸಂಪೂರ್ಣವಾಗಿ ಬದಲಾಗದಿದ್ದರೂ ೧೦-೧೫ ವರ್ಷಗಳ ಹಿಂದಿಗಿಂತ ಸಾಕಷ್ಟು ಸಹನೀಯವಾಗಿದೆ ಮತ್ತು ಇಂತಹದೊಂದು ಬದಲಾವಣೆಯಲ್ಲಿ ತಂತ್ರಜ್ಞಾನದ ಪಾತ್ರ ಹಿರಿದಿದೆ. ಒಂದಿಷ್ಟು ಉದಾಹರಣೆಯೊಂದಿಗೆ ಇದನ್ನು ನೋಡೊಣ.
  • ಸರ್ಕಾರಿ ಕಚೇರಿಯಿಂದ ರೈತನೊಬ್ಬ ತನ್ನ ಭೂಮಿಗೆ ಸಂಬಂಧಿಸಿದ ಪಹಣಿ ಪತ್ರ ಪಡೆಯಲು ಕಾಯಬೇಕಾದ ಸ್ಥಿತಿ ಇತ್ತು. ಸರ್ಕಾರದ ಭೂಮಿ ಯೋಜನೆಯಿಂದ ಪಹಣಿ ಪತ್ರ ಪಡೆಯುವ ವ್ಯವಸ್ಥೆಯನ್ನು ಗಣಕೀಕರಣ ಮಾಡುವುದರೊಂದಿಗೆ ಎಲ್ಲೆಡೆ ನಿಮಿಷಗಳಲ್ಲೇ ರೈತ ಪಹಣಿ ಪತ್ರ ಪಡೆಯುವಂತಾಗಿದೆ. 
  • ರೇಶನ್ ಕಾರ್ಡ್, ಪಾಸ್-ಪೋರ್ಟ್ ಮುಂತಾದ ಗುರುತಿನ ಪತ್ರಕ್ಕೆ ಅರ್ಜಿ ಸಲ್ಲಿಸಲು ಕಛೇರಿಗಳಿಗೆ ಅಲೆಯಬೇಕಾಗಿದ್ದ ದಿನಗಳಿಂದ ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸುವ ಅನುಕೂಲ ಸಾಧ್ಯವಾಗಿದೆ. 
  • ರೈತ ತನ್ನ ಬೆಳೆಗೆ ಸರಿಯಾದ ಬೆಲೆ ಕಲ್ಪಿಸಿಕೊಳ್ಳಲು ದಲ್ಲಾಳಿಗಳ, ಮಧ್ಯವರ್ತಿಗಳ ಮೊರೆ ಹೋಗಬೇಕಾದ ದಿನಗಳಿಂದ ಕೂತಲ್ಲಿಯೇ ಮೊಬೈಲ್ ಮೂಲಕ ತನ್ನ ಬೆಳೆಗಳಿಗೆ ವಿವಿಧ ಮಾರುಕಟ್ಟೆಯಲ್ಲಿರುವ ಬೆಲೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುವಂತಹ ಬದಲಾವಣೆಯತ್ತ ಸಾಗಿದ್ದೇವೆ.
  • ಈ ಹಿಂದೆ ಬ್ಯಾಂಕೊಂದರಿಂದ ಹಣ ಪಡೆಯಲು, ಹಣ ಹೂಡಲು, ಅಥವಾ ಯಾವುದೇ ಹಣಕಾಸಿಗೆ ಸಂಬಂಧಿಸಿದ ವ್ಯವಹಾರ ಮಾಡಲು ಬ್ಯಾಂಕಿನಲ್ಲಿ ಸಾಲಿನಲ್ಲಿ ನಿಲ್ಲದೇ ವಿಧಿಯಿಲ್ಲ ಅನ್ನುವಂತಿತ್ತು. ಆನ್ ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಎಟಿಎಮ್, ಫೋನ್ ಬ್ಯಾಂಕಿಂಗ್ ನಂತಹ ಸೌಲಭ್ಯಗಳು ಬಂದ ಮೇಲೆ ಯಾವುದೇ ಹೊತ್ತಿನಲ್ಲಿ, ಯಾವುದೇ ತಡೆಯಿಲ್ಲದೇ, ಕಿರಿಕಿರಿಯಿಲ್ಲದೇ ಹಣಕಾಸಿನ ವ್ಯವಹಾರಗಳನ್ನು ಮಾಡುವಂತಾಗಿದೆ. 
  • ಎಸ್.ಎಸ್.ಎಲ್.ಸಿ, ಪಿ.ಯು.ಸಿ  ಮುಂತಾದ ಪರೀಕ್ಷೆಗಳ ಫಲಿತಾಂಶ ಪ್ರಕಟವಾದಾಗ ದೂರದ ಹಳ್ಳಿಯ ವಿಧ್ಯಾರ್ಥಿಗಳು, ಪಾಲಕರು ಫಲಿತಾಂಶಕ್ಕಾಗಿ ಮರುದಿನದವರೆಗೂ ಕಾತರದಿಂದ ಕಾಯುವಂತಹ ದಿನಗಳಿದ್ದವು. ಇವತ್ತು ಮೊಬೈಲಿನಲ್ಲಿ ಒಂದು ಸಂದೇಶದ ಮೂಲಕ ಇಲ್ಲವೇ ಅಂತರ್ಜಾಲ ತಾಣದ ಮೂಲಕ ಫಲಿತಾಂಶ ಪ್ರಕಟಗೊಂಡ ಕೆಲವೇ ನಿಮಿಷಗಳಲ್ಲಿ ತಿಳಿಯುವಂತಹ ಬದಲಾವಣೆ ಸಾಧ್ಯವಾಗಿದೆ.
  • ರೈಲು, ಬಸ್ಸಿನಲ್ಲಿ ಮುಂಗಡ ಟಿಕೇಟ್ ಕಾಯ್ದಿರಿಸಲು ನಿಲ್ದಾಣಕ್ಕೆ ಹೋಗಿ, ಸಾಲಿನಲ್ಲಿ ನಿಂತು ಟಿಕೇಟ್ ಕೊಳ್ಳಬೇಕಾದ ದಿನಗಳಿಂದ ಮೊಬೈಲ್, ಕಂಪ್ಯೂಟರ್, ಇಲ್ಲವೇ ಮನೆಯ ಹತ್ತಿರದ ಕಾಯ್ದಿರಿಸುವ ಅಂಗಡಿಯೊಂದರಿಂದ ಟಿಕೇಟ್ ಕೊಳ್ಳುವ ಆರಾಮದಾಯಕ ಅನುಭವದತ್ತ ಸಾಗಿದ್ದೇವೆ.
  • ಇಂದಿನ ಚುನಾವಣೆಗಳಲ್ಲಿ ಮತಯಂತ್ರಗಳು ಬಳಕೆಗೆ ಬಂದ ನಂತರ ಚುನಾವಣೆಯಲ್ಲಿ ಸುಧಾರಣೆಗಳನ್ನು ಕಾಣಲು ಸಾಧ್ಯವಾಗಿದೆ. ಹಿಂದಿನಂತೆ ಮತದಾನದಲ್ಲಿ ಆಗುತ್ತಿದ್ದ ಮೋಸವನ್ನು ಕಡಿಮೆಗೊಳಿಸಲು ಸಾಧ್ಯವಾಗಿದೆ, ಎಣಿಕೆ ಕಾರ್ಯ ಸುಲಭವಾಗಿದೆ, ಫಲಿತಾಂಶವನ್ನು ಬೇಗನೆ ಜನರಿಗೆ ನೀಡಲು ಸಾಧ್ಯವಾಗಿದೆ.
ತಂತ್ರಜ್ಞಾನದ ಬಳಕೆಯೆನ್ನುವುದು ಮೇಲಿನ ಎಲ್ಲ ಉದಾಹರಣೆಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಆಡಳಿತ ಯಂತ್ರವನ್ನು ಜನರ ಮನೆ, ಮನದತ್ತ ಕೊಂಡೊಯ್ಯುವಲ್ಲಿ ಸಾಕಷ್ಟು ಯಶಸ್ವಿಯಾಗಿವೆ. ಈ ಪ್ರಕ್ರಿಯೆಯಲ್ಲಿ ಸೋರಿಕೆ ಕಡಿಮೆಯಾಗಿದೆ, ಜನರ ಬೇಡಿಕೆಗಳು ಸಾಕಷ್ಟು ವೇಗವಾಗಿ ಪೂರೈಕೆಯಾಗುತ್ತಿವೆ, ಆಡಳಿತ ಅನ್ನುವುದು ಜನರಿಂದ ಬೇರ್ಪಟ್ಟ ವ್ಯವಸ್ಥೆ ಅಂತಾಗದೇ ಜನರ ಸುತ್ತಲೇ, ಜನರಿಗಾಗಿಯೇ ಕಟ್ಟಿಕೊಳ್ಳಬೇಕಾದ ವ್ಯವಸ್ಥೆ ಮತ್ತು ತಂತ್ರಜ್ಞಾನದ ಸರಿಯಾದ ಬಳಕೆಯ ಮೂಲಕ ಆ ಗುರಿಯನ್ನು ಸಾಧಿಸಲುಬಹುದು ಅನ್ನುವುದು ಇತ್ತಿಚಿನ ದಿನಗಳಲ್ಲಿ ತಕ್ಕ ಮಟ್ಟಿಗೆ ಸಾಬೀತಾಗಿದೆ ಒಟ್ಟಾರೆಯಾಗಿ, ಆಡಳಿತದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ಆಗುವ ಉಪಯೋಗಗಳನ್ನು ಪಟ್ಟಿ ಮಾಡುವುದಾದರೆ, ಮುಖ್ಯವಾದವು ಇಂತಿವೆ.
  • ದಿನದ ೨೪ ಗಂಟೆಗಳು ಸಹ ಜನರಿಗೆ ತಮಗೆ ಬೇಕಾಗಿರುವ ಮಾಹಿತಿ ಹಾಗೂ ಸೇವೆಗಳು ಬೆರಳ ತುದಿಯಲ್ಲಿ ಲಭ್ಯ
  • ಆಡಳಿತದಲ್ಲಿ ಚುರುಕುತನ
  • ಗುಣಮಟ್ಟದ ಸೇವೆ
  • ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ
ತಂತ್ರಜ್ಞಾನವನ್ನು ಆಡಳಿತದಲ್ಲಿ ಸರಿಯಾಗಿ ತಂದಾಗ ಮೇಲಿನ ಉದಾಹರಣೆಯ ನಮ್ಮ ರೈತ ಮಲ್ಕಪ್ಪ ತನಗೆ ಬೇಕಾಗಿರುವ ಹಲವಾರು ಸೇವೆಗಳನ್ನು ಪಾರದರ್ಶಕವಾಗಿ, ಕಡಿಮೆ ಖರ್ಚಿನಲ್ಲಿ, ಕಡಿಮೆ ಸಮಯದಲ್ಲಿ ಪಡೆಯಲು ಸಾಧ್ಯವಾಗುತ್ತದೆ. ಉದಾ: ತನ್ನ ಹೊಲದ ಪಹಣಿಯನ್ನು ನಿಮಿಷಗಳಲ್ಲೇ ಪಡೆಯಬಲ್ಲ, ತನ್ನ ಬ್ಯಾಂಕಿನ ವ್ಯವಹಾರವನ್ನ ನಿಮಿಷಗಳಲ್ಲೇ ಮುಗಿಸಿಕೊಳ್ಳಬಲ್ಲ, ವಿದೇಶದಿಂದ ಅವನ ಮಗ ಕಳಿಸುವ ಹಣವನ್ನ ನಿಮಷಗಳಲ್ಲೇ ಪಡೆಯಬಲ್ಲ. ತನ್ನ ಬೆಳೆಗಳನ್ನು ಮಾರಲು ಇರುವ ಒಳ್ಳೆಯ ಬೆಲೆಯ ಬಗ್ಗೆ ಇದ್ದಲೇ ಮಾಹಿತಿ ಪಡೆಯಬಲ್ಲ. ಹೀಗೆ ತಂತ್ರಜ್ಞಾನ ಅವನ ಬದುಕನ್ನು ಸುಲಭವಾಗಿಸಬಲ್ಲದು.

ಪರಿಣಾಮಕಾರಿ ಆಡಳಿತ ನೀಡುವಲ್ಲಿ ಕನ್ನಡ ತಂತ್ರಜ್ಞಾನ ಹೇಗೆ ಸಹಾಯಕ:

ಆಡಳಿತವನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ತಂತ್ರಜ್ಞಾನ ಹೇಗೆ ಮಹತ್ತರ ಪಾತ್ರವಹಿಸುತ್ತದೆ ಎನ್ನುವುದನ್ನು ತಕ್ಕ ಮಟ್ಟಿಗೆ ಅರಿತುಕೊಂಡ ಮೇಲೆ ಹುಟ್ಟುವ ಪ್ರಶ್ನೆ ಏನೆಂದರೆ “ ಇಷ್ಟೆಲ್ಲ ಅನುಕೂಲಗಳು ತಂತ್ರಜ್ಞಾನದಿಂದ ದೊರಕುತ್ತಿದ್ದರೂ ಯಾಕೆ ಆಡಳಿತ ಯಂತ್ರ ಅಂದುಕೊಂಡ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ, ಯಾಕೆ ಜನರು ತಂತ್ರಜ್ಞಾನ ಕೊಡಮಾಡಿರುವ ಅನುಕೂಲಗಳನ್ನು ವ್ಯಾಪಕವಾಗಿ ಬಳಸುತ್ತಿಲ್ಲ” ಅನ್ನುವುದು. ಇದಕ್ಕೆ ಉತ್ತರ ಅತ್ಯಂತ ಸುಲಭವಾಗಿದೆ. ಅದೇನೆಂದರೆ “ತಂತ್ರಜ್ಞಾನದ ಈ ಬದಲಾವಣೆಗಳು ಆಡಳಿತದಲ್ಲಿ ಜನರ ನುಡಿಯ ಪಾತ್ರವೇನು ಅನ್ನುವುದನ್ನು ಕಡೆಗಣಿಸಿರುವುದು” ಅಡಳಿತದಲ್ಲಿ ಜನರ ಭಾಷೆ ನೆಲೆಗೊಳ್ಳದೇ ಹೋದಲ್ಲಿ ಎಂತಹುದೇ ತಂತ್ರಜ್ಞಾನದ ಏಳಿಗೆ ಆಡಳಿತವನ್ನು ಜನರ ಬಳಿಗೆ ಪರಿಣಾಮಕಾರಿಯಾಗಿ ಕೊಂಡೊಯ್ಯಲಾರದು ಅನ್ನುವುದು ನಮ್ಮ ಸಮಾಜವನ್ನು ಕಂಡರೆ ಅತ್ಯಂತ ಸ್ಪಷ್ಟವಾಗುವುದು. ಆಡಳಿತಕ್ಕೆ ಚುರುಕು ತರಲೆಂದು ಅಳವಡಿಸಿಕೊಂಡ ಹೆಚ್ಚಿನ ತಂತ್ರಜ್ಞಾನದ ಪರಿಕರಗಳು ಇಂಗ್ಲಿಷಿನಲ್ಲಿದ್ದು, ಜನ ಸಾಮಾನ್ಯರ ನುಡಿಯಾದ ಕನ್ನಡದಿಂದ ದೂರವೇ ಉಳಿದಿವೆ. ಇಂಗ್ಲಿಷ್ ಅನ್ನುವ ತಡೆಗೋಡೆ ತಂತ್ರಜ್ಞಾನದ ಪೂರ್ತಿ ಪ್ರಯೋಜನವನ್ನು ಜನರಿಗೆ ತಲುಪಲಾರದಂತೆ ಮಾಡಿದೆ. ಭಾರತದ ಜನಸಂಖ್ಯೆಯಲ್ಲಿ ಇಂಗ್ಲಿಷ್ ಬಲ್ಲವರ ಸಂಖ್ಯೆ ಸುಮಾರು ೧೦ ಕೋಟಿ ಅನ್ನುತ್ತವೆ ಅಂಕಿಅಂಶಗಳು. ಅದರಲ್ಲಿ ಕರ್ನಾಟಕದ ಪಾಲು ೫% ಅಂದರೆ ಸುಮಾರು ೫೦ ಲಕ್ಷ ಅನ್ನಬಹುದು. ಇದರಲ್ಲೂ ಇಂಗ್ಲಿಷ್ ಅನ್ನು ಚೆನ್ನಾಗಿ ತಿಳಿದು, ಇಂಗ್ಲಿಷಿನಲ್ಲಿ ಬರುವ ಎಲ್ಲ ತಂತ್ರಜ್ಞಾನದ ಅನುಕೂಲಗಳನ್ನು ಚೆನ್ನಾಗಿ ಬಳಸಬಲ್ಲಂತವರು ಎಲ್ಲೋ ಕೆಲವರು ಮಾತ್ರ. ರಾಜ್ಯದ ೬ ಕೋಟಿ ಜನರಲ್ಲಿ ಒಂದು ೭-೮% ಜನರಿಗಷ್ಟೇ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಬಳಸುವ, ಅದರ ಲಾಭ ಪಡೆದುಕೊಳ್ಳಲು ಆಗುತ್ತಿದೆಯೇ ಹೊರತು ಉಳಿದ ೯೨% ಜನರು ಈ ಹೊಸ ವ್ಯವಸ್ಥೆಯ ಕಲ್ಪನೆಯಿಂದ ಆಚೆಯೇ ಉಳಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಈ ಆಡಳಿತ ವ್ಯವಸ್ಥೆಯು ಜನರ ಭಾಷೆಯಾದ ಕನ್ನಡದಲ್ಲಿ ಇಲ್ಲದಿರುವುದೇ ಆಗಿದೆ.

ನನ್ನ ಗೆಳಯನೊಬ್ಬ ಕೊರಿಯಾ ದೇಶಕ್ಕೆ ಕೆಲಸದ ಮೇಲೆ ಹೋಗಿದ್ದ. ಒಂದು ದಿನ ಅವನು ಯಾವುದೋ ಜಾಗಕ್ಕೆ ಹೋಗಬೇಕಾದ ಸಂದರ್ಭದಲ್ಲಿ ಸರಿಯಾದ ಮಾಹಿತಿ ಇರದ ಕಾರಣ ದಾರಿ ತಪ್ಪಿಸಿಕೊಂಡು ಬಿಟ್ಟಿದ್ದ, ಆಗ ದಾರಿಯಲ್ಲಿ ಸಿಕ್ಕ ಅಲ್ಲಿನ ಸ್ಥಳೀಯರೊಬ್ಬರಿಗೆ ತಾನು ಹೋಗಬೇಕಾಗಿರುವ ಜಾಗಕ್ಕೆ ದಾರಿ ಹೇಳಿ ಎಂದು ಕೇಳಿಕೊಂಡಾಗ, ಅವರು ತಮ್ಮಲ್ಲಿದ್ದ ಮೊಬೈಲ್ ನಲ್ಲಿ ಅಂತರ್ಜಾಲ ಬಳಸಿ ಅವನು ಹೋಗಬೇಕಾಗಿದ್ದ ದಾರಿಯನ್ನು ಹುಡುಕಿ, ಹೇಗೆ ಹೋಗಬೇಕೆಂಬ ನಕಾಶೆಯನ್ನು ತೋರಿಸಿದರು. ನನ್ನ ಸ್ನೇಹಿತ ಅವರಿಗೆ ಧನ್ಯವಾದ ಹೇಳಿ ಹೊರಟ, ಅವನು ಗಮನಿಸಿದ ಮುಖ್ಯ ಸಂಗತಿ ಅಲ್ಲಿಯ ಜನರು ಯಾರ ಸಹಾಯವಿಲ್ಲದೇ ತಂತ್ರಜ್ಞಾನದ ಬಳಕೆಯನ್ನು ಸುಲಭವಾಗಿ ಉಪಯೋಗಿಸಲು ಶಕ್ತವಾಗಿದ್ದರು, ಇದಕ್ಕೆ ಕಾರಣ ಆ ತಂತ್ರಜ್ಞಾನವು ಅವರ ನುಡಿಯಾದ ಕೋರಿಯನ್ ಭಾಷೆಯಲ್ಲಿತ್ತು ಎಂಬುದು. ನಮ್ಮ ನಾಡಿನಲ್ಲಿ ಇಂತಹದೊಂದು ಸಾಧ್ಯತೆಯನ್ನು ನಿರೀಕ್ಷಿಸಲೂ ಸಾಧ್ಯವೇ?

ಅದಕ್ಕೆ ಹೋಲುವಂತೆ ನನ್ನ ಮನೆಯಲ್ಲಾದ ಒಂದು ಉದಾಹರಣೆಯನ್ನು ನಿಮ್ಮ ಮುಂದಿಡುತ್ತೇನೆ. ನನ್ನ ಹತ್ತಿರದ ಸಂಬಂಧಿಯೊಬ್ಬರು ತಮ್ಮ ಮೊಬೈಲ್ ಫೋನಿನಲ್ಲಿ ಹಾಕುತ್ತಿದ್ದ ಕರೆನ್ಸಿ ಕರೆ ಮಾಡದಿದ್ದರೂ ಅದು ಹೇಗೊ ಖಾಲಿಯಾಗುತ್ತಿದೆ , ಸ್ವಲ್ಪ ನೋಡು ಎಂದು ನನ್ನ ಕೈಗಿತ್ತರು. ಅದನ್ನು ನೋಡಿದಾಗ ಕಾಣಿಸಿದ್ದು ಅಂದರೆ ಕಾಲರ್ ಟ್ಯೂನ್, ಜೋಕ್ಸ್ ಅದು ಇದು ಅಂತ ಇವರಿಗೆ ಕಳಿಸಿದ್ದ ಸಂದೇಶವಕ್ಕೆಲ್ಲ ಇವರು ತಿಳಿಯದೇ ಏನೋ ಒಂದು ಒತ್ತಿ ಅದಕ್ಕೆಲ್ಲ ಒಪ್ಪಿ ತಮ್ಮ ಹಣ ಕಳೆದುಕೊಳ್ಳುತ್ತಾ ಇದ್ದರು. ಇದನ್ನು ಸರಿ ಪಡಿಸಿಕೊಳ್ಳಲು ಗ್ರಾಹಕ ಸೇವಾ ಕೇಂದ್ರಕ್ಕೆ ಕರೆ ಮಾಡಿದರೆ ಅಲ್ಲಿ ಕನ್ನಡವಿಲ್ಲ. ಈ ರಗಳೆ ಬೇಡವೆಂದು ಮೊಬೈಲ್ ಬಳಕೆಯನ್ನೇ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದರು. ದೇವರು ಕೊಟ್ಟರೂ ಪೂಜಾರಿ ಕೊಡ ಅನ್ನುವಂತೆ ತಂತ್ರಜ್ಞಾನ ಅನುಕೂಲಗಳನ್ನು ತಂದರೂ ಇಂಗ್ಲಿಷ್ ಅನ್ನುವ ಭಾಷೆಯ ತಡೆಗೋಡೆ ಈ ಲಾಭ ಜನರಿಗೆ ದೊರಕದಂತೆ ಮಾಡಿದೆ ಅನ್ನಬಹುದು.
    
ಮೇಲಿನ ಎರಡು ಉದಾಹರಣೆಗಳು ಪರಿಣಾಮಕಾರಿ ಆಡಳಿತಕ್ಕೆ ಬಳಸುವ ತಂತ್ರಜ್ಞಾನದಲ್ಲಿ ಭಾಷೆಯ ಪ್ರಾಮುಖ್ಯತೆಯನ್ನು ಮನದಟ್ಟು ಮಾಡಿಸುತ್ತವೆ. ಇಂತಹ ಸಾವಿರಾರು ಪ್ರಕರಣಗಳು ನಮ್ಮ ಕಣ್ಣ ಮುಂದೆ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪರಿಹಾರವೆಂದರೆ ಜನಸಾಮಾನ್ಯರಿಗೆ ಎಲ್ಲಾ ಸೇವೆ/ಸೌಲಭ್ಯಗಳು ಕನ್ನಡದಲ್ಲಿ ದೊರೆಯಬೇಕು. ಇದಕ್ಕಾಗಿ ತಂತ್ರಜ್ಞಾನವನ್ನು ಕನ್ನಡದಲ್ಲಿ ತರುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಹಾಗಿದ್ದರೆ ಇವತ್ತಿನ ಸ್ಥಿತಿಗತಿಯೇನು ಅನ್ನುವುದನ್ನು ಕೊಂಚ ನೋಡಬೇಕಿದೆ.

ನಮ್ಮ ಸರ್ಕಾರ ಆಡಳಿತವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಂತ್ರಜ್ಞಾನದ ಸಹಾಯದಿಂದ ಕೆಲವು ಯೋಜನೆಗಳನ್ನು ಹೊರತಂದಿದೆ. ಇದರಲ್ಲಿ ಪ್ರಮುಖವಾಗಿ ಭೂಮಿ, ನೆಮ್ಮದಿ, ಈ-ಪ್ರಕ್ಯೂರ್ಮೆಂಟ್, ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್ವರ್ಕ್, ಹ್ಯೂಮನ್ ರಿಸೋರ್ಸ್ ಮ್ಯಾನೇಜ್ ಮೆಂಟ್ ಸಿಸ್ಟಮ್, ಬ್ಯಾಂಗಲೋರ್-ಒನ್, ಕರ್ನಾಟಕ-ಒನ್ ಯೋಜನೆಗಳನ್ನು ಇ-ಆಡಳಿತಕ್ಕೆ ತಂದಿವೆ. ಆದರೆ ಇದರಿಂದ ನಮ್ಮ ರಾಜ್ಯದ ಎಷ್ಟು ಜನರಿಗೆ ಉಪಯೋಗವಾಗುತ್ತಿದೆ?
ಈ ಯೋಜನೆಗಳ ಪಟ್ಟಿಯಲ್ಲಿ ಭೂಮಿಯಂತಹ ಕೆಲವು ಯೋಜನೆಗಳು ಜನರಿಗೆ ಸೇವೆಯನ್ನು ಕನ್ನಡದಲ್ಲಿ ಒದಗಿಸುತ್ತಿವೆ. ಆದರೆ ಮೇಲೆ ಹೇಳಿರುವ ಹೆಚ್ಚಿನ ಯೋಜನೆಗಳ ಅಂತರ್ಜಾಲ ತಾಣಗಳಲ್ಲಿ ಅಥವಾ ಅದರ ತಂತ್ರಾಂಶಗಳಲ್ಲಿ ಕನ್ನಡದ ಬಳಕೆ  ಕಾಣಸಿಗುವುದಿಲ್ಲ.

ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಜನರಿಗೆ ತಲುಪಿಸಲೆಂದೇ ಇರುವ ಸರ್ಕಾರದ ಅಧಿಕೃತ ಅಂತರ್ಜಾಲ ತಾಣದಲ್ಲಿ ಕಣ್ಣಾಡಿಸಿದರೆ ಕನ್ನಡದಲ್ಲಿ ತೆರೆದುಕೊಳ್ಳಬೇಕಾಗಿದ್ದ ತಾಣ ಮೊದಲಿಗೆ ಇಂಗ್ಲೀಷಿನಲ್ಲಿ ತೆರೆದುಕೊಳ್ಳುತ್ತದೆ. ಅಲ್ಲಲ್ಲಿ ಕಣ್ಣೊರೆಸಲು ಎಂಬಂತೆ ಕನ್ನಡದಲ್ಲೂ ಚೂರು ಪಾರು ಮಾಹಿತಿ ಇದ್ದರೂ ಆ ಕನ್ನಡ ಪುಟಗಳಿಗೆ ಹೋಗುವುದು ಹೇಗೆ ಎಂದು ತಿಳಿಯಲು ಕೂಡ ನಿಮಗೆ ಇಂಗ್ಲಿಶ್ ಗೊತ್ತಿರಬೇಕು, ಪಡಿತರ ಚೀಟಿ ವಿತರಣೆ ಯೋಜನೆ, ಮುಖ್ಯಮಂತ್ರಿಗಳ ದಿನವಹಿ ಆಡಳಿತವನ್ನು ಜನರಿಗೆ ತೋರಿಸುವ ಯೋಜನೆ, ಶಿಕ್ಷಣ ಕ್ಷೇತ್ರದ ವಿವಿಧ ಇಲಾಖೆಗಳ ತಾಣಗಳು, ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ಯೋಗ ಹಾಗೂ ತರಬೇತಿ ಕೇಂದ್ರದ ತಾಣ, ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಂತರ್ಜಾಲ ತಾಣ, ಪೋಲಿಸ್ ಇಲಾಖೆಯ ತಾಣ, ಕೇಂದ್ರ ಸರ್ಕಾರ ಅಧೀನದಲ್ಲಿರುವ ಅಂಚೆ ಕಛೇರಿ, ವಿಮೆ, ತೆರಿಗೆ ಪಾವತಿ, ರೈಲ್ವೆ ಇಲಾಖೆಯ ತಾಣ ಹೀಗೆ ಜನಸಾಮಾನ್ಯ ದಿನ ನಿತ್ಯ ಒಡನಾಡುವ ಎಲ್ಲ ಸರ್ಕಾರಿ ವ್ಯವಸ್ಥೆಗಳಲ್ಲೂ ಕನ್ನಡ ಸಲ್ಲದಿರುವ ನುಡಿಯಾಗಿದೆ. ಜನಸಾಮಾನ್ಯರು ಪ್ರತಿದಿನ ನೇರವಾಗಿ ಮುಖಾಮುಖಿಯಾಗುವ ಫೋನ್ ಬಿಲ್, ವಿಮೆ, ಅಂಚೆ, ಬ್ಯಾಂಕ್ ಅರ್ಜಿ, ಫಾರ್ಮ್, ಚೆಕ್ಕುಗಳು ಕನ್ನಡದಲ್ಲಿ ಸಿಗುತ್ತಿಲ್ಲ, ಗ್ರಾಹಕ ಸೇವಾ ಕೇಂದ್ರಗಳಲ್ಲಿ ಕನ್ನಡದ ಆಯ್ಕೆಗಳು ಸಿಗುವುದಿಲ್ಲ, ವಿವಿಧ ಬ್ಯಾಂಕ್ ಗಳ ಎಟಿಎಂಗಳಲ್ಲಿ ಕನ್ನಡದ ಆಯ್ಕೆ ಸಮರ್ಪಕವಾಗಿ ಇಲ್ಲ, ಹಾಗೆಯೇ ಸರ್ಕಾರಿ ಕಚೇರಿಯ ಒಳಗಡೆ ಬಳಕೆ ಮಾಡುವಂತಹ ಹೆಚ್ಚಿನ ತಂತ್ರಾಂಶಗಳೆಲ್ಲದರ ಇಂಟರ್ ಫೇಸ್ (ಉಪಯೋಗಿಸುವ ಪರದೆ) ಮತ್ತು ಅದರಿಂದ ಹೊರ ಬರುವ ಔಟ್ ಪುಟ್ (ಕಾರ್ಡು, ಅರ್ಜಿ, ಫಾರಂ) ಹೀಗೆ ಹೆಚ್ಚಿನೆಡೆ ಇಂಗ್ಲಿಷಿಗೆ ಮಣೆ. ಹೀಗಿರುವಾಗ ೯೨% ಕನ್ನಡವೊಂದನ್ನೇ ನೆಚ್ಚಿಕೊಂಡಿರುವ ಜನರಿಗೆ ಪರಿಣಾಮಕಾರಿ ಆಡಳಿತದ ಅನುಭವ ಸಿಗುವುದಾದರೂ ಹೇಗೆ?

ಇನ್ನೂ ಖಾಸಗಿ ವ್ಯವಸ್ಥೆಯನ್ನು ಗಮನಿಸಿದರೆ, ಗ್ರಾಹಕ ಸೇವೆಯಲ್ಲಿ ಭಾಷೆಯ ಮಹತ್ವವನ್ನೇ ಅರಿಯದೇ ಮಾಡಿಕೊಳ್ಳುತ್ತಿರುವ ತಪ್ಪುಗಳಿಂದ ಖಾಸಗಿ ವ್ಯವಸ್ಥೆಯಿಂದ ಪಡೆಯುವ ಸೇವೆಗಳ ವಿಷಯದಲ್ಲೂ ಜನಸಾಮಾನ್ಯರ ಅನುಭವ ಸರ್ಕಾರಿ ವ್ಯವಸ್ಥೆಗಿಂತ ಹೆಚ್ಚೇನು ಬೇರೆಯಾಗಿಲ್ಲ. ಜನರ ನುಡಿಯಲ್ಲಿ ತಮ್ಮೆಲ್ಲ ಸೇವೆಗಳನ್ನು ಕೊಡಿ ಎಂದು ಇವರಿಗೆ ಹೇಳಬೇಕಿದ್ದ ಸರ್ಕಾರವೂ ಈ ಬಗ್ಗೆ ಹೆಚ್ಚು ಗಮನ ಹರಿಸದೇ ಇರುವುದರಿಂದ ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಭಾಷೆಯ ತಡೆಗೋಡೆ ದಾಟಿ ಸಾಮಾನ್ಯ ಮನುಷ್ಯನನ್ನು ತಲುಪುವುದು ಮರಿಚೀಕೆಯೇ ಸರಿ ಅಂಬಂತಾಗಿದೆ. ಆದರೆ ಪಕ್ಕದ ತಮಿಳುನಾಡು, ಮಹಾರಾಷ್ಟ್ರದಂತಹ ರಾಜ್ಯಗಳು ಈ ನಿಟ್ಟಿನಲ್ಲಿ ನಮಗಿಂತ ಮುಂದಿದ್ದಾರೆ. ಜಪಾನ್, ಜರ್ಮನಿ, ಕೊರಿಯಾ, ಫ್ರಾನ್ಸ್ ನಂತಹ ಮುಂದುವರಿದ ದೇಶಗಳು ಈ ನಿಟ್ಟಿನಲ್ಲಿ ನಮಗೆ ಆದರ್ಶಪ್ರಾಯರಾಗುವಂತಿವೆ.

ತಂತ್ರಜ್ಞಾನದ ಫಲ ನಮ್ಮ ಭಾಷೆಯಲ್ಲೇ ನಮ್ಮ ಜನರಿಗೆ ದೊರಕದಿದ್ದರೆ ಇವುಗಳಿಂದ ಆಗುವ ಪ್ರಯೋಜನ ಶೂನ್ಯ. ಹಾಗಾಗಿ ಸರ್ಕಾರ ತನ್ನ ಕಾರ್ಯಯೋಜನೆಯಲ್ಲಿ ಸಮಗ್ರವಾದ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ. ಜನರಿಗೆ ನಾವು ಉಪಕಾರ ಮಾಡುತ್ತಿದ್ದೇವೆ ಅನ್ನೋ ಮನೋಭಾವ ಹೋಗಿ ಜನರ ಉಪಯೋಗಕ್ಕಾಗಿ ನಮ್ಮನ್ನು ಇಲ್ಲಿ ಕೂರಿಸಲಾಗಿದೆ ಅನ್ನುವ ಭಾವನೆ ನಮ್ಮ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಬರಬೇಕಾಗಿದೆ.

ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಆಡಳಿತವನ್ನು ಜನರಿಗೆ ಮುಟ್ಟಿಸಲು ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ತಂತ್ರಾಂಶಗಳನ್ನು ಬಳಸುವುದರ ಮೂಲಕ ಗಣಕೀಕರಣಗೊಳಿಸಿ ಕನ್ನಡಿಗರಿಗೆ ಕೊಡುವ ಎಲ್ಲಾ ಸೇವೆಗಳನ್ನು ಕನ್ನಡದಲ್ಲಿ ಸಿಗುವಂತೆ ಮಾಡಬೇಕು. ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಎಲ್ಲ ಅಂತರ್ಜಾಲ ತಾಣಗಳು ಕನ್ನಡದಲ್ಲಿ ದೊರಕುವಂತೆ ಮಾಡಬೇಕು. ಇದಲ್ಲದೇ ಇಂತಹುದೇ ಹತ್ತಾರು ಸೇವೆಗಳನ್ನು ಕೊಡುತ್ತಿರುವ ಖಾಸಗಿ ಸಂಸ್ಥೆಗಳು ಸಹ ಇಂತಹ ತಂತ್ರಜ್ಞಾನದ ಅನುಕೂಲಗಳನ್ನು ಜನರಿಗೆ ಕಲ್ಪಿಸುವಂತೆ ನೀತಿ ನಿಯಮಗಳನ್ನು ಸರ್ಕಾರ ರೂಪಿಸಬೇಕು ಹಾಗೂ ಕನ್ನಡದಲ್ಲಿ ಸೇವೆ ನೀಡದಿರುವುದು ಗ್ರಾಹಕ ಹಕ್ಕುಗಳ ಉಲ್ಲಂಘನೆಯಂತಹ ಕಾನೂನು ಜಾರಿಗೆ ತರಬೇಕು. ಆಡಳಿತದ ಪ್ರತಿಯೊಂದು ಹಂತದಲ್ಲೂ, ಜನರ ಜೊತೆ ವ್ಯವಹರಿಸುವಾಗ, ಪತ್ರ ವ್ಯವಹಾರ ನಡೆಸುವಾಗ, ತಂತ್ರಾಂಶಗಳು ಹಾಗೂ ಅಂತರ್ಜಾಲದಲ್ಲಿ ಕನ್ನಡವನ್ನು ಬಳಸುವ ಬಗ್ಗೆ ಒಂದು ಭಾಷಾನೀತಿಯನ್ನು ಜಾರಿಗೆ ತರಬೇಕು. ಜನರಿಗೆ ಈ ತಂತ್ರಜ್ಞಾನದ ಉಪಯೋಗವನ್ನು ತಿಳಿಸಲು ಕೈಪಿಡಿಗಳನ್ನು, ಸಹಾಯ ಸಾಮಾಗ್ರಿಗಳನ್ನು, ಪ್ರತಿ ಹಳ್ಳಿಗೊಂದರಂತೆ ಕಂಪ್ಯೂಟರ್ ಕೇಂದ್ರ ತೆರೆದು ಶಿಕ್ಷಣ ನೀಡಬೇಕು ಹಾಗೂ ಸಹಾಯಕರನ್ನು ನೇಮಿಸಬೇಕು. ಇವುಗಳ ಜೊತೆಗೆ ನಮ್ಮ ಜನರೂ ಸಹ ತಾವು ಉಪಯೋಗಿಸುವ ಎಲ್ಲಾ ಸೇವೆಗಳನ್ನು ಕನ್ನಡದಲ್ಲೇ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಆಗ್ರಹಿಸಬೇಕು.

ಈ ನಾಡಿನ ಆಡಳಿತ ಭಾಷೆಯಾಗಿರುವ ಕನ್ನಡವನ್ನ ಸಂಪೂರ್ಣವಾಗಿ ಆಡಳಿತದಲ್ಲಿ ಹಾಗೂ ತಂತ್ರಜ್ಞಾನದಲ್ಲಿ ಜಾರಿಗೆ ತರದೇ ಹೋದರೆ ಪರಿಣಾಮಕಾರಿಯಾದ ಆಡಳಿತವನ್ನು ಸರ್ಕರಕ್ಕೆ ನೀಡಲು ಸಾಧ್ಯವಿಲ್ಲ ಅನ್ನೋ ಮಾತನ್ನ ಮತ್ತೊಮ್ಮೆ ನೆನಪಿಸಲು ಇಚ್ಚಿಸುತ್ತೇನೆ.

ಗುರುವಾರ, ನವೆಂಬರ್ 17, 2011

ನಮ್ಮ ಸರ್ಕಾರಕ್ಕಿರುವ ಕನ್ನಡ ಕಾಳಜಿ ಎಷ್ಟು???

ಸುಮಾರು ೩.೫ ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಹೊಸತರಲ್ಲಿ ಬಿಜೆಪಿ ಸರ್ಕಾರ ತಾನು ರೈತ ಪರ, ಕನ್ನಡ ಪರ, ನಾಡು-ನುಡಿಗೆ ಧಕ್ಕೆಯಾದಲ್ಲಿ ಅದರ ಪರವಾಗಿ ತಾನೆಂದಿಗೂ ಮುಂದೆ ಅನ್ನುವ ರೀತಿಯಲ್ಲಿ ಹೇಳೀಕೆಗಳನ್ನು ನೀಡಿತ್ತು, ಹೊಸ ಸರ್ಕಾರದ ಈ ಮಾತನ್ನ ಜನರು ಸಹ ನಂಬಿದ್ದರು. ಆದರೆ ಅದಾದ ಸ್ವಲ್ಪ ದಿನದಲ್ಲಿಯೇ ಅದು ತನ್ನ ನಿಜವಾದ ಬಣ್ಣವನ್ನು ಬಯಲು ಮಾಡುತ್ತ ಹೊರಟಿತು. ಸರ್ಕಾರ ಮೊದಲಿಗೆ ರೈತರ ತೀವ್ರ ವಿರೋಧವನ್ನು ಎದುರಿಸಬೇಕಾಯಿತು. ಇದಾದ ನಂತರ ಹಲವಾರು ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ತನ್ನ ಬೇಳೆಕಾಳು ಬೇಯಿಸಿಕೊಳ್ಳಲು ಭಾಷಾ ಅಲ್ಪಸಂಖ್ಯಾತರನ್ನು ಓಲೈಸುತ್ತಾ ತನ್ನ ವೋಟ್ ಬ್ಯಾಂಕ್ ರಾಜಕಾರಣವನ್ನು ತೋರಿಸಿತು, ಕನ್ನಡ ಪರ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡಿತು, ಹೀಗೆ ಹಲವಾರು ವಿಷಯಗಳಲ್ಲಿ ಜನವಿರೋಧಿತನ ತೋರಿಸುತ್ತಲೇ ಬಂದಿರುವ ಬಿಜೆಪಿ ಸರ್ಕಾರ ನಮ್ಮನ್ನು ಆಳುತ್ತಿರುವ ಸರ್ಕಾರ ನಜಕ್ಕೂ ನಮ್ಮದೇ? ಅನ್ನುವ ಪ್ರಶ್ನೆಯನ್ನು ನಮ್ಮಲ್ಲಿ ಹುಟ್ಟು ಹಾಕಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯಾಗಿ ನಮ್ಮ ಕಣ್ಣ ಮುಂದಿರುವ ಬೆಳಗಾವಿಯ ಘಟನೆ. ಕರ್ನಾಟಕ ರಾಜ್ಯೋತ್ಸವದ ದಿನದಂದು ನಮ್ಮ ರಾಜ್ಯದ ಬೆಳಗಾವಿ ಜೆಲ್ಲೆಯ ಮಹಾಪೌರರಾಗಿರುವ ಶ್ರೀಮತಿ ಮಂದಾ ಬಾಳೆಕುಂದ್ರಿ ಅವರು ಎಂಇಎಸ್ ನಂತಹ ಪುಂಡ ಸಂಘಟನೆ ಜೊತೆ ಸೇರಿ ನಾಡವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಇದರ ಬಗ್ಗೆ ಪತ್ರಿಕೆಗಳಲ್ಲಿ ವರದಿ ಬಂದ ನಂತರವೂ ಸಹ ಸರ್ಕಾರ ಇನ್ನು ತನಿಖೆ ನಡೆಸುತ್ತಲೇ ಇದೆ. ಆದರೆ ಇದನ್ನ ವಿರೋಧಿಸಿ ಕರವೇಯಂತಹ ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಇಳಿದರೆ ತಕ್ಷಣವೇ ಬಂಧಿಸಿ ಹಲವಾರು ಆಪಾದನೆಗಳನ್ನು ಹಾಕಿ ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತದೆ. ಇದು ನಮ್ಮ ಸರ್ಕಾರದ ಕನ್ನಡ ಪರ ನೀತಿ. ಕೇವಲ ಇದೊಂದೆ ಅಲ್ಲ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಅಧಿಕಾರಕ್ಕೆ ಬರಲು ನಮ್ಮ ಬಿಜೆಪಿ ಪಕ್ಷ ಎಂಇಎಸ್ ನಂತಹ ಸಂಘಟನೆ ಜೊತೆ ಕೈಜೋಡಿಸಿ ಅಧಿಕಾರಕ್ಕೆ ಬರುತ್ತದೆ. ಒಂದು ಕಡೆಯಲ್ಲಿ ಎಂಇಎಸ್ ಅನ್ನು ವಿರೋಧಿಸುವ ನಾಟಕವಾಡುತ್ತ ಇನ್ನೊಂದು ಕಡೆ ಸಾಮರಸ್ಯದಿಂದ ಬದುಕುತ್ತಿರುವ ಕನ್ನಡ ಹಾಗೂ ಮರಾಠಿಗರ ನಡುವೆ ಹುಳಿ ಹಿಂಡುತ್ತಿರುವ ಎಂಇಎಸ್ ನಂತಹ ಸಂಘಟನೆಯೊಂದಿಗೆ ಜೊತೆ ಕೈಜೋಡಿಸುವ ಬಿಜೆಪಿ ಪಕ್ಷ ಯಾವ ನೈತಿಕತೆಯನ್ನು ಉಳಿಸಿಕೊಂಡಿದೆ? ಕೆಲವು ಸಾವಿರ ಮರಾಠಿ ಮೂಲಭೂತವಾಗಳ ಓಟಿಗಾಗಿ ಕೋಟ್ಯಾಂತರ ಕನ್ನಡಿಗರ ಭಾವನೆಗೆ ಬೆಂಕಿ ಇಡುತ್ತಿರುವ ಬಿಜೆಪಿ ಪಕ್ಷಕ್ಕೆ ಕನ್ನಡಿಗರೆಂದರೆ ಅಸಡ್ಡೆಯೇ?

ಮಹಾರಾಷ್ಟ್ರದಲ್ಲಿ “ಕರ್ನಾಟಕ ರಾಜ್ಯ” ಫಲಕ ಹಾಕಿ:
ಹೀಗೆ ಹೇಳಿದವರು ಬೇರಾರು ಅಲ್ಲ ಸ್ವತ: ಬೆಳಗಾವಿಯನ್ನು ಸಂಸತ್ತಿನಲ್ಲಿ ಪ್ರತಿನಿಧಿಸುತ್ತಿರುವ ಬಿಜೆಪಿ ಪಕ್ಷದ ಸಂಸದ ಶ್ರೀ ಸುರೇಶ್ ಅಂಗಡಿಯವರು. ಇಂದಿನ ಕನ್ನಡ ಪ್ರಭದಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ ಕನ್ನಡ ಪರ ಸಂಘಟನೆಯೊಂದು ಬೆಳಗಾವಿ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿರು ಮಹಾರಾಷ್ಟ್ರ ರಾಜ್ಯ ಅನ್ನುವ ಫಲಕವನ್ನು ತಗೆಸಿ ಎಂದು ಜಿಲ್ಲಾಧಿಕಾರಿಗೆ ಮನವಿ ಕೊಡಲು ಹೋದಾಗ ಅಲ್ಲಿದ್ದ ನಮ್ಮ ಸಂಸದರಿಂದ ಬಂದ ಉತ್ತರ
ನಿಮಗೆ ಧೈರ್ಯವಿದ್ದರೆ ಮಹಾರಾಷ್ಟ್ರಕ್ಕೆ ಹೋಗಿ “ಕರ್ನಾಟಕ ರಾಜ್ಯ” ಎಂಬ ನಾಮ ಫಲಕ ಹಾಕಿರಿ. ಕನ್ನಡಿಗರು ಇಲ್ಲಿ ಗಲಾಟೆ ಮಾಡಿದರೆ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ತೊಂದರೆ ಆಗುತ್ತಿದೆ. ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡಿದರೆ ಅವರು ಕೋರ್ಟ್ ಗೆ ಹೋಗುತ್ತಾರೆ

ಹಾಗಾದರೆ ನಮ್ಮ ಮಾನ್ಯ ಸಂಸದರಿಗೆ ಎಂಇಎಸ್ ಮಾಡಿದ್ದು ತಪ್ಪಾಗಿ ಕಂಡಿಲ್ಲವೇ? “ಕರ್ನಾಟಕ ರಾಜ್ಯ” ಅನ್ನೋ ನಾಮ ಫಲಕ ಕರ್ನಾಟಕದಲ್ಲಿ ಬಿಟ್ಟು ಮಹಾರಾಷ್ಟ್ರದಲ್ಲಿ ಹಾಕಿದರೆ ಆಗುವ ಉಪಯೋಗವೇನು? ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯದ ಹೆಸರಿನ ನಾಮ ಫಲಕಗಳಿದ್ದರೆ ಅದನ್ನು ತಗೆಯದೇ ಬಿಡಬೇಕೆ? ಅವರು ಕೋರ್ಟ್ ಗೆ ಹೋಗುತ್ತಾರೆ ಅನ್ನೋ ಕಾರಣಕ್ಕೆ ನಾವು ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದೇ? ಈ ರೀತಿಯ ಉದ್ಧಟತನದ ಕೆಲಸಗಳು ಪದೇ ಪದೇ ಬೆಳಗಾವಿಯಲ್ಲಿ ಆಗುತ್ತಿದ್ದರು ಸಹ ನಮ್ಮ ಸರ್ಕಾರ ಏನು ಕ್ರಮ ಕೈಗೊಂಡಿದೆ? ನಮ್ಮ ಕನ್ನಡ ಪರ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಲು ತೋರಿಸುವ ತರಾತುರಿಯನ್ನು ಸರ್ಕಾರ ಈ ನಾಡವಿರೋಧಿಗಳ ಮೇಲೆ ಕ್ರಮಕೈಗೊಳ್ಳಲು ಯಾಕೆ ಮುಂದಾಗುತ್ತಿಲ್ಲ?

ಹುಸಿ ರಾಷ್ಟ್ರೀಯತೆಯ ಸೋಗಿನಲ್ಲಿ ಜನರನ್ನು ಭಾಷೆಯ ಹೆಸರಿನಲ್ಲಿ ಒಡೆದು ತಮ್ಮ ಬೇಳೆಕಾಳು ಬೇಯಿಸಿಕೊಳ್ಳುವ ಈ ರಾಷ್ಟ್ರೀಯ ಪಕ್ಷಗಳಿಂದ ನಮ್ಮ ನಾಡಿಗಾಗುತ್ತಿರುವ ಅವಮಾನ, ನಮ್ಮ ಜನರಿಗೆ ಆಗುತ್ತಿರುವ ನೋವು, ಹಿಂಸೆಗೆ ಕಡಿವಾಣ ಬೀಳಬೇಕಾದಲ್ಲಿ ನಮ್ಮ ನಾಡು-ನುಡಿ-ನಾಡಿಗರನ್ನು ರಕ್ಷಿಸುವಂತಹ ಒಂದು ಪ್ರಾದೇಶಿಕ ಪಕ್ಷ ನಿಜವಾಗಲೂ ಬೇಕು ಅನ್ನುವ ನಮ್ಮ ಆಸೆ ಇಂತಹ ಘಟನೆಗಳಿಂದ ಗಟ್ಟಿಯಾಗುತ್ತಲೇ ಹೋಗುತ್ತಿದೆ.

ಮಂಗಳವಾರ, ಫೆಬ್ರವರಿ 15, 2011

ಜನರ ಹಿತವನ್ನೇ ಮರೆತಿರುವ ಜನಪ್ರತಿನಿಧಿಗಳು


ನಮ್ಮ ರಾಜ್ಯದ ಸದ್ಯದ ಭವಿಷ್ಯವನ್ನು ನೆನೆಸಿಕೊಂಡರೆ ಭಯವಾಗಿ ಹೋಗುತ್ತದೆ. ಕಳೆದ ವರ್ಷದ ಅಂತ್ಯದಲ್ಲಿ ಬಂದ ಎರಡನೇ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಅನ್ನುವುದನ್ನ ನಿಮಗೆ ಈಗಾಗಲೇ ತಿಳಿಸಲಾಗಿದೆ. ಹಾಗೆಯೇ ಈ ತೀರ್ಪು ಐತಿಹಾಸಿಕ ಅಂತ ಬಣ್ಣಿಸಿ ನಮ್ಮ ರಾಜ್ಯಸರ್ಕಾರ ಹಾಗು ಇತರೇ ರಾಜಕೀಯ ಪಕ್ಷಗಳು ಸುಮ್ಮನಾಗಿ ಹೋಗಿದ್ದವು. ತೀರ್ಪಿನ ವಿರುದ್ಧವಾಗಿ ಧ್ವನಿ ಎತ್ತಿದವರು ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ತೀರ್ಪನ್ನು ವಿಮರ್ಶಿಸುವುದಾಗಿ ಹೇಳಿಕೆ ನೀಡಿತು. ರಾಜ್ಯ ಸರ್ಕಾರದ ಈ ನಿಲುವು ಸ್ವಾಗತಾರ್ಹವೇ.

ಜನಪ್ರತಿನಿಧಿಗಳ ಸಭೆಯನ್ನು ಕರೆದ ಸರ್ಕಾರ:
ಕೃಷ್ಣಾ ನ್ಯಾಯಾಧಿಕರಣ ಆಲಮಟ್ಟಿ ಜಲಾಶಯದ ಎತ್ತರ, ರಾಜ್ಯಕ್ಕೆ ಹಂಚಿರುವ ನೀರಿನ ಪಾಲು, ಇದರ ಬಳಕೆಗೆ ಅನುಸರಿಸಬೇಕಾದ ವಿಧಾನಗಳ ಕುರಿತು ಕೃಷ್ಣಾ ಕಣಿವೆಯ 17 ಜಿಲ್ಲೆಗಳ ಜನಪ್ರತಿನಿಧಗಳ ಅಭಿಪ್ರಾಯ ಸಂಗ್ರಹಿಸಲು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಫೆಬ್ರವರಿ 14ರಂದು ಜನಪ್ರತಿನಿಧಗಳ ಸಭೆ ಕರೆದಿದ್ದರು. ಈ ಸಭೆಯ ಮತ್ತೊಂದು ಮುಖ್ಯವಾದ ಅಂಶವೇನೆಂದರೆ, ಇದರಲ್ಲಿ ಜನಪ್ರತಿನಿಧಿಗಳು ಕೇವಲ ಹಾಜರಿರದೆ ಚರ್ಚೆಯಲ್ಲಿ ಪಾಲ್ಗೊಂಡು ಜನರ ನಿಲುವನ್ನು ರೂಪಿಸುವ ಉದ್ದೇಶವನ್ನು ಹೊಂದಿತ್ತು.

ಸಭೆಗೆ ಬಾರದ ಜನಪ್ರತಿನಿಧಿಗಳು:
ರಾಜ್ಯದ ಬಹುಪಾಲು ಜಿಲ್ಲೆಗಳನ್ನು ಹಸನುಗೊಳಿಸುವ ಶಕ್ತಿ ಇರುವ ಕೃಷ್ಣಾ ನದಿಯ ತೀರ್ಪಿನಲ್ಲಿ ಸುಮಾರು 100 ಟಿಎಂಸಿ ಅಡಿ ನೀರು ಕಡಿಮೆ ಸಿಕ್ಕಿದ್ದರೂ ಈ ಭಾಗದ ಜನಪ್ರತಿನಿಧಿಗಳು ತೀರ್ಪಿನ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ರಾಜ್ಯದ ರೈತರ, ಕೃಷಿಯ ಹಾಗೂ ಜನರ ಭವಿಷ್ಯವನ್ನ ನಿರ್ಧರಿಸುವ ಇಂತಹ ಜವಾಬ್ದಾರಿಯುತ ಸಭೆಗಳಿಗೆ ಜನಪ್ರತಿನಿಧಿಗಳು ಹಾಜರಾಗದೆ ಇರುವಂತೆ ಇವರುಗಳು ಮಾಡುವ ಘನಂದಾರಿ ಕೆಲಸಗಳಾದರು ಏನು? ಇದರಲ್ಲಿ ನಾಡಿನ ಎಲ್ಲಾ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಸೇರಿದ್ದಾರೆ. ಕೆಲವೇ ಶಾಸಕರನ್ನ ಬಿಟ್ಟರೆ ಉಳಿದ ಶಾಸಕರು, ಸಚಿವರುಗಳು ಹಾಗು ಸಂಸದರು ಈ ಸಭೆ ಹಾಜರಾಗಲೇ ಇಲ್ಲ. ಆಯಾ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಬೇಕಾಗಿರುವುದು ಆಯಾ ಪ್ರದೇಶದ ಶಾಸಕರ, ಸಂಸದರ ಹಾಗೂ ಅಲ್ಲಿನ ಜನಪ್ರತಿನಿಧಿಗಳ ಕರ್ತವ್ಯ, ಅದೊಂದನ್ನು ಬಿಟ್ಟು ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ. ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಯ ಮೂಲಕ ಕರ್ನಾಟಕದ ಅಭಿವೃದ್ಧಿ ಕಾಣಬಹುದು, ಕರ್ನಾಟಕದ ಅಭಿವೃದ್ಧಿಯ ಮೂಲಕ ದೇಶದ ಅಭಿವೃದ್ಧಿಯನ್ನು ಕಾಣಬಹುದು. ಆದರೆ ಕೊಟ್ಟ ಮಾತಿನಂತೆ ನಮ್ಮ ಜನಪ್ರತಿನಿಧಿಗಳು ನಡೆದು ಕೊಳ್ಳುತ್ತಿದ್ದಾರೆಯೇ? ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆಯೇ?